ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಹೈಕಮಾಂಡ್ ನಿರ್ಧಾರ: ಬಿಎಸ್ವೈ
ಬೆಂಗಳೂರು, ಸೆ. 17: ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟದ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಲಬುರಗಿಯಲ್ಲಿ ಮಾತನಾಡಿದ್ದಾರೆ.
ಇಂದು ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಜೊತೆ ಚರ್ಚಿಸಲಿದ್ದೇನೆ. ಸಚಿವ ಸಂಪುಟ ಪುನರ್ರಚನೆ ಅಥವಾ ವಿಸ್ತರಣೆ ಕೇಂದ್ರ ನಾಯಕರ ನಿರ್ಧಾರದ ಮೇಲೆ ಅವಲಂಬಿಸಿದೆ. ಪ್ರಧಾನಿ ಮೋದಿ ಸೇರಿದಂತೆ ವರಿಷ್ಟರೊಂದಿಗೆ ಚರ್ಚಿಸಿ ಆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಲು ಸಿಎಂ ಯಡಿಯೂರಪ್ಪ ನಿರಾಕರಿಸಿದರು. ಪ್ರಧಾನಿ ಮೋದಿ ಹಾಗೂ ಕೇಂದ್ರದ ಇತರ ಸಚಿವರೊಂದಿಗೆ ರಾಜ್ಯದ ಅತಿವೃಷ್ಟಿ, ಹೆಚ್ಚಿನ ಅನುದಾನ ಬಿಡುಗಡೆ ಇತ್ಯಾದಿ ವಿಷಯಗಳನ್ನು ಚರ್ಚಿಸಲಾಗುವುದು. ಕೋವಿಡ್ ಸಂಕಷ್ಟದ ಕಾರಣದಿಂದಾಗಿ ಹಣಕಾಸಿನ ತೊಂದರೆಯಾಗಿದೆ ಎಂದರು.

ಇಷ್ಟೆಲ್ಲ ಸಮಸ್ಯೆಗಳಿದ್ದರೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಿಗದಿಗೊಳಿಸಿದ ಹಣ ಬಿಡುಗಡೆ ಮಾಡುತ್ತೇನೆ. ಇನ್ನೂ 300 ಕೋಟಿ ರೂಪಾಯಿ ಹಣವನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಬಿಡುಗಡೆ ಮಾಡುತ್ತೇನೆ ಎಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಕೊಟ್ಟರು. ಆ ಬಳಿಕ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು.












Click it and Unblock the Notifications