ವಿಕೋಪ ಪರಿಹಾರದಡಿ ಸರ್ಕಾರ ಬಿಡುಗಡೆ ಮಾಡಿದ್ದು ಇಷ್ಟೇನಾ?
ಬೆಂಗಳೂರು, ಸೆ. 07: ಕಳೆದ ಮಾರ್ಚ್ ತಿಂಗಳಿನಿಂದ ರಾಜ್ಯದಲ್ಲಿ ಕೊರೊನಾ ವೈರಸ್ ಸಂಕಷ್ಟ ಶುರುವಾಗಿದೆ. ಆರಂಭದಲ್ಲಿ ಜನರ ಹಾಗೂ ಸರ್ಕಾರದಲ್ಲಿ ಕೋವಿಡ್-19 ಆತಂಕವನ್ನು ಸೃಷ್ಟಿಸಿತ್ತು. ಮೊದಲ ಒಂದು ತಿಂಗಳ ಅವಧಿಯಲ್ಲಿ ಜನರು, ಜೀವ ಉಳಿದರೆ ಸಾಕು ಎಂಬಂತೆ ಇದ್ದರು. ಆದರೆ ದಿನ ಕಳೆದಂತೆ ಪರಿಸ್ಥಿತಿ ಬದಲಾಯಿತು. ಅದೇ ಸಂದರ್ಭದಲ್ಲಿ ಸರ್ಕಾರದ ಮೇಲೆ ಹಲವು ಆರೋಪಗಳು ಬಂದವು.
Recommended Video
ಪಿಪಿಇ ಕಿಟ್ ಖರೀದಿ, ವೆಂಟಿಲೇಟರ್ ಹಗರಣ ಹೀಗೆ ಸಾವಿರಾರು ಕೋಟಿ ರೂಪಾಯಿಗಳ ಹಗರಣದ ಆರೋಪಗಳು ಕೇಳಿ ಬಂದವು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನೂ ಬಿಡುಗಡೆ ಮಾಡಿದರು. ಅದಕ್ಕೆ ಪ್ರತಿಯಾಗಿ ರಾಜ್ಯ ಬಿಜೆಪಿ ಸರ್ಕಾರದ 6 ಜನ ಸಚಿವರುಗಳು ಜಂಟಿ ಸುದ್ದಿಗೋಷ್ಠಿ ನಡೆಸಿ, ಹಿಂದಿನ ಮೈತ್ರಿ ಸರ್ಕಾರದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ವೆಂಟಿಲೇಟರ್ಗಳನ್ನು ಖರೀದಿ ಮಾಡಲಾಗಿದೆ ಎಂದು ಆರೋಪಿಸಿ ಪ್ರತಿ ದಾಖಲೆ ಬಿಡುಗಡೆ ಮಾಡಿದರು.
ಅದರ ಮಧ್ಯೆಯೂ ಒಟ್ಟು ಸರಿ ಸುಮಾರು ಎರಡು ಸಾವಿರ ಕೋಟಿ ರೂಪಾಯಿಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು 'ಲೆಕ್ಕ ಕೊಡಿ ಬಿಜೆಪಿ' ಎಂಬ ಅಭಿಯಾನವನ್ನು ಶುರು ಮಾಡಿದ್ದರು. ಆದರೆ ಇದೀಗ ಕಳೆದ 5 ತಿಂಗಳುಗಳಲ್ಲಿ ಕೋವಿಡ್-19 ನಿಯಂತ್ರಕ್ಕೆ ಹಾಗೂ ಪ್ರವಾಹಕ್ಕಾಗಿ ರಾಜ್ಯ ವಿಕೋಪ ಪರಿಹಾರ ನಿಧಿಯಡಿ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ ಖಂಡಿತವಾಗಿಯೂ ಆಶ್ಚರ್ಯವಾಗದೆ ಇರದು!

ರಾಜ್ಯಕ್ಕೆ ಬಂದ ಕೇಂದ್ರ ತಂಡ
ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್ ಅವರ ನೇತೃತ್ವದ ಕೇಂದ್ರ ಸರ್ಕಾರದ ಅಧ್ಯಯನ ತಂಡವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು. ರಾಜ್ಯದಲ್ಲಿ ಈ ಬಾರಿಯ ಪ್ರವಾಹದಿಂದ ಒಟ್ಟಾರೆ 8071 ಕೋಟಿ ರೂ.ಗಳ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೇ ಸಂದರ್ಭದಲ್ಲಿ ಕೇಂದ್ರ ಅಧ್ಯಯನ ತಂಡಕ್ಕೆ ವಿವರಿಸಿದರು.
2018 ಮತ್ತು 2019 ರಲ್ಲಿಯೂ ರಾಜ್ಯದಲ್ಲಿ ಭಾರಿ ಪ್ರವಾಹ ಮತ್ತು ಭೂ ಕುಸಿತ ಉಂಟಾಗಿ 22 ಜಿಲ್ಲೆಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಬಾರಿಯ ಪ್ರವಾಹದಲ್ಲಿ ಸುಮಾರು 4.03 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ವಿದ್ಯುತ್ ಪರಿವರ್ತಕಗಳು, ಶಾಲೆ, ಅಂಗನವಾಡಿ ಮತ್ತು ಸರ್ಕಾರಿ ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದರು.

