ಮೋದಿಯವರೇ ಜನ್ಮದಿನದ ಶುಭಾಶಯಗಳು: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 19: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ನಿಮ್ಮ ಜನ್ಮದಿನದಂದು ಶುಭಾಶಯಗಳನ್ನು ತಿಳಿಸುತ್ತೇನೆ. ನಾನು ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಬಯಸುತ್ತೇನೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ನಿಮ್ಮ ತುರ್ತು ಗಮನಕ್ಕೆ ತರಲು ನಾನು ಈ ಪತ್ರ ಬರೆಯುತ್ತಿದ್ದೇನೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸೆಪ್ಟೆಂಬರ್ 18ರಂದು ಪತ್ರ ಬರೆದಿರುವ ಸಿದ್ದರಾಮಯ್ಯ, ಪ್ರಧಾನಿಗೆ ಜನ್ಮದಿನದ (ಮೋದಿ ಜನ್ಮದಿನ ಸೆಪ್ಟೆಂಬರ್ 17ರಂದು) ಶುಭಾಶಯವನ್ನೂ ಕೋರಿದ್ದಾರೆ.

ಉತ್ತರ ಕರ್ನಾಟಕದ ಜನರ ಹಿತದೃಷ್ಟಿಯಿಂದ ಅತ್ಯವಶ್ಯಕವಾಗಿರುವ ಕಳಸಾ-ಬಂಡೂರಿ ಯೋಜನೆಗೆ ಶೀಘ್ರ ಮಂಜೂರಾತಿ ನೀಡುವಂತೆ ಒತ್ತಾಯಿಸಿದರು. ಕಳಸಾ ಬಂಡೂರಿ ನಾಲಾ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಮುಖ್ಯ ವನ್ಯಜೀವಿ ವಾರ್ಡನ್ ಅಕ್ರಮ ಆದೇಶದ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ?
ಉತ್ತರ ಕರ್ನಾಟಕದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನಿರ್ಣಾಯಕವಾಗಿರುವ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ (MoEF&CC) ವನ್ಯಜೀವಿ ಅನುಮೋದನೆಗಾಗಿ ದೀರ್ಘಕಾಲದಿಂದ ಬಾಕಿ ಉಳಿದಿದೆ. ಮಹದಾಯಿ ವಾಟರ್ ಡಿಸ್ಪ್ಯೂಟ್ ಟ್ರಿಬ್ಯೂನಲ್ ಅವಾರ್ಡ್ ಅನ್ನು 14-08-2018 ರಂದು ಘೋಷಿಸಲಾಯಿತು ಮತ್ತು 27-02-2020 ರಂದು ಭಾರತದ ಗೆಜೆಟ್ನಲ್ಲಿ ಪ್ರಕಟಿಸಲಾಯಿತು.

ಕರ್ನಾಟಕ ರಾಜ್ಯಕ್ಕೆ ಒಟ್ಟು 13.42 ಟಿಎಂಸಿ ಹಂಚಿಕೆಯಾಗಿದೆ. ಅದರಲ್ಲಿ 3.9 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ತಿರುಗಿಸಲು (ಕಳಸಾ ನಾಲಾದಿಂದ 1.72 ಟಿಎಂಸಿ ಮತ್ತು ಬಂಡೂರ ನಾಲಾದಿಂದ 2.18 ಟಿಎಂಸಿ) ರಾಜ್ಯ ಸರ್ಕಾರವು 16-06-2022 ರಂದು CWC ಗೆ ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ (ಲಿಫ್ಟ್ ಯೋಜನೆಗಳು) ಮಾರ್ಪಡಿಸಿದ ಪೂರ್ವ-ಕಾರ್ಯಸಾಧ್ಯತಾ ವರದಿಯನ್ನು ಅನುಮೋದನೆಗಾಗಿ ಸಲ್ಲಿಸಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ವರದಿ ಸಲ್ಲಿಕೆ ಕುರಿತ ಪೋರ್ಟಲ್ ಸಂಖ್ಯೆಯನ್ನೂ ಉಲ್ಲೇಖಿಸಿದ್ದಾರೆ.
ಈ ಪ್ರಸ್ತಾವನೆಯು ಎಲ್ಲಾ ಅಗತ್ಯ ಪೂರ್ವಾಪೇಕ್ಷಿತಗಳನ್ನು ಪೂರೈಸಿದೆ ಮತ್ತು ವಿವರವಾದ ಸಮರ್ಥನೆಗಳನ್ನು ಒದಗಿಸಿದೆ. ಆದಾಗ್ಯೂ, ಇಲ್ಲಿಯವರೆಗೆ ನೀವು ಅಧ್ಯಕ್ಷರಾಗಿರುವ ವನ್ಯಜೀವಿ ರಾಷ್ಟ್ರೀಯ ಮಂಡಳಿಯು ಅಗತ್ಯ ಅನುಮತಿಯನ್ನು ನೀಡಿಲ್ಲ. ಗೋವಾದ ಮುಖ್ಯ ವನ್ಯಜೀವಿ ವಾರ್ಡನ್ ಕಳಸಾ ಬಂಡೂರಿಯಲ್ಲಿ ಕರ್ನಾಟಕ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದಂತೆ ಕಾನೂನುಬಾಹಿರ ಆದೇಶವನ್ನು ಹೊರಡಿಸಿದ್ದಾರೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.












Click it and Unblock the Notifications