ಮಳೆ ಹಾನಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್: ಸಿದ್ಧರಾಮಯ್ಯ ಕೊಟ್ಟ ಸೂಚನೆಗಳೇನು?
ಬೆಂಗಳೂರು, ಜುಲೈ 26: ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿ ಸಬಹುದು ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಬುಧವಾರ ವೀಡಿಯೊ ಸಂವಾದ ನಡೆಸಿದ ಅವರು ಜಿಲ್ಲಾಧಿಕಾರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಪ್ರವಾಹ ಬಂದಾಗ ಬಹಳ ರೈತರನ್ನು ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಹಿಂದಿನ ಸರ್ಕಾರದ ವತಿಯಿಂದ ಪರ್ಯಾಯವಾಗಿ ಕಟ್ಟಲಾಗಿರುವ ಮನೆಗಳಲ್ಲಿ ಯಾರೂ ವಾಸ ಮಾಡಲು ಕೂಡ ಹೋಗಿಲ್ಲ. ಅನಾಹುತಗಳನ್ನು ತಪ್ಪಿಸಲು ಹೆಚ್ಚಿನ ಗಮನ ನೀಡಬೇಕು. ಜಿಲ್ಲಾಧಿಕಾರಿಗಳು ಪದೇ ಪದೇ ಪ್ರವಾಹವಾಗುವ ಸ್ಥಳಗಳಲ್ಲಿ ಜನರನ್ನು ಬಲವಂತವಾಗಿ ಸ್ಥಳಾಂತರ ಮಾಡಿ ಜೀವಹಾನಿ ತಪ್ಪಿಸಬೇಕು ಎಂದು ಸೂಚಿಸಿದರು.

ನೆರೆ ಬಂದು ನೀರು ಹೆಚ್ಚಾದರೆ ಅದರ ಬಳಿ ಜನರು ಹೋಗದಂತೆ ಆಡಳಿತದವರು ತಡೆಯಲು ಕ್ರಮ ವಹಿಸಲು ಸೂಚಿಸಿದರು. ಜನರಿಗೆ ಈ ಬಗ್ಗೆ ಎಚ್ಚರಿಕೆ ನೀಡುವುದು ಹಾಗೂ ಅರಿವು ಮೂಡಿಸುವ ಕೆಲಸ ಮಾಡಿ ಪ್ರಾಣಹಾನಿಯನ್ನು ತಪ್ಪಿಸಬೇಕು. ಪೊಲೀಸ್, ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮಧ್ಯೆ ಸಮನ್ವಯ ಅಗತ್ಯ. ಸಮನ್ವಯವಿದ್ದರೆ ಸಾಕಷ್ಟು ಜೀವಹಾನಿ ತಪ್ಪಿಸಬಹುದು. ಮಣ್ಣು ಕುಸಿತವಾಗುವ ಸ್ಥಳಗಳ ಬಗ್ಗೆ ಇಲಾಖೆಗಳಿಗೆ ಮಾಹಿತಿ ಇರುತ್ತದೆ. ಅಂಥವನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.
ಉಡುಪಿ ಜಿಲ್ಲೆಯಲ್ಲಿ ಒಂಭತ್ತು ಜೀವಹಾನಿಯಾಗಿದೆ. ಅಪಘಾತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಾವುಗಳನ್ನು ತಪ್ಪಿಸುವುದು ಬಹಳ ಮುಖ್ಯ. ಜನವರಿ ಒಂದರಿಂದ ಜುಲೈ 25 ರವರೆಗೆ 64 ಜನ ಮರಣಹೊಂದಿದ್ದಾರೆ. ಆಂತರಿಕವಾಗಿ ಇದನ್ನು ತಪ್ಪಿಸಬೇಕು.
ಸಂಬಂಧಪಟ್ಟ ಅಧಿಕಾರಿಗಳು ಮಳೆ ಸಾಧ್ಯತೆಗಳ ಬಗ್ಗೆ ಪ್ರತಿದಿನ ಪತ್ರಿಕಾ ಗೋಷ್ಠಿ ನಡೆಸಬೇಕು. ಕಾಲು ಜಾರುವ ಕಡೆಗಳಲ್ಲಿ ಹೋಗಬಾರದು, ತುಂಬಿ ಹರಿವ ನದಿಗಳನ್ನು ಹಾಯಬಾರದು ಎಂದು ಸೂಚಿಸಬೇಕು. ಸಾವು ತಡೆಗಟ್ಟಲು ಹೆಚ್ಚಿನ ಶ್ರಮವಹಿಸಬೇಕು ಎಂದು ತಿಳಿಸಿದರು.
