ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಇರಾನ್-ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ. ಗಲ್ಫ್ ರಾಷ್ಟ್ರಗಳಿಂದ ಆಮದಾಗುತ್ತಿದ್ದ ಕಚ್ಚಾ ತೈಲ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವುದರಿಂದ ದೇಶಾದ್ಯಂತ ಅಡುಗೆ ಅನಿಲ (LPG) ಬಿಕ್ಕಟ್ಟು ಎದುರಾಗಿದೆ. ಅದರಲ್ಲೂ ವಿಶೇಷವಾಗಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ಕರ್ನಾಟಕದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮದ ಕತ್ತು ಹಿಸುಕಿದಂತಾಗಿದೆ.
ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ
ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ಗಳ ಸರಬರಾಜು ಬಹುತೇಕ ಸ್ಥಗಿತಗೊಂಡಿರುವುದೇ ಕಾಳಸಂತೆಕೋರರಿಗೆ ವರದಾನವಾಗಿದೆ. ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿ, 1,950 ರೂಪಾಯಿ ಬೆಲೆಯ ಕಮರ್ಷಿಯಲ್ ಸಿಲಿಂಡರ್ ಅನ್ನು ಬರೋಬ್ಬರಿ 5,000 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಹೊಡೆತ ತಿಂದಿರುವ ಹೋಟೆಲ್ ಮಾಲೀಕರು ತಮ್ಮ ದೈನಂದಿನ ವ್ಯಾಪಾರ-ವಹಿವಾಟು ನಡೆಸಲು ಅನಿವಾರ್ಯವಾಗಿ ಗೃಹಬಳಕೆಯ ಸಿಲಿಂಡರ್ಗಳ ಮೊರೆ ಹೋಗುತ್ತಿದ್ದಾರೆ. ಆದರೆ, ಇದು ನಿಯಮಬಾಹಿರವಾಗಿದ್ದು, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಚಾಟಿ ಬೀಸಿದೆ.

ರಾಜ್ಯಾದ್ಯಂತ ಅಧಿಕಾರಿಗಳ ದಿಢೀರ್ ದಾಳಿ
ಹೋಟೆಲ್ಗಳಲ್ಲಿ ಗೃಹಬಳಕೆ ಸಿಲಿಂಡರ್ ಬಳಸುತ್ತಿರುವ ಖಚಿತ ಮಾಹಿತಿ ಮೇರೆಗೆ ನಿರಂತರವಾಗಿ ದಾಳಿ ನಡೆಸುತ್ತಿರುವ ಆಹಾರ ಇಲಾಖೆ ಅಧಿಕಾರಿಗಳು, ಇದುವರೆಗೆ ಒಟ್ಟು 316 ಗೃಹಬಳಕೆಯ ಸಿಲಿಂಡರ್ಗಳನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿ 45, ಚಿಕ್ಕಜಾಲದಲ್ಲಿ 209, ಯಾದಗಿರಿಯಲ್ಲಿ 46, ದಾವಣಗೆರೆಯಲ್ಲಿ 13 ಹಾಗೂ ಶಿವಮೊಗ್ಗದಲ್ಲಿ 3 ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಕೆಜಿಎಫ್ನಲ್ಲಿ ಅಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದ ಏಜೆನ್ಸಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗೃಹಬಳಕೆ ಗ್ಯಾಸ್ ಅನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
ಹೋಟೆಲ್ ಉದ್ಯಮಕ್ಕೆ ತೀವ್ರ ಸಂಕಷ್ಟ
ವಾಣಿಜ್ಯ ಸಿಲಿಂಡರ್ ಕೊರತೆ ಹೋಟೆಲ್ ಉದ್ಯಮದ ಮೇಲೆ ದೊಡ್ಡ ಪೆಟ್ಟು ನೀಡಿದೆ. ಬೆಳಗಿನ ಉಪಾಹಾರದಿಂದ ಹಿಡಿದು ರಾತ್ರಿಯ ಊಟದವರೆಗೆ ಎಲ್ಲದಕ್ಕೂ ಗ್ಯಾಸ್ ಅತ್ಯಗತ್ಯ. ಆದರೆ ಬ್ಲಾಕ್ ಮಾರ್ಕೆಟ್ನಲ್ಲಿ ವಿಪರೀತ ಬೆಲೆ ಕೊಟ್ಟು ಸಿಲಿಂಡರ್ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ, ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೃಹಬಳಕೆ ಸಿಲಿಂಡರ್ ಬಳಸಿದರೆ ಇಲಾಖೆಯ ದಾಳಿಯ ಭೀತಿ ಎದುರಾಗಿದೆ.
ಅಗತ್ಯ ಸೇವೆಗಳಿಗೆ ಮಾತ್ರ ವಾಣಿಜ್ಯ ಗ್ಯಾಸ್ ಮೀಸಲು
ಪ್ರಸ್ತುತ ಲಭ್ಯವಿರುವ ಒಟ್ಟು ಶೇ. 20ರಷ್ಟು ವಾಣಿಜ್ಯ ಸಿಲಿಂಡರ್ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅತ್ಯಗತ್ಯ ಸೇವೆಗಳಿಗೆ ಮಾತ್ರ ವಿತರಿಸಲು ಇಲಾಖೆ ಸೂಚಿಸಿದೆ. ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ವಿಮಾನ ಹಾಗೂ ರೈಲು, ಬಸ್ ನಿಲ್ದಾಣದ ಕ್ಯಾಂಟೀನ್ಗಳು, ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆ, ಸರ್ಕಾರಿ ಕಚೇರಿಗಳು ಮತ್ತು ವೃದ್ಧಾಶ್ರಮಗಳಿಗೆ ಆದ್ಯತೆ ಮೇರೆಗೆ ಪೂರೈಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈವರೆಗೆ 14.2 ಕೆಜಿ ತೂಕದ ಒಟ್ಟು 3,86,363 ಗೃಹಬಳಕೆ ಹಾಗೂ 6,371 ವಾಣಿಜ್ಯ ಸಿಲಿಂಡರ್ಗಳನ್ನು ವಿತರಿಸಲಾಗಿದ್ದು, ಸಾರ್ವಜನಿಕರ ಗೃಹಬಳಕೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಆಹಾರ ಇಲಾಖೆಯು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಗ್ಯಾಸ್ ಬುಕ್ಕಿಂಗ್: ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ
ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಸಾರ್ವಜನಿಕರು ಮುಗಿಬಿದ್ದು ಬುಕಿಂಗ್ ಮಾಡುತ್ತಿದ್ದಾರೆ. ಈ ಪರಿಸ್ಥಿತಿಯನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಿರಾತಕರು, ಗ್ಯಾಸ್ ಏಜೆನ್ಸಿಗಳ ಸೋಗಿನಲ್ಲಿ ನಕಲಿ ಲಿಂಕ್ಗಳನ್ನು ಕಳುಹಿಸಿ ಹಣ ದೋಚುವ ಕೃತ್ಯಕ್ಕೆ ಇಳಿದಿದ್ದಾರೆ. ಗ್ಯಾಸ್ ಬುಕ್ ಮಾಡುವ ನೆಪದಲ್ಲಿ ಬರುವ ಯಾವುದೇ ಅನುಮಾನಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು. ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದಿರಬೇಕು ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಪೊಲೀಸ್ ಇಲಾಖೆ ಜಾಗೃತಿ ಮೂಡಿಸುತ್ತಿದೆ.












Click it and Unblock the Notifications