ಅಯ್ಯೋ, ಯಡಿಯೂರಪ್ಪ ಬಗ್ಗೆ ಸಿದ್ದರಾಮಯ್ಯ ಇದೆಂಥಾ ಮಾತು!
ಬೆಂಗಳೂರು, ಸೆ. 28: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಮೃದು ಧೋರಣೆ ಹೊಂದಿದ್ದಾರೆ ಎಂಬ ಆರೋಪಗಳನ್ನು ಎದುರಿಸುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬದಲಾಗಿದ್ದಾರೆ. ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ ಇದೀಗ ಒಂದಾದರ ಮೇಲೊಂದರಂತೆ ಹೊಸ ಅಸ್ತ್ರಗಳನ್ನು ಪ್ರಯೋಗಿಸುತ್ತಿದ್ದಾರೆ. ಅದಕ್ಕೆ ಕಾರಣವೂ ಇದೆ.
ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ತಂದಿದೆ. ಈ ಎರಡೂ ಕಾಯಿದೆಗಳಿಂದ ರೈತರ ಮಾರಣಹೋಮವಾಗಲಿದೆ ಎಂದು ಪ್ರಮುಖ ವಿಪಕ್ಷ ಕಾಂಗ್ರೆಸ್ ಆರೋಪಿಸಿದೆ. ಹೀಗಾಗಿ ರೈತ ಸಂಘಟನೆಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ಕೊಟ್ಟಿದೆ. ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಹೇಳಿರುವ ಮಾತು ಕೂಡ ಮುಂದೆ ಬಿಜೆಪಿ ಸರ್ಕಾರಕ್ಕೆ ಗಂಡಾಂತರ ಇರುವುದನ್ನು ಸ್ಪಷ್ಟಪಡಿಸಿದೆ. ಬಿಜೆಪಿ ಶಾಸಕರ ಲೇವಡಿ ಖಡಕ್ ಆಗಿ ಸಿದ್ದರಾಮಯ್ಯ ಉತ್ತರ ಕೊಡುವ ಮೂಲಕ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ವಿಧಾನಸಭೆ ವಿಸರ್ಜಿಸಿ
ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಯಾವ ನೈತಿಕತೆಯೂ ಇಲ್ಲ. ಈ ತಿದ್ದುಪಡಿಗಳಿಂದ ರೈತರ ಕಲ್ಯಾಣವಾಗುತ್ತದೆ ಎಂಬ ಭರವಸೆ ಇದ್ದರೆ ಬಿ.ಎಸ್. ಯಡಿಯೂರಪ್ಪ ಅವರು ಮೊದಲು ವಿಧಾನಸಭೆಯನ್ನು ವಿಸರ್ಜಿಸಿ ಇದೇ ವಿಷಯವನ್ನು ರಾಜ್ಯದ ಜನತೆಯ ಮುಂದಿಟ್ಟು ಚುನಾವಣೆಯನ್ನು ಎದುರಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕೊರೊನಾ ಸಂಕಟದಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ರೈತರು ಬೀದಿಗೆ ಬರಲಾರರು ಎಂಬ ದುಷ್ಟ ಆಲೋಚನೆಯಿಂದಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಷಾಮೀಲಾಗಿ ಈ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರಲು ತರಾತುರಿಯಲ್ಲಿ ಹೊರಟಿದೆ. ಆದರೆ ಇಡೀ ದೇಶದ ರೈತರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಬೀದಿಗೆ ಇಳಿದು ಭಾರತೀಯ ಜನತಾ ಪಕ್ಷದ ಹುನ್ನಾರವನ್ನು ವಿಫಲಗೊಳಿಸಿದ್ದಾರೆ ಎಂದಿದ್ದಾರೆ.

