ಅಭಿಮಾನಿಗಳು, ಆಪ್ತರಲ್ಲಿ ಮಹತ್ವದ ಮನವಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ!
ಬೆಂಗಳೂರು, ಜು. 21: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಟ್ವೀಟ್ ಮಾಡಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿರುವ ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ತಮ್ಮ ಅಭಿಮಾನಿಗಳು ಹಾಗೂ ಆಪ್ತ ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಯಾರೂ ಕೂಡ ಯಾರೂ ಕೂಡ ತಮ್ಮ ಪರವಾಗಿ ಪ್ರತಿಭಟನೆ ಮಾಡಬಾರದು ಎಂದು ಯಡಿಯೂರಪ್ಪ ವಿನಂತಿ ಮಾಡಿಕೊಂಡಿದ್ದಾರೆ.
ಜೊತೆಗೆ ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ ಕೊಡಲು ಅಥವಾ ಪ್ರತಿಭಟನೆಗಳನ್ನು ಮಾಡಲು ಯಾರೂ ಮುಂದಾಗಬಾರದು. ನನ್ನ ಮೇಲಿನ ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ತಮ್ಮ ಅಭಿಮಾನಿಗಳಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತವೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿನಂತಿಸಿದ್ದಾರೆ.
ಇದೇ ಜುಲೈ 26ಕ್ಕೆ ರಾಜ್ಯ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಾಗುತ್ತವೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಲಾಗುತ್ತಿದೆ ಎಂಬ ಚರ್ಚೆ ದೆಹಲಿ ಮಟ್ಟದಲ್ಲಿ ನಡೆಯುತ್ತಿದೆ. ಇದೇ ವಿಚಾರವಾಗಿ ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಪರ ಹಾಗೂ ವಿರೋಧವಾಗಿ ಚರ್ಚೆಗಳು ನಡೆಯುತ್ತಿವೆ.
ಜೊತೆಗೆ ವಿವಿಧ ಮಠಾಧೀಶರು ಕೂಡ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ಗೆ ಒತ್ತಾಯ ಮಾಡಿದ್ದಾರೆ. ನಾಳೆ ಇದೇ ವಿಚಾರವಾಗಿ ಕೆಲವು ಮಠಾಧೀಶರು ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.