'ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೊಡ್ಡ ಆಘಾತ'
ಬೆಂಗಳೂರು, ಜನವರಿ 27: ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ಬಹಳ ದೊಡ್ಡ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಬಿ ವೈ ವಿಜಯೇಂದ್ರ ಅವರು, ಬೇಗನೆ ಬಿ ರಿಪೋರ್ಟ್ ಹಾಕಿಸಿಕೊಂಡು ಪ್ರಕರಣ ಮುಚ್ಚಿಹಾಕುವ ಪ್ರಯತ್ನದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೊಡ್ಡ ಆಘಾತವಾಗಿದೆ. ಲೋಕಾಯುಕ್ತ ಸಂಸ್ಥೆಯ ತನಿಖೆಯನ್ನು ಮಾಧ್ಯಮಗಳೇ ತೋರಿಸಿವೆ. ರಾತ್ರಿ 8- 9 ಗಂಟೆಗೆ ಸಿದ್ದರಾಮಯ್ಯನವರ ಬಾಮೈದ ನೋಟಿಸ್ ಕೊಡದೆ ಇದ್ದರೂ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿ ಕುಟುಂಬಕ್ಕೆ ಎಷ್ಟು ಮುಕ್ತ ವ್ಯವಸ್ಥೆ ಇತ್ತೆಂದು ಅವತ್ತು ಕೂಡ ಬಹಿರಂಗವಾಗಿದೆ. ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಪಾದಯಾತ್ರೆ ಮಾಡಿದ್ದವು. ನಮ್ಮ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿಯವರು 14 ನಿವೇಶನ ಹಿಂತಿರುಗಿಸುತ್ತೇವೆ ಎಂದು ರಾತ್ರೋರಾತ್ರಿ ಮೂಡಕ್ಕೆ ಪತ್ರ ಬರೆದಿದ್ದರು. ಆ ಪತ್ರದ ಮೂಲಕ ಮೂಲಕ ಹಗರಣದಿಂದ ಹೊರಕ್ಕೆ ಬಂದ ಭ್ರಮೆಯಲ್ಲಿ ಮುಖ್ಯಮಂತ್ರಿಗಳೂ ಇದ್ದರು. ಇವತ್ತಿನ ಇ.ಡಿ. ನೋಟಿಸ್, ಇದರಿಂದ ಆಘಾತ ಆಗಿರುವುದರಲ್ಲಿ ಎರಡು ಮಾತಿಲ್ಲ ಎಂದು ನುಡಿದರು.
ಇ.ಡಿಗೆ ಅವರದೇ ಆದ ನಿಯಮಗಳಿರುತ್ತವೆ. ಅದರ ಪ್ರಕಾರ ಅವರು ಮುಂದುವರೆಯುತ್ತಾರೆ. ಇ.ಡಿ. ನೋಟಿಸ್ ರಾಜಕೀಯಪ್ರೇರಿತ ಎಂಬುದಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾವಿರಾರು ಕೋಟಿ ಬಡವರ ಪಾಲಾಗಬೇಕಾದ ನಿವೇಶನಗಳ ಅಕ್ರಮ ಹಂಚಿಕೆ ನಡೆದಿತ್ತು. ಈ ದೊಡ್ಡ ಹಗರಣದ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆತುರಾತುರವಾಗಿ ಲೋಕಾಯುಕ್ತ ಸಂಸ್ಥೆಯಿಂದ ಬಿ ರಿಪೋರ್ಟ್ ಪಡೆದು ಮುಡಾ ಹಗರಣದಿಂದ ಹೊರಕ್ಕೆ ಬರಬಹುದೆಂಬ ಲೆಕ್ಕಾಚಾರದಲ್ಲಿದ್ದರು. ಇದೇ ಸಂದರ್ಭದಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿಗೂ ನೋಟಿಸ್ ಕೊಟ್ಟಿದೆ ಹಾಗೂ ತನಿಖೆಗೆ ಹಾಜರಾಗಲು ತಿಳಿಸಿದೆ ಎಂದು ವಿವರಿಸಿದರು.
ಜೊತೆಗೇ ಸಚಿವ ಬೈರತಿ ಸುರೇಶ್ರಿಗೂ ಇ.ಡಿ. ನೋಟಿಸ್ ಕೊಟ್ಟಿದೆ. ಹಾಗಾಗಿ ಅನಿವಾರ್ಯವಾಗಿ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಧರ್ಮಪತ್ನಿ ಅವರು ತನಿಖಾ ಸಂಸ್ಥೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಲೋಕಾಯುಕ್ತ ಕೊಟ್ಟ ವರದಿಯ ಮಾಹಿತಿ ಇಲ್ಲ. ರಾಜ್ಯ ಹೈಕೋರ್ಟಿಗೆ ಲಕೋಟೆಯಲ್ಲಿ ವರದಿ ನೀಡಿದ ಮಾಹಿತಿಗಳು ಬರುತ್ತಿವೆ. ನಾನು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನೂ ಗಮನಿಸಿದ್ದೇನೆ. ರಾಜಕೀಯಪ್ರೇರಿತ ಇ.ಡಿ. ಎಂದು ಅವರು ಹೇಳಿದ್ದಾರೆ. ಅವರ ಮುಖದಲ್ಲಿ ಮಂದಹಾಸವೂ ಕಾಣುತ್ತಿದೆ ಎಂದು ತಿಳಿಸಿದರು. ಅಬ್ಬಾ ಸಿದ್ದರಾಮಯ್ಯನವರ ಕುಟುಂಬಕ್ಕೆ ಇ.ಡಿ. ನೋಟಿಸ್ ಕೊಟ್ಟಿದೆ ಎಂಬ ಸಂತೋಷ ಅವರ ಮುಖದಲ್ಲಿತ್ತು ಎಂದು ಹೇಳಿದರು.
ಇನ್ನೂ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು.
2024-25 ರಲ್ಲಿ ಕಾಂಗ್ರೆಸ್ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 50 ಕೋಟಿ ರೂ. ನೀಡಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆಗಿದೆ. ನಿಗಮಗಳಿಗೆ 1,700 ಕೋಟಿ ರೂ. ನೀಡಬೇಕಿದ್ದು, 643 ಕೋಟಿ ರೂ. ನೀಡಲಾಗಿದೆ. ಅಂದರೆ ಎಲ್ಲ ನಿಗಮಗಳಿಗೆ ಒಟ್ಟು 1,055 ಕೋಟಿ ರೂ. ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್ಗಳು ನೀಡುತ್ತಿವೆ ಎಂದರು.












Click it and Unblock the Notifications