ಮಾಸ್ಕ್ ದಂಡ ಕಡಿತಗೊಳಿಸಿ ಸಿಎಂ ಯಡಿಯೂರಪ್ಪ ಮಹತ್ವದ ಆದೇಶ!
ಬೆಂಗಳೂರು, ಅ. 07: ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಸಾರ್ವಜನಿಕರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಿಂದಕ್ಕೆ ಪಡೆದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶಗಳಲ್ಲಿ 1 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ಆದೇಶ ನೀಡಿತ್ತು. ಆದರೆ ಸಾರ್ವಜನಿಕವಾಗಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದಂಡದ ಮೊತ್ತದಲ್ಲಿ ಕಡಿತಗೊಳಿಸಿ ಮರು ಆದೇಶ ಮಾಡಲಾಗಿದೆ.
ತಜ್ಞರ ಅಭಿಪ್ರಾಯ ಹಾಗೂ ಸಾರ್ವಜನಿಕರ ವಿರೋಧದ ಹಿನ್ನೆಲೆಯಲ್ಲಿ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ ಒಂದು ಸಾವಿರ ರೂಪಾಯಿಗಳಿಂದ 250 ರೂಪಾಯಿಗಳಿಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಐನೂರು ರೂಪಾಯಿಗಳಿಂದ 100 ರೂಪಾಯಿಗಳಿಗೆ ದಂಡದ ಹಣವನ್ನು ಕಡಿತಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದರೆ ಕೋವಿಡ್-19 ತಡೆಗಟ್ಟಲು ಈ ವರೆಗೆ ಯಾವುದೇ ಲಸಿಕೆ ಇರದಿದ್ದರಿಂದ ಮಾಸ್ಕ್ ಬಳಕೆ, ಸ್ಯಾನಿಟೈಸರ್ನ ಉಪಯೋಗ ಹಾಗೂ ಸಾಮಾಜಿಕ ಸಂತರ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ 'ಜೀವ ಮತ್ತು ಜೀವನ' ಎರಡನ್ನೂ ಸರಿದೂಗಿಸಲು ಸರ್ಕಾರ ಪ್ರಯತ್ನಿಸುತ್ತಿದ್ದ ಸಾರ್ವಜನಿಕರು ಸಹಕಾರ ಮೊಡಬೇಕು ಎಂದು ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುವುದು ಹೆಚ್ಚಾಗಿದ್ದರಿಂದ ದಂಡದ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದರು. ಅದರಂತೆ ದಂಡದ ಮೊತ್ತವನ್ನು ಹೆಚ್ಚಿಸಲು ಸರ್ಕಾರಕ್ಕೆ ಸಲಹೆ ಕೊಟ್ಟು ಹೆಚ್ಚಿಸಿದ್ದರು. ಇದೀಗ ಸಾರ್ವಜನಿಕರ ತೀವ್ರ ವಿರೋಧದಿಂದ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಧ್ಯ ಪ್ರವೇಶಿಸಿ ದಂಡದ ಮೊತ್ತವನ್ನು ಕಡಿಮೆ ಮಾಡಿದ್ದಾರೆ.
Recommended Video