ಫೆಬ್ರವರಿ ತಿಂಗಳಲ್ಲೇ ಸಿದ್ದರಾಮಯ್ಯ ಬಜೆಟ್ ಮಂಡನೆ?
ಬೆಂಗಳೂರು, ಜ.5: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳಲ್ಲೇ ರಾಜ್ಯ ಬಜೆಟ್ ಮಂಡನೆ ಯಾಗುವ ಸಾಧ್ಯತೆ ಹೆಚ್ಚಿದೆ. ಫೆಬ್ರವರಿ 14ರಂದು ರಾಜ್ಯ ಬಜೆಟ್ ಮಂಡನೆಗೆ ತಾತ್ಕಾಲಿಕವಾಗಿ ದಿನಾಂಕ ನಿಗದಿ ಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಚೇರಿಯ ಉನ್ನತ ಮೂಲಗಳು ತಿಳಿಸಿವೆ.
ಈಗಾಗಲೇ ಇಲಾಖಾವಾರು ಬಜೆಟ್ ಸಿದ್ದತೆ ಕಾರ್ಯ ನಡೆಯುತ್ತಿದೆ. ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾದರೆ ಬಜೆಟ್ ಮಂಡನೆ ಅನುಮೋದನೆಗೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಫೆಬ್ರವರಿಯಲ್ಲೇ ಬಜೆಟ್ ಮಂಡಿಸಿ ಅನುಮೋದನೆ ಪಡೆಯಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಿಸಿದೆ.
ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಜನವರಿ ಕೊನೆ ವಾರದಲ್ಲಿ ಪ್ರಾರಂಭವಾದರೆ, ಫೆಬ್ರವರಿ 3ನೇ ವಾರದಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಹೀಗಾಗಿ ಫೆಬ್ರವರಿ ಅಂತ್ಯದ ವೇಳೆಗೆ ಬಜೆಟ್ ಅನುಮೋದನೆ ಪಡೆಯಲು ಉದ್ದೇಶಿಸಲಾಗಿದೆ.
ಕಳೆದ ಬಾರಿಯೂ ಕೂಡ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಗಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇದೇ ರೀತಿ ಬಜೆಟ್ ಮಂಡಿಸಿದ್ದರು. ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಮುನ್ನ ಬಜೆಟ್ ಅನುಮೋದನೆ ಪಡೆಯಲು ಉದ್ದೇಶಿಸಿದ್ದು, ಕೇಂದ್ರ ಬಜೆಟ್ ಗೂ ಮುನ್ನ ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.

ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಯೋಜನೆಗಳನ್ನು ಮುಂದುವರೆಸುವುದು ಹಾಗೂ ಕೆಲವೊಂದು ಹೊಸ ಯೋಜನೆಗಳನ್ನು ಪ್ರಕಟಿಸಲು ಸರ್ಕಾರ ಯೋಜಿಸುತ್ತಿದೆ. ಪ್ರಸಕ್ತ ಸಾಲಿನ ಬಜೆಟ್ ಘೋಷಿತ ಕಾರ್ಯಕ್ರಮಗಳ ಅನುಷ್ಠಾನಕ್ಕೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಮಾರ್ಚ್ ಅಂತ್ಯದ ವೇಳೆಗೂ ಬಜೆಟ್ ಘೋಷಣೆಯಂತೆ ಕಾರ್ಯಕ್ರಮಗಳು, ಯೋಜನೆಗಳು ಅನುಷ್ಠಾನಗೊಳ್ಳಲಿವೆ.ಇಲಾಖಾವಾರು ಬಜೆಟ್ ಪೂರ್ವ ಸಿದ್ಧತೆ ಕಾರ್ಯ ಭರದಿಂದ ನಡೆಯುತ್ತಿದೆ.[ಬಜೆಟ್ ನಿರೀಕ್ಷೆಗಳೇನು?]
ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಜನಪರ ಬಜೆಟ್ ನೀಡಿದ ಹುಮ್ಮಸ್ಸಿನಲ್ಲಿರುವ ಸಿದ್ದರಾಮಯ್ಯ ಅವರು ಈ ಬಾರಿ ಕೂಡಾ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುತ್ತಿಲ್ಲ. ಅದರೂ ಕೃಷಿ ಕ್ಷೇತ್ರಕ್ಕೆ ಪ್ರಮುಖ ಆದ್ಯತೆ ನೀಡಲಾಗುತ್ತಿದೆ. ಉಳಿದಂತೆ ನೀರಾವರಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ ಹಾಗೂ ಇಂಧನ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಸಿಗಲಿದೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ, ಅಧಿವೇಶನದ ಅವಧಿ ಪ್ರಕಟಗೊಳ್ಳುತ್ತಿದ್ದಂತೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳ್ಳಲಿದೆ. ಸಭೆ ಮತ್ತು ಮೆರವಣಿಗೆ, ಶಸ್ತ್ರ, ದೊಣ್ಣೆ, ಚಾಕು ಮತ್ತಿತರ ಮಾರಕಾಸ್ತ್ರಗಳ ಸಾಗಣೆ, ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ವ್ಯಕ್ತಿಗಳ ಅಥವಾ ಪ್ರತಿಕೃತಿ ಪ್ರದರ್ಶನ, ಪ್ರಚೋದನಕಾರಿ ಬಹಿರಂಗ ಘೋಷಣೆ, ಭಿತ್ತಿಪತ್ರ ಪ್ರದರ್ಶ ನವನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ.












Click it and Unblock the Notifications