ಮೂರು ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ; ಸಿಎಂ ತುರ್ತು ಸಭೆ
ಬೆಂಗಳೂರು, ಏ. 17: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುವುದನ್ನು ಸಾಕಷ್ಟು ನಿಯಂತ್ರಣದಲ್ಲಿದೆ ಎಂದೆ ಭಾವಿಸಲಾಗಿತ್ತು. ಆದರೆ ಕಳೆದ 3 ದಿನಗಳಿಂದ ಹೆಚ್ಚಿನ ಜನರಲ್ಲಿ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಢೀರ್ ಸಭೆ ನಡೆಸಿದ್ದಾರೆ.
ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ತುರ್ತು ಸಭೆಯಲ್ಲಿ ಹಿರಿಯ ಸಚಿವರು, ತಜ್ಞ ವೈದ್ಯರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕೋವಿಡ್ 19 ಪ್ರಕರಣಗಳು ಕಳೆದ ಮೂರು ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಸಭೆ ನಡೆಯಿತು. ರೋಗ ಲಕ್ಷಣಗಳು ಕಂಡ ನಾಲ್ಕೈದು ದಿನಗಳ ಬಳಿಕ ಸೋಂಕಿತರು ಆಸ್ಪತ್ರೆಗೆ ಬರುತ್ತಿರುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆದಿದೆ.

4 ದಿನದ ನಂತರ ಆಸ್ಪತ್ರೆಗೆ ಬರುತ್ತಿರುವ ಸೋಂಕಿತರು
ರೋಗಿಗಳು ರೋಗ ಲಕ್ಷಣ ಕಂಡು ಬಂದ ಮೇಲೆಯೂ ಸರಾಸರಿ 4 ದಿನದ ನಂತರ ಬರುತ್ತಿದ್ದಾರೆ ಎಂದು ಸಭೆಯಲ್ಲಿ ಚರ್ಚೆ ಆಗಿದೆ. ಇದು ನಿಜಕ್ಕೂ ಕೂಡ ಆತಂಕಗೊಳ್ಳುವ ವಿಚಾರ. ಕ್ವಾರಂಟೈನ್ನಲ್ಲಿರುವವರಿಗೆ ಸೋಂಕು ಪತ್ತೆಯಾದಲ್ಲಿ ಅವರಿಂದ ಬೇರೆಯವರಿಗೆ ಹರಡುವ ಸಾಧ್ಯತೆಗಳು ತೀರಾ ಕಡಿಮೆ ಇರುತ್ತದೆ. ಆದರೆ ಏಕಾಏಕಿ ರೋಗಲಕ್ಷಣಗಳು ಕಂಡು ಬಂದಲ್ಲಿ ರೋಗಿ ಆಸ್ಪತ್ರೆಗೆ ಬರುವ ಮೊದಲೇ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಆದ್ದರಿಂದ ಜನರು ರೋಗ ಲಕ್ಷಣ ಕಾಣಿಸಿಕೊಂಡ ಕೂಡಲೇ ವೈದ್ಯರನ್ನು ಸಂಪರ್ಕಿಸುವಂತೆ ನಾನು ಮನವಿ ಮಾಡುತ್ತೇನೆ ಎಂದು ಸಭೆಯ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೋವಿಡ್ 19 ಚಿಕಿತ್ಸೆಗೆ ಸೂಕ್ತ ಮಾರ್ಗಸೂಚಿ
ಕೋವಿಡ್ 19 ಚಿಕಿತ್ಸೆಗೆ ಸೂಕ್ತ ಮಾರ್ಗಸೂಚಿಯನ್ನು ಅನುಸರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಐಸಿಯುನಲ್ಲಿರುವ ವ್ಯಕ್ತಿಗಳ ಚಿಕಿತ್ಸೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಹಾಗೂ ಅವರಿಗೆ ಕೆಲವು ವಿಶೇಷ ಪರೀಕ್ಷೆಗಳನ್ನು ನಡೆಸಲು ತಜ್ಞ ವೈದ್ಯರು ಸಲಹೆ ಕೊಟ್ಟಿದ್ದಾರೆ. ಇನ್ನು ಕೇರಳ ಮಾದರಿಯಲ್ಲಿ ಪ್ಲಾಸ್ಮಾ ಚಿಕಿತ್ಸೆಯನ್ನು ರಾಜ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಪ್ಲಾಸ್ಮಾ ಚಿಕಿತ್ಸೆಗೆ ಐಸಿಎಂಆರ್ ಅನುಮತಿಗೆ ಕಾಯಲಾಗುತ್ತಿದೆ ಎಂದು ಸಿಎಂ ಮಾಹಿತಿ ಕೊಟ್ಟಿದ್ದಾರೆ.
ಜ್ವರ, ಶೀತ, ಉಸಿರಾಟದ ತೊಂದರೆ ಇರುವವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿದೆ ಎಂದು ತಜ್ಞರು ಸಭೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಆ್ಯಪ್ ಅಭಿವೃದ್ಧಿ ಪಡಿಸಲಾಗುತ್ತಿದೆ.

ಪ್ರತಿ ಜಿಲ್ಲೆಯಲ್ಲಿ ಎರಡು ಪರೀಕ್ಷಾ ಕೇಂದ್ರ
ಯಾವುದೇ ಪ್ರಕರಣ ವರದಿಯಾಗದೆ ಇರುವ ಜಿಲ್ಲೆಗಳಲ್ಲಿಯೂ ಈ ರೋಗ ಲಕ್ಷಣಗಳಿರುವ ವ್ಯಕ್ತಿಗಳ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಎರಡು ಹಾಗೂ ಪ್ರತಿ ವೈದ್ಯಕೀಯ ಕಾಲೇಜುಗಳಲ್ಲಿ ಒಂದು ಪರೀಕ್ಷಾ ಕೇಂದ್ರ ಸ್ಥಾಪಿಸುವಂತೆ ಐಸಿಎಂಆರ್ ಮಾರ್ಗಸೂಚಿ ಹೊರಡಿಸಿದೆ. ಈ ನಿಟ್ಟಿನಲ್ಲಿ ಏಪ್ರಿಲ್ ಅಂತ್ಯದೊಳಗೆ ಇನ್ನೂ 10 ಪ್ರಯೋಗಾಲಯಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ. ಲಾಕ್ ಡೌನ್ ಸಡಿಲಗೊಳಿಸಿದ ನಂತರ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಅವುಗಳನ್ನು ನಿಭಾಯಿಸುವ ಸಿದ್ಧತೆ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಲಾಕ್ಡೌನ್ ಸಡಿಲಗೊಳಿಸುವ ಸಂದರ್ಭದಲ್ಲಿ ಥರ್ಮಲ್ ಸ್ಕಾನರ್
ಜೊತೆಗೆ, ವಿವಿಧ ಕಂಪೆನಿಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸುವ ಸಂದರ್ಭದಲ್ಲಿ ಥರ್ಮಲ್ ಸ್ಕ್ಯಾನರ್ ಮತ್ತಿತರ ಸರಳ ಪರೀಕ್ಷಾ ಪರಿಕರಗಳ ಮೂಲಕ ತಮ್ಮ ಸಿಬ್ಬಂದಿಯಲ್ಲಿ ರೋಗ ಲಕ್ಷಣವಿದೆಯೇ ಎಂದು ಪ್ರತಿ ದಿನ ಪರೀಕ್ಷೆ ಮಾಡುವ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟರು. ಈ ನಿಟ್ಟಿನಲ್ಲಿ ವಿವರವಾದ ಮಾರ್ಗಸೂಚಿ ಸಿದ್ಧಪಡಿಸಲು ತೀರ್ಮಾನಿಸಲಾಯಿತು.

ಏಪ್ರಿಲ್ 21ರಂದು ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ
ಆರೋಗ್ಯ ಸೇತು ಆಪ್ ಅನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಡೌನ್ ಲೋಡ್ ಮಾಡಿಕೊಳ್ಳಲು ಮನವಿ ಮಾಡಲು ತೀರ್ಮಾನಿಸಲಾಯಿತು. ಏಪ್ರಿಲ್ 20 ರಂದು ಕೇಂದ್ರ ಸರ್ಕಾರದಿಂದ ಮತ್ತಷ್ಟು ಸಲಹೆ ಸೂಚನೆಗಳು ಬರಲಿವೆ. ಹೀಗಾಗಿ ಏಪ್ರಿಲ್ 21ರಂದು ಮತ್ತೆ ಸಭೆ ಸೇರಿ, ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.












Click it and Unblock the Notifications