ಆದ್ಯತೆಯ ಮೇರೆಗೆ ಶಿಥಿಲಗೊಂಡ ಆಸ್ಪತ್ರೆ, ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ದುರಸ್ತಿ ಮಾಡಿಸಿ. ಮುಂಚಿತವಾಗಿಯೇ ಶಿಥಿಲವಾಗಿರುವ ಶಾಲಾ ಕಟ್ಟಡಗಳು, ಆಸ್ಪತ್ರೆಗಳು, ಅಂಗನವಾಡಿ ಕಟ್ಟಡಗಳನ್ನು ದುರಸ್ತಿ ಮಾಡಿಸಬೇಕು. ತಪ್ಪಿದರೆ ಬೇರೆಡೆಗೆ ಅವುಗಳನ್ನು ಸ್ಥಳಾಂತರ ಮಾಡಿಸಬೇಕು. ಹೀಗಾಗಿ ಬೇಜವಾಬ್ದಾರಿತನದಿಂದ ಅನಾಹುತಗಳು ಸಂಭವಿಸುತ್ತವೆ. ಅನಾಹುತವಾದರೆ ಅಧಿಕಾರಿಗಳನ್ನು ನೇರ ಹೊಣೆಯಾಗಿಸಲಾಗುವುದು.
ಅನುದಾನದ ಕೊರತೆ ಇಲ್ಲ
ಪ್ರತಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಅನುದಾನ ಲಭ್ಯವಿದೆ. ಎಸ್ .ಡಿ.ಆರ್.ಎಫ್ ನಡಿ ಅನುದಾನದ ಲಭ್ಯತೆಯೂ ಇದೆ . ದುರಸ್ತಿಗೆ ತಕ್ಷಣ ಕ್ರಮ ವಹಿಸಿ. ಹೆಚ್ಚಿನ ಅನುದಾನ ಅಗತ್ಯವಿದ್ದರೆ ಮನವಿ ಕಳಿಸಲು ಸೂಚಿಸಿದರು. ಜಿಲ್ಲೆಯ ಎಲ್ಲಾ ಆಗುಹೋಗುಗಳ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು ನಿಗಾ ವಹಿಸುವಂತೆ ಸೂಚಿಸಲಾಯಿತು. ಇನ್ನೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ಉಳಿಯಬೇಕು ಎಂದು ಸೂಚಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ 12 ಸೇತುವೆಗಳ ಸಂಪರ್ಕ ಕಡಿತಗೊಂಡಿದೆ. ಪ್ರತಿ ವರ್ಷ ತಗ್ಗು ಪ್ರದೇಶಗಳಲ್ಲಿ ನೀರು ತುಂಬುವುದರಿಂದ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪರ್ಯಾಯ ರಸ್ತೆ ನಿರ್ಮಾಣ ಮಾಡಲು ಕಡಿಮೆ ಜನರಿರುವ ಗ್ರಾಮಗಳನ್ನು ಸ್ಥಳಾಂತರ ಮಾಡಬೇಕು ಎಂದು ಸಲಹೆ ನೀಡಿದರು.
ಹೊಸ ಕೆಲಸಗಳಿಗೆ ನಿರ್ಬಂಧವಿಲ್ಲ
ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಅಡಿ ಆಗಿರುವ ಕೆಲಸಕ್ಕೆ ಹಣ ಪಾವತಿ ಮಾಡಲು ಯಾವುದೇ ನಿರ್ಬಂಧವಿಲ್ಲ. ಹೊಸ ಕಾಮಗಾರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಕೂಡಲೇ ತೆಗೆದುಕೊಳ್ಳಲು ನಿರ್ಬಂಧವಿಲ್ಲ ಎಂದು ತಿಳಿಸಿದರು.
ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಕೃಷ್ಣಾ ನದಿಯ ನೀರು ಹರಿಸಿದರೆ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತದೆ. ನೀರು ಬಿಡುವ ಮುನ್ನವೇ ಸೂಕ್ತ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಅನಾಹುತಗಳು ಸಂಭವಿಸದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಕಲಬುರಗಿ ಜಿಲ್ಲಾಧಿಕಾರಿಗಳು ಮಹಾರಾಷ್ಟ್ರ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕು. ಅಲ್ಲಿನ ಉಜ್ಜನಿ ಜಲಾಶಯದಿಂದ ನೀರು ಹರಿಸುವ ಮುನ್ನ ಎಚ್ಚರಿಕೆ ವಹಿಸಿ. ಕಲಬುರಗಿ, ವಿಜಯಪುರ ಜಿಲ್ಲಾಧಿಕಾರಿಗಳು ಸಂಪರ್ಕದಲ್ಲಿರಬೇಕೆಂದು ಸೂಚಿಸಿದರು.

