Tiger Poisoning: ಹುಲಿಗಳಿಗೆ ವಿಷ ಹಾಕಿದರೆ ಮುಲಾಜಿಲ್ಲದೆ ಕ್ರಮ: ಸಿಎಂ ಖಡಕ್ ಎಚ್ಚರಿಕೆ
ರಾಜ್ಯದಲ್ಲಿ ಇತ್ತೀಚೆಗೆ ಹುಲಿಗಳಿಗೆ ವಿಷ ಹಾಕಿದ್ದ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ವಾರ್ನಿಂಗ್ ಕೊಟ್ಟಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿಗಳ ಪದಕ ವಿತರಿಸಿ ಈ ವಿಚಾರ ಪ್ರಸ್ತಾಪಿಸಿದ್ದಾರೆ.
ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ರಾಜ್ಯದಲ್ಲಿ ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದ್ದಾರೆ.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ನಡೆಸುವಂತಾಗಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ಸಲಹೆ ನೀಡಿದ್ದಾರೆ.
ಎಷ್ಟೇ ದೊಡ್ಡವರಾದ್ರೂ ಕ್ರಮ
ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಹುಲಿ, ಆನೆಗಳ ಹತ್ಯೆ ಅತ್ಯಂತ ಗಂಭೀರ ಅಪರಾಧಗಳು. ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ. ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ, ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳು ಸಾವನ್ನಪ್ಪಿದ್ದ ಭೀಕರ ಘಟನೆ ಬೆಳಕಿಗೆ ಬಂದಿತ್ತು. ಈ ಪ್ರಕರಣದ ತನಿಖೆಯನ್ನು ಅರಣ್ಯ ಇಲಾಖೆ ತೀವ್ರಗೊಳಿಸಿತ್ತು. ಹುಲಿಗಳ ಮರಣೋತ್ತರ ಪರೀಕ್ಷೆ ವೇಳೆ ವಿಷ ಹಾಕಿರುವ ಶಂಕೆ ವ್ಯಕ್ತವಾಗಿತ್ತು. ಹಸು ಕೊಂದ ಕೋಪಕ್ಕೆ ದನಗಾಹಿಗಳು ಅಥವಾ ಬೇಟೆಗಾರರು ಈ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಮೃತಪಟ್ಟ ಹುಲಿಗಳಲ್ಲಿ ನಾಲ್ಕು ಹೆಣ್ಣು ಹುಲಿ, ಒಂದು ಗಂಡು ಹುಲಿ ಇತ್ತು.












Click it and Unblock the Notifications