ಪ್ರವಾಹ ಪೀಡಿತ ಗ್ರಾಮಗಳ ಹೆಸರು ಬದಲಾಯಿಸಲ್ಲ : ಯಡಿಯೂರಪ್ಪ
ಬೆಂಗಳೂರು, ಆಗಸ್ಟ್ 16 : ಪ್ರವಾಹ ಪೀಡಿತ ಗ್ರಾಮಗಳ ಪುನಶ್ಚೇತನದ ವಿಚಾರದಲ್ಲಿ ಉಂಟಾಗಿದ್ದ ಗೊಂದಲಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. ಉದ್ಯಮಿದಾರರ ಜೊತೆ ಸಭೆ ನಡೆಸಿದ್ದ ಸಿಎಂ ದೇಣಿಗೆ ನೀಡುವಂತೆ ಮನವಿ ಮಾಡಿದ್ದರು.
ಉದ್ಯಮಿಗಳ ಜೊತೆ ಸಭೆ ನಡೆಸಿದ್ದ ಯಡಿಯೂರಪ್ಪ, "ಪ್ರವಾಹ ಪೀಡಿತ ಗ್ರಾಮಗಳ ಪುನಶ್ಚೇತನಕ್ಕೆ 10 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಪುನಶ್ಚೇತನಗೊಳ್ಳುವ ಗ್ರಾಮಗಳಿಗೆ ನಾಮಕರಣ ಮಾಡಲಾಗುವುದು" ಎಂದು ಹೇಳಿದ್ದರು.
ಮುಖ್ಯಮಂತ್ರಿಗಳ ಈ ಹೇಳಿಕೆ ಗೊಂದಲಕ್ಕೆ ಕಾರಣವಾಗಿತ್ತು. ಪ್ರವಾಹಕ್ಕೆ ತುತ್ತಾಗಿದ್ದ ಹಲವು ಗ್ರಾಮಗಳ ಹೆಸರು ಬದಲಾವಣೆಯಾಗಲಿದೆ ಎಂಬ ಸುದ್ದಿಗಳು ಹಬ್ಬಿದ್ದವು. ಜನರು ಸಹ ಸರ್ಕಾರ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಶುಕ್ರವಾರ ಟ್ವೀಟ್ ಮಾಡುವ ಮೂಲಕ ಯಡಿಯೂರಪ್ಪ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ. "ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ದಿಗಾಗಿ 10 ಕೋಟಿ ರೂ.ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ಇಡಲಾಗುವುದು. ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವಿಲ್ಲ" ಎಂದು ತಮ್ಮ ಟ್ವೀಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ 22 ಜಿಲ್ಲೆಯ 103 ತಾಲೂಕು ನೆರೆ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಮಹಾರಾಷ್ಟ್ರ, ಕೇರಳ, ಕರ್ನಾಟಕದಲ್ಲಿ ಮಳೆಯಿಂದ ಭೂ ಕುಸಿತ ಸಂಭವಿಸಿದೆ. ಹಳ್ಳಿ, ಪಟ್ಟಣ ಜಲಾವೃತವಾಗಿದ್ದವು.
56 ಸಾವಿರ ಮನೆ ವಾಸಕ್ಕೆ ಯೋಗ್ಯವಿಲ್ಲ ಎಂದು ಘೋಷಣೆ ಮಾಡಲಾಗಿದೆ. 22 ಜಿಲ್ಲೆಗಳ ಪೈಕಿ 200 ಗ್ರಾಮವನ್ನು ಸ್ಥಳಾಂತರಿಸುವ ಪರಿಸ್ಥಿತಿ ಇದೆ. ಇಂಥ ಸ್ಥಿತಿಯಲ್ಲಿ ಉದ್ಯಮಿದಾರರು ಸಹಾಯ ಹಸ್ತ ಚಾಚಬೇಕು. ಉದಾರ ಮನಸ್ಸಿನಿಂದ ದೇಣಿಗೆ ನೀಡಿ ಎಂದು ಯಡಿಯೂರಪ್ಪ ಸಭೆಯಲ್ಲಿ ಹೇಳಿದ್ದರು.












Click it and Unblock the Notifications