ಉಪ ಚುನಾವಣೆ; ಸಚಿವರೊಂದಿಗೆ ಯಡಿಯೂರಪ್ಪ ರಹಸ್ಯ ಮಾತುಕತೆ!
ಬೆಂಗಳೂರು, ಅಕ್ಟೋಬರ್ 23 : ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ಸ್ವೀಕಾರ ಮಾಡಿದೆ. ಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ, ಆದರೆ, ಆಡಳಿತ ನಡೆಸುತ್ತಿರುವ ಸರ್ಕಾರದ ಅಭ್ಯರ್ಥಿಗಳು ಗೆದ್ದರೆ ವರ್ಚಸ್ಸು ಹೆಚ್ಚಲಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಚಿವರ ಜೊತೆ ಎರಡೂ ಕ್ಷೇತ್ರದಲ್ಲಿನ ಪರಿಸ್ಥಿತಿ ಬಗ್ಗೆ ರಹಸ್ಯ ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ಈ ಚರ್ಚೆ ನಡೆಸಿದೆ.
ನವೆಂಬರ್ 3ರಂದು ಶಿರಾ ಮತ್ತು ಆರ್. ಆರ್. ನಗರ ಉಪ ಚುನಾವಣೆ ನಡೆಯಲಿದೆ. ಶಿರಾದಲ್ಲಿ ಡಾ. ರಾಜೇಶ್ ಗೌಡ, ಆರ್. ಆರ್. ನಗರದಲ್ಲಿ ಮಾಜಿ ಶಾಸಕ ಮುನಿರತ್ನ ಬಿಜೆಪಿಯ ಅಭ್ಯರ್ಥಿಗಳು.

ಎರಡೂ ಕ್ಷೇತ್ರದಲ್ಲಿನ ಪರಿಸ್ಥಿತಿ, ಚುನಾವಣಾ ಪ್ರಚಾರ ಮುಂತಾದ ಮಾಹಿತಿಗಳನ್ನು ಯಡಿಯೂರಪ್ಪ ಪಡೆದಿದ್ದಾರೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಎರಡೂ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಾಧ್ಯತೆ ಕಡಿಮೆ ಇದೆ.
2018ರಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿರಲಿಲ್ಲ. ಆರ್. ಆರ್. ನಗರದಲ್ಲಿ 2ನೇ ಸ್ಥಾನ ಮತ್ತು ಶಿರಾದಲ್ಲಿ 3ನೇ ಸ್ಥಾನ ಪಡೆದಿತ್ತು. ಈ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂದು ಯಡಿಯೂರಪ್ಪ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ತುಮಕೂರಿನ ಶಿರಾ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು 25 ಸಾವಿರ ಮತ ಪಡೆಯುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ, ಉಪ ಚುನಾವಣೆ ಉಸ್ತುವಾರಿಯನ್ನು ಪುತ್ರ ವಿಜಯೇಂದ್ರಗೆ ಯಡಿಯೂರಪ್ಪ ವಹಿಸಿದ್ದು, ಕ್ಷೇತ್ರದಲ್ಲಿಯೇ ವಾಸ್ತವ್ಯ ಹೂಡಿ ವಿಜಯೇಂದ್ರ ಪ್ರಚಾರ ನಡೆಸುತ್ತಿದ್ದಾರೆ.
ಆರ್. ಆರ್. ನಗರದಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆ ಗೆಲ್ಲದಿರಲು ಮುನಿರತ್ನ ಕಾರಣರಾಗಿದ್ದರು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುನಿರತ್ನ ಬಿಜೆಪಿಗೆ ಬಂದಿದ್ದೂ, ಅವರೇ ಅಭ್ಯರ್ಥಿ. ಹೀಗಾಗಿ ಗೆಲುವು ಸುಲಭ ಎಂಬುದು ಪಕ್ಷದ ನಾಯಕರ ಲೆಕ್ಕಾಚಾರವಾಗಿದೆ.
ಕೋವಿಡ್ನಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕಾರ್ಯ ನಿರ್ವಹಣೆ ಮಾಡಿದೆ. ಇದಕ್ಕೆ ಜನರು ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆ? ಎಂಬುದು ಉಪ ಚುನಾವಣೆಯಲ್ಲಿ ತಿಳಿಯಲಿದೆ. ಆದ್ದರಿಂದ, ನವೆಂಬರ್ 10ರ ಫಲಿತಾಂಶದ ಮೇಲೆ ಎಲ್ಲರ ಕಣ್ಣಿದೆ.
ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದು. ಆದ್ದರಿಂದ, ಅವರ ಪ್ರತಿಷ್ಠ ಸಹ ಉಪ ಚನಾವಣೆಯಲ್ಲಿ ಅಡಗಿದೆ. ಚುನಾವಣೆ ಗೆಲ್ಲಲು ಅವರು ಸಹ ತಂತ್ರ ರೂಪಿಸಿದ್ದು, ಬಿಜೆಪಿಗೆ ಪ್ರಬಲ ಪೈಪೋಟಿ ಎದುರಾಗಲಿದೆ.












Click it and Unblock the Notifications