ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ದೆಹಲಿಗೆ ಹೋಗಿದ್ಯಾಕೆ? ಅಲ್ಲಿ ಮಾಡಿದ್ದೇನು?
ಬೆಂಗಳೂರು, ಜು. 21: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬಿಜೆಪಿಯಲ್ಲಿ ನಡೆಯುತ್ತಿರುವಾಗಲೇ ಸಿಎಂ ಆಪ್ತ ಶಾಸಕ ಎಂ.ಪಿ. ರೇಣುಕಾಚಾರ್ಯ ದೆಹಲಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರೇಣುಕಾಚಾರ್ಯ ಅವರ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಹಿಂದಿನಿಂದಲೂ ಶಾಸಕ ರೇಣುಕಾಚಾರ್ಯ ಅವರು ಸಿಎಂ ಯಡಿಯೂರಪ್ಪ ಅವರ ಪರವಾಗಿಯೇ ನಿಂತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ರೇಣುಕಾಚಾರ್ಯ ಅವರ ದೆಹಲಿ ಭೇಟಿ ಹಿಂದೆ ಮಹತ್ವದ ಕಾರಣವಿದೆ ಎನ್ನಲಾಗುತ್ತಿದೆ.
ದೆಹಲಿಗೆ ತೆರಳಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಹೈಕಮಾಂಡ್ ಬದಲಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ. ರೇಣುಕಾಚಾರ್ಯ ಅವರು ಸಿಎಂ ಯಡಿಯೂರಪ್ಪ ಅವರು ಕೊಟ್ಟಿದ್ದ ಸಂದೇಶವನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಖಚಿತವಾಗುತ್ತಿದ್ದಂತೆಯೆ ಶಾಸಕ ರೇಣುಕಾಚಾರ್ಯ ಅವರು ದೆಹಲಿಗೆ ತೆರಳಿದ್ದಾರೆ. ಅಲ್ಲಿಯೂ ಕೂಡ ಸಂಭಾವ್ಯ ಮುಖ್ಯಮಂತ್ರಿ ಎಂದು ಹೆಸರು ಚರ್ಚೆ ಆಗುತ್ತಿರುವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸಂದೇಶ ಕಳಿಸಿರಬಹುದು. ಮುಂದೆ ಅಧಿಕಾರ ಹಸ್ತಾಂತರ ಆದಲ್ಲಿ ಏನು ಮಾಡಬೇಕು ಎಂಬ ಸಂದೇಶ ವಿನಿಮಯ ಆಗಿರಬಹುದಾ? ಎಂಬ ಚರ್ಚೆ ನಡೆಯುತ್ತಿದೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲು ರೇಣುಕಾಚಾರ್ಯ ಸಮಯ ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಅರುಣ್ ಸಿಂಗ್ ಭೇಟಿಗೆ ಬುಧವಾರ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ತಮ್ಮ ದೆಹಲಿಗೆ ಭೇಟಿಯ ಕುರಿತು ಮಾಧ್ಯಮಗಳಿಗೆ ತಮ್ಮ ಕ್ಷೇತ್ರದ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಲು ಆಗಮಿಸಿರುವುದಾಗಿ ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ. ರಾಜ್ಯದ ನಾಯಕತ್ವ ಬದಲಾವಣೆಯ ಬಗ್ಗೆೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದೂ ರೇಣುಕಾಚಾರ್ಯ ತಿಳಿಸಿದ್ದಾರೆ.