ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಭೇಟಿಯಾದ ಬಿಎಸ್ವೈ ಪುತ್ರ ವಿಜಯೇಂದ್ರ
ಬೆಂಗಳೂರು, ಫೆ 5: ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಗುರುವಾರ (ಫೆ 6) ಬೆಳಗ್ಗೆ 10.30ಕ್ಕೆ, ರಾಜಭವನದಲ್ಲಿ ಮಹೂರ್ತ ನಿಗದಿಯಾಗಿದೆ. ಎಷ್ಟು ಜನ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿ, ಸಿಎಂ ಯಡಿಯೂರಪ್ಪನವರಿಗೂ ಇದುವರೆಗೂ ಇಲ್ಲ ಎಂದು ಹೇಳಲಾಗುತ್ತಿದೆ.
ಈ ನಡುವೆ, ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ, ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕುಮಾರಕೃಪ ಅತಿಥಿಗೃಹದ ರಸ್ತೆಯಲ್ಲಿರುವ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ, ಅವರನ್ನು ವಿಜಯೇಂದ್ರ ಭೇಟಿಯಾಗಿದ್ದಾರೆ. ಸಂಪುಟ ವಿಸ್ತರಣೆಗೆ ಅವರನ್ನು ಅಧಿಕೃತವಾಗಿ ಆಹ್ವಾನಿಸಲು ವಿಜಯೇಂದ್ರ, ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದರು.

ಶಿಷ್ಟಾಚಾರದಂತೆ, ನಾಳೆ ನಡೆಯಲಿರುವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಲು ವಿಜಯೇಂದ್ರ, ವಿರೋಧ ಪಕ್ಷದ ನಾಯಕರ ಮನೆಗೆ ತೆರಳಿದ್ದರು. ಆಹ್ವಾನಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿತ್ತು ಎನ್ನುವುದರ ಬಗ್ಗೆ ಸದ್ಯಕ್ಕೆ ಮಾಹಿತಿ ಲಭ್ಯವಾಗಿಲ್ಲ.
ರಾಜಭವನದಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕರಿಸಲಿರುವ ಆಯ್ದ ಶಾಸಕರಿಗೆ ಯಡಿಯೂರಪ್ಪ ಅವರೇ ಖುದ್ದಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನಿಸಿದ್ದಾರೆ.
ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಸೋಮಶೇಖರ್, ನಾರಾಯಣಗೌಡ, ಶಿವರಾಂ ಹೆಬ್ಬಾರ್, ಆನಂದ್ ಸಿಂಗ್, ಕೆ.ಸುಧಾಕರ್, ಬೈರತಿ ಬಸವರಾಜು, ಬಿ.ಸಿ.ಪಾಟೀಲ್, ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಪಕ್ಕಾ ಆಗಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications