ಪ್ರಣಬ್ ಕಳೆದುಕೊಂಡು ಅನಾಥಪ್ರಜ್ಞೆ ಆವರಿಸಿದೆ; ಬಿಎಸ್ವೈ ಸಂತಾಪ
ಬೆಂಗಳೂರು, ಆಗಸ್ಟ್ 31: "ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ" ಎಂದು ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಸಂತಾಪ ಸೂಚಿಸಿದರು.
Recommended Video
ಸೋಮವಾರ ಸಂಜೆ ಪ್ರಣಬ್ ಮುಖರ್ಜಿ (84) ದೆಹಲಿ ಸೇನಾ ಆಸ್ಪತ್ರೆಯಲ್ಲಿ ವಿಧಿವಶರಾದರು. ಆಗಸ್ಟ್ 10ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಕೋಮಾಕ್ಕೆ ಜಾರಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪ್ರಣಬ್ ಮುಖರ್ಜಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. "ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ" ಎಂದು ಸಂತಾಪದಲ್ಲಿ ಯಡಿಯೂರಪ್ಪ ಹೇಳಿದ್ದಾರೆ.
ಸರಿ ಸುಮಾರು 5 ದಶಕಗಳ ಕಾಲ ರಾಜಕೀಯ ಜೀವನದಲ್ಲಿದ್ದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಹುದ್ದೆಗಳನ್ನು ಅಲಂಕರಿಸಿದ್ದವರು. 2012-2017ರ ಅವಧಿಯಲ್ಲಿ ಭಾರತದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

ಶ್ರೇಷ್ಠ ನೇತಾರ
"ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
|
ದೇಶದ ಗರಿಮೆಯನ್ನು ಎತ್ತರಕ್ಕೆ ಕೊಂಡೊಯ್ದಿದ್ದರು
"ಶ್ರೀ ಪ್ರಣಬ್ ರವರ ಸೇವೆ, ಸಾಧನೆಗಳು ಅನನ್ಯ. ದಶಕಗಳ ಕಾಲ ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಪ್ರಧಾನ ಪಾತ್ರ ವಹಿಸಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ವಾಣಿಜ್ಯ, ವಿದೇಶಾಂಗ, ಹಣಕಾಸು, ರಕ್ಷಣಾ ಸಚಿವರಾಗಿ ಅವರು ಅವಿಸ್ಮರಣೀಯ ಸೇವೆ ಸಲ್ಲಿಸಿದ್ದರು" ಎಂದು ಯಡಿಯೂರಪ್ಪ ಹೇಳಿದ್ದಾರೆ.
|
ಕಳಂಕರಹಿತರಾಗಿ ಸೇವೆ
"ಶ್ರೀ ಪ್ರಣಬ್ ರಷ್ಟು ಸುದೀರ್ಘ ಕಾಲ ಆಡಳಿತದ ಕೇಂದ್ರ ಸ್ಥಾನದಲ್ಲಿದ್ದು, ಪ್ರಾಮಾಣಿಕವಾಗಿ, ಕಳಂಕರಹಿತರಾಗಿ ಸೇವೆ ಸಲ್ಲಿಸಿದ ಮತ್ತೋರ್ವ ಸರ್ವಾದರಣೀಯ ನಾಯಕ ಇರಲಾರರು" ಎಂದು ಯಡಿಯೂರಪ್ಪ ಬಣ್ಣಿಸಿದ್ದಾರೆ.

ಸಂಕ್ಷಿಪ್ತ ಪರಿಚಯ
11 ಡಿಸೆಂಬರ್ 1935ರಲ್ಲಿ ಜನಿಸಿದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳ ಮೂಲದವರು. ಸುಮಾರು 5 ದಶಕಗಳ ಕಾಲ ರಾಜಕೀಯ ಜೀವನದಲ್ಲಿ ಇದ್ದವರು. ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಹತ್ವದ ಹುದ್ದೆಗಳನ್ನು ಅಲಂಕರಿಸಿದವರು. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿ. ವಿ. ನರಸಿಂಹ ರಾವ್, ಮನಮೋಹನ್ ಸಿಂಗ್ ಸರ್ಕಾರದಲ್ಲಿ ಹಲವಾರು ಖಾತೆಗಳನ್ನು ನಿಭಾಯಿಸಿದ್ದರು. 2012-17ರ ತನಕ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.












Click it and Unblock the Notifications