ರೈತ ವಿರೋಧಿ ಕೇಸರಿ ಶಾಲು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತು ಮಾತಿಗೆ ತಾನು ರೈತ ನಾಯಕನೆಂದು ಕರೆದುಕೊಳ್ಳುತ್ತಾರೆ. ಸಂಘ ಪರಿವಾರದ ಕೇಸರಿಶಾಲು ಕಿತ್ತುಹಾಕಿ ಹಸಿರು ಶಾಲು ಹೊದ್ದುಕೊಂಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಆಗುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ರೈತ ವಿರೋಧಿ ಕೇಸರಿ ಶಾಲು ಹೊರಗೆ ಬಂದಿದೆ.
ಸಿಎಂ ಯಡಿಯೂರಪ್ಪ ಅವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ. ಈ ಬಾರಿ ಮುಖ್ಯಮಂತ್ರಿಯಾದಾಗ ಇಡೀ ರೈತ ಸಮುದಾಯವನ್ನೇ ಸಾಯಿಸಲು ಹೊರಟಿದ್ದಾರೆ. ರೈತರ ಕಣ್ಣೀರ ಶಾಪ ಈ ಪಕ್ಷ ಮತ್ತು ಸರ್ಕಾರಕ್ಕೆ ತಟ್ಟದೆ ಇರದು.
ಭಾರತೀಯ ಜನತಾ ಪಕ್ಷ ಹುಟ್ಟಿನಿಂದಲೇ ರೈತ ವಿರೋಧಿ. ಅದು ಬಂಡವಾಳಿಗರು, ಉದ್ಯಮಿಗಳು ಮತ್ತು ವರ್ತಕರ ಪಕ್ಷ.

ಯಡಿಯೂರಪ್ಪ ಬೆತ್ತಲಾಗಿದ್ದಾರೆ!
ಬಿಜೆಪಿ ಪಕ್ಷದ ಡಿಎನ್ ಎನಲ್ಲಿಯೇ ರೈತ ವಿರೋಧಿ ವಿಷ ಇದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾವೇರಿ-ಕೃಷ್ಣ ನದಿನೀರು ಹಂಚಿಕೆಯಲ್ಲಿ ದ್ರೋಹ ಎಸಗಿತು, ಮಹದಾಯಿ-ಮೇಕೆದಾಟು ಯೋಜನೆಗಳಲ್ಲಿ ಮೋಸ ಮಾಡಿದೆ, ಬೀಜ-ರಸಗೊಬ್ಬರ ಪೂರೈಕೆ ಮಾಡದೆ ರೈತರನ್ನು ಗೋಳುಹೊಯ್ಕೊಳ್ಳುತ್ತಾ ಇದೆ. ಬಿಜೆಪಿಗೆ ಯಾಕೆ ರೈತರ ಮೇಲೆ ಇಷ್ಟೊಂದು ದ್ವೇಷ? ಕರ್ನಾಟಕದ ಬಗ್ಗೆ ಯಾಕೆ ಸೇಡಿನ ಭಾವನೆ? ಎನ್ನುವ ಪ್ರಶ್ನೆಗೆ ರಾಜ್ಯದ ಜನತೆಗೆ ಈಗ ಉತ್ತರ ಸಿಕ್ಕಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈಗ ರೈತ ಸಮುದಾಯದ ಎದುರು ನೀವು ಬೆತ್ತಲಾಗಿದ್ದಾರೆ. ಅವರು ಹೊದ್ದುಕೊಂಡಿರುವ ಯಾವ ಹಸಿರು ಶಾಲು ಕೂಡಾ ಅವರ ಮಾನ ಮುಚ್ಚಲಾರದು. ಯಡಿಯೂರಪ್ಪ ಅವರು ನಿಜವಾಗಿಯೂ ರೈತರ ಪರವಾಗಿದ್ದರೆ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರ ಜೊತೆ ನಿಂತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Recommended Video

ಈಗಲೂ ಕಾಲ ಮಿಂಚಿಲ್ಲ
ದೇಶವನ್ನು ಕಾರ್ಪೋರೇಟ್ ಕುಳಗಳು ಮತ್ತು ರಿಯಲ್ ಎಸ್ಟೇಟ್ ಧಣಿಗಳಿಗೆ ಮಾರಾಟ ಮಾಡಲು ಹೊರಟಿರುವ ಮೋದಿ ಅವರ ತಾಳಕ್ಕೆ ನೀವು ಕುಣಿಯತೊಡಗಿದರೆ ವರ್ತಮಾನ ಮಾತ್ರವಲ್ಲ ಇತಿಹಾಸ ಕೂಡಾ ಬಿ.ಎಸ್. ಯಡಿಯೂರಪ್ಪ ಅವರನ್ನು ಕ್ಷಮಿಸಲಾರದು. ಈಗಲೂ ಕಾಲ ಮಿಂಚಿಲ್ಲ, ಯಡಿಯೂರಪ್ಪ ಅವರು ಆತ್ಮಸಾಕ್ಷಿಗೆ ಕರೆಗೊಟ್ಟು ರೈತರ ಬೇಡಿಕೆ ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.












Click it and Unblock the Notifications