ಭೂ ಕುಸಿತ ತಡೆಗಟ್ಟಲು ಕ್ರಮ ವಹಿಸಿ
ಕೊಡಗು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭೂ ಕುಸಿತ ತಡೆಗಟ್ಟಲು ಕ್ರಮ ವಹಿಸಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ಸಮನ್ವಯ ಸಾಧಿಸಬೇಕು. ವಾರ್ ರೂಂ ಗಳನ್ನು ತೆರೆಯಬೇಕು. ಪ್ರವಾಹ ಬರುವ ಮುನ್ನ ತಗ್ಗು ಪ್ರದೇಶಗಳಲ್ಲಿನ ಜನರ ಕುರಿತು ಎಚ್ಚರಿಕೆ ಅಗತ್ಯ ಎಂದು ಹೇಳಿದರು.
ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಬಿತ್ತನೆಯಾಗಿದ್ದು, ಬೀಜ, ಗೊಬ್ಬರ ಹಾಗೂ ಔಷಧಿ ಕೊರತೆಯಾಗದಂತೆ ವ್ಯವಸ್ಥೆಯನ್ನು ಕೃಷಿ ಇಲಾಖೆ ಮಾಡುವುದು. ಮಳೆ ಬಾರದೆ ಬಿತ್ತನೆ ಹಾಳಾಗಿರುವ ಜಿಲ್ಲೆಗಳಲ್ಲಿ ರೈತರಿಗೆ ಬಿತ್ತನೆ ಬೀಜ ನೀಡಬೇಕು. ಕರ್ತವ್ಯ ಲೋಪ ಕಂಡುಬಂದರೆ ಅವರ ಮೇಲೆ ಕ್ರಮ ವಹಿಸಲಾಗುವುದು. ರೈತರಿಗೆ ಖಾಸಗಿಯವರು ನೀಡುವ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದು ಎಂದು ಸೂಚನೆ ನೀಡಬೇಕು. ಈ ನಿಟ್ಟಿನಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.
ವಿಡಿಯೋ ಸಂವಾದದ ಮುಖ್ಯಾಂಶಗಳು
1. ರಾಜ್ಯದಲ್ಲಿ ಜೂನ್ ತಿಂಗಳಿನಲ್ಲಿ ಭಿಪರ್ ಜಾಯ್ ಚಂಡಮಾರುತದ ಕಾರಣದಿಂದಾಗಿ ಶೇ. 56 ರಷ್ಟು ಮಳೆ ಕೊರತೆ ಕಂಡು ಬಂತು.
2. ಆದರೆ ಜುಲೈ ತಿಂಗಳಿನಲ್ಲಿ ಇಲ್ಲಿಯವರೆಗೆ ವಾಡಿಕೆ ಮಳೆ 228 ಮಿ.ಮೀ. ನಷ್ಟಿದೆ. ಆದರೆ ರಾಜ್ಯದಲ್ಲಿ 313 ಮಿ.ಮೀ. ಮಳೆ ಆಗಿದೆ. ಇದು ವಾಡಿಕೆ ಮಳೆಗಿಂತ ಶೇ. 37 ರಷ್ಟು ಹೆಚ್ಚಾಗಿದೆ.
3. ಜುಲೈ ತಿಂಗಳಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜೂನ್ ಅಂತ್ಯಕ್ಕೆ ಇದ್ದ ಮಳೆ ಕೊರತೆಯು ಕಡಿಮೆಯಾಗಿದೆ. ಮಳೆ ಕೊರತೆ ಕಂಡು ಬಂದ ತಾಲ್ಲೂಕುಗಳ ಸಂಖ್ಯೆ ಇಳಿಕೆಯಾಗಿದೆ. ಪ್ರಸ್ತುತ ಜೂನ್ 1 ರಿಂದ ಈ ವರೆಗೆ ನಾಲ್ಕು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು, 21 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. 6 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ.
