ಕಾಂಗ್ರೆಸ್ ಪಾಳಯದಲ್ಲಿ ಹೆಚ್ಚಾಯ್ತು ಡಿಸಿಎಂ ಫೈಟ್: ಶಾಸಕ, ಸಚಿವರಿಗೆ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು, ಜೂನ್ 27: ರಾಜ್ಯ ಕಾಂಗ್ರೆಸ್ ನಲ್ಲಿ ಪದೇ ಪದೇ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಚರ್ಚೆಯಾಗುತ್ತಿದೆ. ಲೋಕಸಭಾ ಚುಣಾವಣೆಯಲ್ಲಿ ಹೆಚ್ಚು ಮತಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕೈ ಪಾಳಯದ ನಾಯಕರು ಸಮುದಾಯಕ್ಕೊಂದು ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು, ಇದೀಗ ಬಹಿರಂಗವಾಗಿಯೇ ಸಚಿವರು ಡಿಸಿಎಂ ಸ್ಥಾನಕ್ಕಾಗಿ ಒತ್ತಾಯಿಸುತ್ತಿದ್ದಾರೆ.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಸಹ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಬೇಕಾದ್ರೆ ಸಮುದಾಯಕ್ಕೊಂದು ಡಿಸಿಎಂ ಸ್ಥಾನ ನೀಡಬೇಕು ಎನ್ನುವ ಕೂಗು ಕೇಳಿ ಬಂದಿತ್ತು. ಇದೀಗ ಲೋಕಸಭಾ ಚುನಾವಣಾ ಫಲಿತಾಂಶ ಬಂದಿದ್ದು, ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ 9 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಇದೀಗ ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಹೇಳಿಕೆ ಮತ್ತು ಪ್ರತಿ ಹೇಳಿಕೆಗಳು ಕೇಳಿ ಬರುತ್ತಿವೆ

ಕೆಲ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಾಯಿಸಿದ್ರೆ. ಇತ್ತ ಪಕ್ಷದ ಸಚಿವರು ಮತ್ತು ಶಾಸಕರು ಡಿಸಿಎಂ ಹುದ್ದೆ ಕುರಿತು ಪರ ವಿರೋಧ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತಿದೆ. ಪಕ್ಷದ ನಾಯಕರು ಎಲ್ಲಾ ಹೇಳಿಕೆಯನ್ನ ಮನಗೊಂಡ ಸಿದ್ದರಾಮಯ್ಯ ಅವರು, ಡ್ಯಾಮೇಜ್ ಕಂಟ್ರೋಲ್ಗೆ ಅಖಾಡಕ್ಕೆ ಇಳಿದಿದ್ದಾರೆ.
ಡಿಸಿಎಂ ಸ್ಥಾನಕ್ಕಾಗಿ ಪರಮೇಶ್ವರ್, ಸತೀಶ್ ಜಾರಕಿಹೊಳಿ , ಕೆ ಎನ್ ರಾಜಣ್ಣ ಹಾಗೂ ಜಮೀರ್ ಅವರು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ. ಇತ್ತ ಬಹಿರಂಗ ಹೇಳಿಕೆಯಿಂದ ಸರ್ಕಾರ ಹಾಗೂ ಪಕ್ಷ ಮುಜುಗರಕ್ಕೊಳಗಾಗಿದ್ದು, ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಸಚಿವರಿಗೆ ಹಾಗೂ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೇಳಿಕೆ ನೀಡಿದ್ದ ಸಚಿವ ಕೆಎನ್ ರಾಜಣ್ಣ ಜತೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತುಕತೆ ನಡೆಸಿ , ಮತ್ತೆ ಈ ಬಗ್ಗೆ ಮಾತನಾಡಿಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ನಿಮ್ಮ ಬಹಿರಂಗ ಹೇಳಿಕೆಗಳಿಂದ ಸರ್ಕಾರ ಹಾಗೂ ಪಕ್ಷದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಹೀಗಾಗಿ ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡಲೇಬಾರದು ಎಂದು ಸಿದ್ದರಾಮಯ್ಯ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಸಚಿವರ ಹೇಳಿಕೆಗಳ ಬಗ್ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಯಾರು ಏನು ಬೇಕಾದರೂ ಹೇಳಲಿ, ಬಹಿರಂಗವಾಗಿ ಚರ್ಚಿಸಲ್ಲ ಎಂದಿದ್ದಾರೆ. ಹೈಕಮಾಂಡ್ ಇದೆ, ಅವರು ಏನು ತೀರ್ಮಾನ ಮಾಡುತ್ತಾರೋ ಮಾಡಲಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಬಹಳ ಸಂತೋಷ. ಅದು ಕೂಡ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.
ಸಿಎಂ ಆಕಾಂಕ್ಷಿಯಾಗಿರುವ ಡಿ ಕೆ ಶಿವಕುಮಾರ್ ಅವರನ್ನ ಕಟ್ಟಿ ಹಾಕುವ ನಿಟ್ಟಿನಲ್ಲಿ ಪಕ್ಷದ ಒಳಗೆಯೇ ಬಣ ರಾಜಕೀಯ ಹಾಗೂ ತಂತ್ರಗಾರಿಕೆ ನಡೆಯುತ್ತಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಇತ್ತ ಡಿ ಕೆ ಶಿವಕುಮಾರ್ ಅವರ ಬಣದವರು ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆಯೂ ಸದ್ಯ ಕಾಂಗ್ರೆಸ್ ಪಾಳಯದಲ್ಲಿ ಹೆಚ್ಚು ಚರ್ಚೆಗೆ ಕಾರಣವಾಗಿದೆ.
ಶಾಸಕ ಬಸವರಾಜ್ ಶಿವಗಂಗಾ ಅವರು ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಿದ್ದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಕಾಂಗ್ರೆಸ್ ಪದ್ಧತಿ. ಹೆಚ್ಚುವರಿ ಡಿಸಿಎಂ ಆಯ್ಕೆ ಮಾಡುವುದೇ ಆದರೆ ಡಿಕೆ ಶಿವಕುಮಾರ್ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ. ಆಮೇಲೆ ಹತ್ತು ಡಿಸಿಎಂ ಬೇಕಾದರೂ ಮಾಡಿಕೊಳ್ಳಿ ಎಂದು ಹೇಳಿದ್ದರು.












Click it and Unblock the Notifications