ಲಾಕ್ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಿಂತನೆ!
ಬೆಂಗಳೂರು, ಏ. 05: ರಾಜ್ಯದಲ್ಲಿ ಕೊರೊನಾ ವೈರಸ್ ದೃಢಪಡುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್ಡೌನ್ ಜಾರಿಗೆ ತರಲಾಗಿದೆ. ಜನರು ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನಕೂಲವಾಗಲು ಲಾಕ್ಡೌನ್ ಜಾರಿಗೆ ತರಲಾಗಿದೆ. ಆದರೆ ಜನರು ಮಾತ್ರ ಆರಂಭಿಕ ದಿನಗಳಲ್ಲಿ ಮನೆಯಲ್ಲಿದ್ದು ಸಹಕರಿಸಿದಂತೆ ಈಗ ಸಹಕರಿಸುತ್ತಿಲ್ಲ.
ಜನರು ಸಹಕರಿಸದೇ ಇದ್ದರೆ ದೊಡ್ಡ ಸವಾಲನ್ನು ಎದುರಿಸ ಬೇಕಾಗುತ್ತದೆ. ಮುಂದುವರೆದ ಪಾಶ್ಚಾತ್ಯ ರಾಷ್ಟ್ರಗಳೇ ಮಾರಕ ಕೋವಿಡ್-19 ಎದುರಿಸುವಲ್ಲಿ ವಿಫಲವಾಗಿವೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಲಾಕ್ಡೌನ್ನ್ನು ಜನರು ಪಾಲಿಸದೇ ಇರುವುದಕ್ಕೆ ಸಿಎಂ ಯಡಿಯೂರಪ್ಪ ಕಳವಳ ವ್ಯಕ್ತಪಡಿಸಿದ್ದಾರೆ. ಜೊತೆಗೆ ಏಪ್ರಿಲ್ 14ಕ್ಕೆ ಕೊನೆಗೊಳ್ಳಲಿರುವ ಲಾಕ್ಡೌನ್ ವಿಸ್ತರಣೆ ಬಗ್ಗೆಯೂ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ.
ಕೋವಿಡ್ 19 ಪ್ರಕರಣಗಳ ಸಂಖ್ಯೆ ಕ್ಷಿಪ್ರವಾಗಿ ಏರಿಕೆಯಾಗುತ್ತಿದೆ
ಕೋವಿಡ್ 19 ಪ್ರಕರಣಗಳ ಸಂಖ್ಯೆ ಕ್ಷಿಪ್ರವಾಗಿ ಏರಿಕೆಯಾಗುತ್ತಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರೊ್ಒ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಜನತೆ ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ. ವಿಶ್ವದಾದ್ಯಂತ ಕೋವಿಡ್-19 ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಏಪ್ರಿಲ್ 14ರ ವರೆಗೆ ಲಾಕ್ಡೌನ್ ಘೋಷಣೆ ಮಾಡಿದ್ದಾರೆ. ಲಾಕ್ಡೌನ್ ಪಾಲಿಸದೇ ಇದ್ದರೆ ಮುಂದೆ ಕಠಿಣ ಸವಾಲನ್ನು ನಾವು ಎದುರಿಸಬೇಕಾಗುತ್ತದೆ ಎಂದು ಯಡಿಯೂರಪ್ಪ ಎಚ್ಚರಿಸಿದ್ದಾರೆ.
Exclusive ಕೋವಿಡ್-19: ದಿಗ್ಭ್ರಮೆ ಮೂಡಿಸುತ್ತಿದೆ ಕೇಂದ್ರಕ್ಕೆ ರಾಜ್ಯ ಕೊಟ್ಟ ಮಾಹಿತಿ!
ರಾಜ್ಯದಲ್ಲೂ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ
ನಮ್ಮ ರಾಜ್ಯದಲ್ಲಿಯೂ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ವೈರಸ್ ಪೀಡಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಹೆಚ್ಚುತ್ತಿದೆ. ಈ ವೈರಸ್ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚು ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದು, ಧಾರ್ಮಿಕ ಸ್ಥಳಗಳಲ್ಲಿ ಜನರು ಸೇರದಂತೆ ನಿರ್ಬಂಧಿಸುವುದರ ಜೊತೆಗೆ ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ರಾಜ್ಯದ ಜನತೆ ಲಾಕ್ ಡೌನ್ ನ ಹಿಂದಿನ ಆಶಯವನ್ನು ಹಾಗೂ ಲಾಕ್ ಡೌನ್ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ಅರಿತುಕೊಂಡು ಕಟ್ಟುನಿಟ್ಟಾಗಿ ಲಾಕ್ ಡೌನ್ ಆದೇಶ ಪಾಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ.
ಲಾಕ್ಡೌನ್ ವಿಸ್ತರಣೆ ಕುರಿತು ಪರಿಶೀಲಿಸಿ ಕ್ರಮ
ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಕೋವಿಡ್-19 ನಿಯಂತ್ರಣಕ್ಕೆ ಸಿಗದ ಸ್ಥಿತಿ ತಲುಪಿದೆ. ಪ್ರಸ್ತುತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೂಚಿಸಿರುವ ದೇಶವ್ಯಾಪ್ತಿ ಲಾಕ್ಡೌನ್ ಅವಧಿಯು ಏಪ್ರಿಲ್ 14 ರಂದು ಮುಕ್ತಾಯಗೊಳ್ಳುತ್ತಿದೆ. ಈ ಲಾಕ್ಡೌನನ್ನು ವಿಸ್ತರಿಸಬೇಕೋ ಬೇಡವೋ ಎಂಬ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದುದರಿಂದ ಈ ಕುರಿತಂತೆ ಸಲಹೆ ಸೂಚನೆಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಜನರಲ್ಲಿ ಮನವಿ ಮಾಡಿದ್ದಾರೆ. ಆದರೆ ಲಾಕ್ಡೌನ್ನ್ನು ಸೂಕ್ತವಾಗಿ ಪಾಲನೆ ಮಾಡಿದರೆ ಮಾತ್ರ ಲಾಕ್ಡೌನ್ ಅವಧಿ ಅಂತ್ಯವಾಗಲಿದೆ ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
ಕೊರೊನಾ ವೈರಸ್ ಹಾವಳಿಗೆ ಭಾರತದಲ್ಲಿ ತಡೆ, ವೈಜ್ಞಾನಿಕ ಕಾರಣ ಇಲ್ಲಿದೆ!
ರಾಜ್ಯದಲ್ಲಿ 146ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ
ರಾಜ್ಯದ 16 ಜಿಲ್ಲೆಗಳಲ್ಲಿ ಈಗಾಗಲೇ ಕೋವಿಡ್ 19 ಪ್ರಕರಗಳು ದೃಢಪಟ್ಟಿವೆ. ರಾಜ್ಯದಲ್ಲಿ ಕೊರೊನಾ ವೈರಸ್ಗೆ ಈಗಾಗಲೇ 4 ಜನರು ಬಲಿಯಾಗಿದ್ದಾರೆ. ಕೇವಲ 11 ಜನರು ಮಾತ್ರ ಈವರೆಗೆ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಜನರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಜನರು ಅರಿತು ನಡೆದರೆ ಮಾತ್ರ ಕೊರೊನಾ ವೈರಸ್ ವಿರುದ್ಧದ ಯುದ್ಧ ಗೆಲ್ಲುವುದು ಸಾಧ್ಯ ಎಂಬುದನ್ನು ಎಚ್ಚರಿಕೆ ಮೂಲಕ ಸಿಎಂ ಮನವಿ ಮಾಡಿಕೊಂಡಿದ್ದಾರೆ.