4. ಹವಾಮಾನ ಇಲಾಖೆ ಮುನ್ಸೂಚನೆ ಪಕಾರ ಮುಂದಿನ ಒಂದು ವಾರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಮಳೆ ಕೊರತೆಯಿರುವ ತಾಲ್ಲೂಕುಗಳ ಸಂಖ್ಯೆ ಇಳಿಕೆಯಾಗಲಿದೆ.
5. ಬಹುತೇಕ ಎಲ್ಲ ಜಲಾಶಯಗಳಲ್ಲಿ ನೀರು ಬಹುತೇಕ ಭರ್ತಿಯಾಗುತ್ತಿವೆ. ಕಳೆದ ಒಂದು ವಾರದಲ್ಲಿ ಒಟ್ಟು ಸಂಚಿತ ಒಳಹರಿವು 227 ಟಿಎಂಸಿಯಷ್ಟಾಗಿದೆ.
6. ಜೂನ್ 1 ರಿಂದ ಈ ವರೆಗೆ ರಾಜ್ಯದಲ್ಲಿ ನೀರಿನಲ್ಲಿ ಸಿಲುಕಿ, ಸಿಡಿಲು ಬಡಿದು, ಮನೆ ಕುಸಿದು, ಮರ ಬಿದ್ದು ಹಾಗೂ ಭೂಕುಸಿತದಿಂದ ಒಟ್ಟು 38 ಮಾನವ ಜೀವಹಾನಿ ಆಗಿದೆ. 35 ಜನರು ಗಾಯಗೊಂಡಿದ್ದಾರೆ.
7. ರಾಜ್ಯದಲ್ಲಿ 57 ಮನೆಗಳು ಸಂಪೂರ್ಣವಾಗಿ, 208 ಮನೆಗಳು ತೀವ್ರವಾಗಿ ಹಾಗೂ 2682 ಮನೆಗಳು ಭಾಗಶಃ ಹಾನಿಯಾಗಿದೆ.
8. ಮಳೆಯಿಂದಾಗಿ 105 ಜಾನುವಾರುಗಳು ಮೃತಪಟ್ಟಿವೆ
9. 185 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾಗೂ 356 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು- ಒಟ್ಟು 541.39 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಜಲಾವೃತಗೊಂಡಿದೆ.
10. 407 ಕಿ.ಮೀ. ರಾಜ್ಯ ಹೆದ್ದಾರಿ, 425 ಕಿ.ಮೀ. ಜಿಲ್ಲಾ ಹೆದ್ದಾರಿ, ಗ್ರಾಮೀಣ ರಸ್ತೆಗಳು 1277 ಕಿ.ಮೀ. ಒಟ್ಟು 2109 ಕಿ.ಮೀ. ರಸ್ತೆ ಹಾನಿಯಾಗಿದೆ.
11. 189 ಸೇತುವೆಗಳು, 889 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಯಾಗಿರುವುದು ವರದಿಯಾಗಿದೆ.
12. 11,995 ವಿದ್ಯುತ್ ಕಂಬಗಳು, 894 ಟ್ರಾನ್ಸ್ಫಾರ್ಮರ್ ಗಳು ಹಾನಿಯಾಗಿದ್ದು, 215 ಕಿ.ಮೀ. ಉದ್ದದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
13. ಪ್ರಸ್ತುತ ಎರಡು ಪರಿಹಾರ ಶಿಬಿರ ಗಳಲ್ಲಿ 50 ಜನರಿಗೆ ಆಶ್ರಯ ನೀಡಲಾಗಿದೆ.
14. ಜೂನ್ ತಿಂಗಳಿನಲ್ಲಿ ಮಳೆ ಕೊರತೆಯಾದ್ದರಿಂದ ಮುಂಗಾರು ಹಂಗಾಮಿನಲ್ಲಿ ಈ ವರೆಗೆ ಶೇ. 53 ರಷ್ಟು ಬಿತ್ತನೆಯಾಗಿದೆ. ವಾಡಿಕೆಯಂತೆ ಶೇ. 83 ರಷ್ಟು ಬಿತ್ತನೆಯಾಗಿದೆ.
15. ರಾಜ್ಯದಲ್ಲಿ 156 ಲಕ್ಷ ಟನ್ ಮೇವು ದಾಸ್ತಾನು ಇದ್ದು, ಮುಂದಿನ 29 ವಾರಗಳಲ್ಲಿ ಸಾಕಾಗುವಷ್ಟಿದೆ.












Click it and Unblock the Notifications