ಮೇ 7ರಂದು ಮೋದಿ ಭೇಟಿಯಾಗಲಿದ್ದಾರೆ ಸಿದ್ದರಾಮಯ್ಯ
ಬೆಂಗಳೂರು, ಮೇ 04 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದು, ಬರ ಪರಿಹಾರ ಕಾರ್ಯಕ್ಕಾಗಿ ಕರ್ನಾಟಕಕ್ಕೆ 1000 ಕೋಟಿ ರೂ.ಗಳ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಲಿದ್ದಾರೆ.
ಮೇ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದೆ. ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಪರಿಹಾರ ಕಾಮಗಾರಿಗಳಿಗಾಗಿ 1000 ಕೋಟಿ ರೂಗಳನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ನಿಯೋಗ ಒತ್ತಾಯಿಸಲಿದೆ. [ಕುಡಿಯುವ ನೀರಿನ ನಿರೀಕ್ಷೆಯಲ್ಲಿ ಖಾಲಿ ಬಿಂದಿಗೆ ಸಾಲು]

ರಾಜ್ಯದಲ್ಲಿ ಆವರಿಸಿರುವ ಬರಗಾಲದ ಅಧ್ಯಯನ ಮಾಡುವ ಸಲುವಾಗಿ ಸಚಿವ ಸಂಪುಟದ ನಾಲ್ಕು ಉಪಸಮಿತಿಗಳು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿವೆ. ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿ ಕುರಿತು ಚರ್ಚೆ ನಡೆಯಲಿದೆ. ['ಪ್ರತಿ ಕುಟುಂಬಕ್ಕೆ ಕನಿಷ್ಠ 12 ಬಿಂದಿಗೆ ನೀರು ನೀಡಿ']
ಸಮಿತಿಯ ವರದಿ ಪ್ರಕಾರ ಬರಗಾಲದಿಂದಾಗಿ ಈಗಾಗಲೇ 5 ಸಾವಿರಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಟ್ಯಾಂಕರ್ಗಳಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡುವ ಕೆಲಸ ನಡೆಯುತ್ತಿದೆ. ಈ ಕೆಲಸ ಮತ್ತಷ್ಟು ಸಮರ್ಪಕವಾಗಿ ನಡೆಯಲು ಕೇಂದ್ರದ ನೆರವು ಬೇಕು ಎಂಬುದು ರಾಜ್ಯದ ವಾದ. [ನೀರಿನ ಅಭಾವ, ನೇತ್ರಾವತಿ ನದಿಗೆ ಕಾವಲು!]
ಕೇಂದ್ರ ಸರ್ಕಾರ ಮೊದಲ ಕಂತಿನಲ್ಲಿ ನೀಡಿದ 1,540 ಕೋಟಿ ರೂಗಳನ್ನು ರೈತರ ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ರೂಪವಾಗಿ ಒದಗಿಸಿದ್ದು, ಉಳಿದಂತೆ ಎರಡನೇ ಕಂತಿನಲ್ಲಿ 723 ಕೋಟಿ ರೂ. ಹಣವನ್ನು ಇನ್ನೂ ಬಿಡುಗಡೆ ಮಾಡಬೇಕಿದೆ.

ಆದರೆ, ಆಗಿರುವ ನಷ್ಟಕ್ಕೆ ಹೋಲಿಸಿದರೆ ಕೇಂದ್ರ ಸರ್ಕಾರ ನೀಡಿರುವ ಹಣ ತೀರಾ ಕಡಿಮೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತಷ್ಟು ನೆರವು ನೀಡಲೇಬೇಕು. ಇಂತಹ ಭೀಕರ ಕ್ಷಾಮ ಆವರಿಸಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮುಕ್ತ ಹಸ್ತದಿಂದ ನೆರವು ನೀಡಬೇಕು ಎಂದು ಮುಖ್ಯಮಂತ್ರಿಗಳು ಪ್ರಧಾನಿ ಅವರಿಗೆ ವಿವರಣೆ ನೀಡಲಿದ್ದಾರೆ.
ಸಿದ್ದರಾಮಯ್ಯ ಪ್ರವಾಸ ಮಾಡಿದ್ದಾರೆ : ಅಂದಹಾಗೆ ಸಿದ್ದರಾಮಯ್ಯ ಅವರು ಈಗಾಗಲೇ ಏ.15 ರಿಂದ ಏ.17, ಏಪ್ರಿಲ್ 25 ರಿಂದ 27ರವರೆಗೆ ಎರಡು ಹಂತದಲ್ಲಿ ರಾಜ್ಯಪ್ರವಾಸ ಮಾಡಿ ಬರಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications