ಕೆಲಸ ಮಾಡದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಿಎಂ
ಬೆಂಗಳೂರು, ಜ.22 : ಜಡತ್ವದಿಂದ ಹೊರಬಂದು ಚುರುಕಾಗಿ ಕೆಲಸ ಮಾಡದಿದ್ದರೆ ಅಂತಹ ಅಧಿಕಾರಿಗಳನ್ನು ಶಿಕ್ಷೆಗೆ ಗುರಿಪಡಿಸಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಕಂದಾಯ, ಗ್ರಾಮೀಣಾಭಿವೃದ್ಧಿ , ಶಿಕ್ಷಣ, ಆಹಾರ ಸೇರಿದಂತೆ ಹತ್ತು ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸ್ಥಳೀಯ ಮಟ್ಟದಲ್ಲೇ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪ್ರತಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳು ಬೆಂಗಳೂರಿನ ಕಚೇರಿಯಲ್ಲೇ ಕುಳಿತು ನಿರ್ದೇಶನ ನೀಡುವ ಸಂಪ್ರದಾಯವನ್ನು ಬಿಟ್ಟು ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಬೇಕು. ಇದರಿಂದ ಅಧಿಕಾರಿ, ನೌಕರರು ಮತ್ತಷ್ಟು ತ್ವರಿತಗತಿಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಸಿಎಂ ಸೂಚನೆ ನೀಡಿದರು.
ಜನಸಂಪರ್ಕ ಸಭೆ : ಪ್ರತಿ ತಿಂಗಳು ಜನಸಂಪರ್ಕ ಸಭೆ ನಡೆಸುವುದು ಕಡ್ಡಾಯ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ಸಭೆಯಲ್ಲಿ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು ಭಾಗವಹಿಸಬೇಕು. ಜನರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಸೂಚಿಸಬೇಕು. ಜನರು ದೂರು ತೆಗೆದುಕೊಂಡು ಜನತಾದರ್ಶನಕ್ಕೆ ಬರುವುದು ಕಡಿಯೆಯಾಗಬೇಕು ಎಂದು ನಿರ್ದೇಶನ ನೀಡಿದರು.
ಬೇಸಿಗೆ ಸಮೀಪಿಸುತ್ತಿರುವುದರಿಂದ ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ಯೋಜನೆ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು. ಕುಡಿಯುವ ನೀರು ಸರಬರಾಜು, ಗುಳೆ ತಪ್ಪಿಸಲು ಉದ್ಯೋಗ ಸೃಷ್ಟಿ ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಯತ್ತ ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದರು.
ಅಧಿಕಾರಿಗಳ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಹಲವು ಘೋಷಣೆಗಳನ್ನು ಮಾಡಿದರು. ಸಿಎಂ ಮಾಡಿದ ಪ್ರಮುಖ ಘೋಷಣೆಗಳು
* 31 ಸಾವಿರ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು 176 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಇನ್ನು ಒಂದು ಸಾವಿರ ಹಳ್ಳಿಗಳನ್ನು ಯೋಜನೆ ವ್ಯಾಪ್ತಿಗೆ ತರಲು ಸಿದ್ಧತೆ ನಡೆದಿದೆ ಎಂದರು.
* ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೃಷಿ ಪಂಪ್ಸೆಟ್ಗಳಿಗೆ ಮಾರ್ಚ್ ಅಂತ್ಯದ ವೇಳೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಗಡುವು ನೀಡಲಾಗಿದೆ ಎಂದು ತಿಳಿಸಿದರು.
* ಬರ ಪೀಡಿತ ತಾಲೂಕು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿಯು ಕುಡಿವ ನೀರಿನ ಸಮಸ್ಯೆ ನಿವಾರಣೆ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಒಟ್ಟು 182 ಕೋಟಿ ರೂ. ಇದ್ದು, ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಲಾಗುವುದು ಎಂದು ಭರವಸೆ ನೀಡಿದರು.
* ರಾಜೀವ್ಗಾಂಧಿ ಯುವ ಚೈತನ್ಯ ಯೋಜನೆಯಡಿ 2 ಲಕ್ಷ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.












Click it and Unblock the Notifications