ಮೈತ್ರಿ ಸರ್ಕಾರ : ಕಾಂಗ್ರೆಸ್ ಶಾಸಕರ ಹೇಳಿಕೆಗೆ ರಾಹುಲ್ ಅಸಮಾಧಾನ
Recommended Video
ಬೆಂಗಳೂರು, ಮೇ 19 : ಕರ್ನಾಟಕ ಕಾಂಗ್ರೆಸ್ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭಾನುವಾರ ಭೇಟಿಯಾದರು. ಮೈತ್ರಿ ಸರ್ಕಾರದ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಜೊತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಸಭೆ ನಡೆಸಿದರು. ರಾಜ್ಯದ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಭೆಯ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, 'ಎಲ್ಲಾ ನಾಯಕರ ಹೇಳಿಕೆ ಬಗ್ಗೆಯೂ ರಾಹುಲ್ ಗಾಂಧಿ ಅವರ ಜೊತೆ ಚರ್ಚೆ ನಡೆಸಿದ್ದೇವೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಎಂದು ಎಲ್ಲರಿಗೂ ಸೂಚನೆ ನೀಡಲು ರಾಹುಲ್ ಸೂಚಿಸಿದ್ದಾರೆ' ಎಂದರು.
ರಾಹುಲ್ ಗಾಂಧಿ ಅವರ ಜೊತೆಗಿನ ಸಭೆ ಬಳಿಕ ಎಲ್ಲಾ ನಾಯಕರು ಕರ್ನಾಟಕ ಭವನಕ್ಕೆ ಆಗಮಿಸಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವ ಡಿ.ಕೆ.ಶಿವಕುಮಾರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.....

ರಾಹುಲ್ ಗಾಂಧಿ ಪ್ರಶ್ನೆ
'ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಜೊತೆ ನಾವಿದ್ದೇವೆ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ, ಮೈತ್ರಿ ಸರ್ಕಾರ ಪತನವಾಗುವ ಮಾತುಗಳು ಏಕೆ ಕೇಳಿಬರುತ್ತಿವೆ?' ಎಂದು ರಾಹುಲ್ ಗಾಂಧಿ ಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ.

ಅಶಿಸ್ತು ಸಹಿಸುವುದಿಲ್ಲ
'ಪಕ್ಷದಲ್ಲಿ ಯಾವುದೇ ತರಹದ ಅಶಿಸ್ತನ್ನು ನಾವು ಸಹಿಸುವುದಿಲ್ಲ. ನಿಯಮ ಮೀರಿದರೆ ಕಠಿಣ ಕ್ರಮವನ್ನು ಕೈಗೊಳ್ಳಿ' ಎಂದು ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ಗೆ ಲಾಭವಿಲ್ಲ
ಮೈತ್ರಿ ಸರ್ಕಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭವಿಲ್ಲ. ಲೋಕಸಭಾ ಚುನಾವಣೆ ಸಮಯದಲ್ಲಿಯೇ ಸಾಕಷ್ಟು ವಿರೋಧ, ಮುಜುಗರ ಅನುಭವಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರ ಮುಂದೆ ಹೇಳಿದ್ದಾರೆ.

ಮೈತ್ರಿ ಸರ್ಕಾರ ಸುಭದ್ರ
ಮೈತ್ರಿ ಸರ್ಕಾರ ಪತನಗೊಳ್ಳುವ ಯಾವುದೇ ಆತಂಕವಿಲ್ಲ, ಸರ್ಕಾರ ಸುಭದ್ರವಾಗಿದೆ ಎಂದು ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿದ್ದಾರೆ. ನಾಯಕರ ನಡುವಿನ ಅಸಮಾಧಾನವನ್ನು ಮಾತುಕತೆ ಮೂಲಕ ಹರಿಹರಿಸಿಕೊಳ್ಳಲಾಗುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.












Click it and Unblock the Notifications