ತೆರಿಗೆ ಸಂಗ್ರಹಣಾ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ: ಪ್ರಮುಖಾಂಶಗಳು
ಬೆಂಗಳೂರು, ಜೂನ್ 15: ''ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರತಿಕೂಲ ಪರಿಸ್ಥಿತಿ ಇದ್ದರೂ ತೆರಿಗೆ ಸಂಗ್ರಹ ತೃಪ್ತಿದಾಯಕವಾಗಿದ್ದು, ಕೋವಿಡ್ ನಿಯಂತ್ರಣ ನಿರ್ಬಂಧಗಳನ್ನು ಹಿಂಪಡೆದ ನಂತರ ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ'' ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆರ್ಥಿಕ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ ಮತ್ತು ಅಬಕಾರಿ ಇಲಾಖೆಯ ತೆರಿಗೆ ಸಂಗ್ರಹ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಈ ವೇಳೆ ಅಧಿಕಾರಿಗಳು ವಾಣಿಜ್ಯ ತೆರಿಗೆ ಇಲಾಖೆಯಲ್ಲಿ 2021-21ನೇ ಸಾಲಿನಲ್ಲಿ 82,443 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನೀಡಲಾಗಿದ್ದು, 82,462 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ.
ಇದರಲ್ಲಿ 65,659 ಕೋಟಿ ರೂ ಜಿಎಸ್ಟಿ ಮೂಲಕ, ಪೆಟ್ರೋಲ್/ಡೀಸೆಲ್ ಮೇಲಿನ ತೆರಿಗೆಮೂಲಕ 15,861 ಕೋಟಿ ರೂ, ಹಾಗೂ ವೃತ್ತಿ ತೆರಿಗೆ ಮೂಲಕ 942 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಒಟ್ಟು 11,409 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ವಾರ್ಷಿಕ ಗುರಿಯ ಶೇ. 14.92 ರಷ್ಟು ಸಾಧನೆಯಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಸ್ಟೇಟ್ ಜಿಎಸ್ ಟಿ ಸಂಗ್ರಹದಲ್ಲಿಯೂ ದ್ವಿತೀಯ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು. 2022 ಕ್ಕೆ ಜಿ.ಎಸ್.ಟಿ. ಪರಿಹಾರ ವ್ಯವಸ್ಥೆ ಅಂತ್ಯವಾಗಲಿದೆ. ಇದನ್ನು ಇನ್ನಷ್ಟು ವರ್ಷಗಳ ಕಾಲ ವಿಸ್ತರಿಸುವಂತೆ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡುವುದಾಗಿ ಮುಖ್ಯಮಂತ್ರಿ ಮಾಹಿತಿ ನೀಡಿದರು.
ಅಬಕಾರಿ ಇಲಾಖೆ: ರಾಜ್ಯದಲ್ಲಿ 2021-22ನೇ ಸಾಲಿಗೆ ಅಬಕಾರಿ ಇಲಾಖೆಯ ತೆರಿಗೆ ಸಂಗ್ರಹ ಗುರಿ 24,580 ಕೋಟಿ ರೂ. ಗಳಾಗಿದ್ದು, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಒಟ್ಟು 4284.05 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಿಗೆ ಹೋಲಿಸಿದರೆ, ಈ ವರ್ಷ ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ. 2020-21ರಲ್ಲಿ 23,332.10 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ ಬೆಳವಣಿಗೆ ದರ ಶೇ. 8.10 ರಷ್ಟಿದೆ ಎಂದು ಅಧಿಕಾರಿಗಳು ವಿವರಿಸಿದರು.
ತೆರಿಗೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಕಾರ್ಯದರ್ಶಿಗಳಾದ ಏಕ್ ರೂಪ್ ಕೌರ್ ಹಾಗೂ ಪಿ.ಸಿ. ಜಾಫರ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್, ಅಬಕಾರಿ ಇಲಾಖೆ ಆಯುಕ್ತ ಬಿ.ಲೋಕೇಶ್ ಭಾಗವಹಿಸಿದ್ದರು.