ವಿಕೋಪ ತಡೆಯುವ ಮನೆ
ಪ್ರಕೃತಿ ವಿಕೋಪವನ್ನು ತಡೆಯಬಲ್ಲ ಮನೆಗಳನ್ನು ನಿರ್ಮಿಸುವ ಬಹುದೊಡ್ಡ ಪುನರ್ ನಿರ್ಮಾಣ ಯೋಜನೆಗಳಿಗೆ ರಾಜ್ಯ ಸರ್ಕಾರವು ಆರ್ಥಿಕ ನೆರವು ನೀಡುತ್ತಿದೆ ಎಂದು ಸಿಎಂ ಯಡಿಯೂರಪ್ಪ ಅವರು ಕೇಂದ್ರದ ತಂಡಕ್ಕೆ ಮಾಹಿತಿ ನೀಡಿದರು. ಜೊತೆಗೆ ಸಂಪೂರ್ಣ ಹಾಳಾದ ಪ್ರತಿ ಮನೆಗೆ 5 ಲಕ್ಷ ರೂಪಾಯಿಗಳು, ತೀವ್ರ ಹಾನಿಗೊಳಗಾದ ಮನೆಗಳಿಗೆ 3 ಲಕ್ಷ ರೂಪಾಯಿಗಳು ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳಿಗೆ 50 ಸಾವಿರ ರೂಪಾಯಿಗಳಂತೆ ಧನ ಸಹಾಯ ನೀಡುತ್ತಿದ್ದೇವೆ. ಇದಕ್ಕಾಗಿ ಕಳೆದ ವರ್ಷ 1500 ಕೋಟಿ ರೂ. ಗಳನ್ನು ವೆಚ್ಚ ಮಾಡಿದೆ. ಈ ವರ್ಷವೂ ಸಹ ಕೋವಿಡ್ ಸಂಕಷ್ಟದ ನಡುವೆಯೂ 200 ಕೋಟಿ ರೂ. ಗಳನ್ನು ಸರ್ಕಾರ ಭರಿಸಲಿದೆ ಎಂದರು.

ಕೋವಿಡ್, ಪ್ರವಾಹಕ್ಕೆ ಹಣ
ಕೋವಿಡ್ 19 ನಿಯಂತ್ರಣಕ್ಕೆ ಹಾಗೂ ಪ್ರವಾಹಕ್ಕಾಗಿ ರಾಜ್ಯ ವಿಕೋಪ ಪರಿಹಾರ ನಿಧಿಯಡಿ 460 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳ ಹಾಗೂ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಮೊತ್ತದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿವರಿಸಿದರು.
ಕಳೆದ ಐದು ತಿಂಗಳುಗಳಲ್ಲಿ ಕೇವಲ 460 ಕೋಟಿ ರೂಪಾಯಿಗಳಷ್ಟು ಹಣವನ್ನು ಮಾತ್ರ ವ್ಯಯಿಸಲಾಗಿದೆ. ರಾಜ್ಯ ವಿಕೋಪ ಪರಿಹಾರ ನಿಧಿ ಹಾಗೂ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಡಿ ನೆರವು ಒದಗಿಸುವ ಮಾರ್ಗಸೂಚಿಗಳು ಈ ವರ್ಷವೇ ಪರಿಷ್ಕರಣೆಯಾಗಬೇಕಿದೆ. ಕೂಡಲೇ ಇದನ್ನು ಪರಿಷ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ, ಸಂಕಷ್ಟದಲ್ಲಿರುವ ಜನರ ಸಹಾಯಕ್ಕೆ ಹೆಚ್ಚಿನ ಮೊತ್ತವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರ ತಂಡಕ್ಕೆ ಮನವಿ ಮಾಡಿದರು.

ವಿಕೋಪ ನಿರ್ವಹಣಾ ಯೋಜನೆ
ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ಪ್ರಾಧಿಕಾರವು ರಾಜ್ಯ ವಿಕೋಪ ನಿರ್ವಹಣಾ ಯೋಜನೆ 2020ನ್ನು ಅನುಮೋದಿಸಿದೆ. ಯೋಜನೆಯು ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಪುನರ್ ನಿರ್ಮಾಣದ ಯೋಜನೆಗಳನ್ನು ಹೊಂದಿದೆ. ಅದಕ್ಕಾಗಿ ಕೇಂದ್ರ ಸರ್ಕಾರದ ಪರಿಹಾರದ ಅಗತ್ಯವಿದೆ ಎಂದರು.
ಕೇಂದ್ರ ಆರ್ಥಿಕ ಇಲಾಖೆಯ ನಿರ್ದೇಶಕ ಡಾ. ಭರತೇಂದು ಕುಮಾರ್ ಸಿಂಗ್, ಕೃಷಿ ಮತ್ತು ರೈತರ ಸಹಕಾರ ಸಚಿವಾಲಯದ ನಿರ್ದೇಶಕ ಡಾ. ಮನೋಹರನ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀಕ್ಷಕ ಅಭಿಯಂತರ ಸದಾನಂದ ಬಾಬು, ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀಕ್ಷಕ ಅಭಿಯಂತರ ಗುರುಪ್ರಸಾದ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ವಿ.ಪಿ. ರಾಜ್ವೇದಿ, ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೇರಿಂದತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications