ಸಿಇಟಿ: ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಪ್ರಾರಂಭ
ಬೆಂಗಳೂರು ಜುಲೈ 30: 2022-23ನೇ ಶೈಕ್ಷಣಿಕ ಸಾಲಿನಲ್ಲಿ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ. ಈ ವರ್ಷ ಎಲ್ಲ ಕೋರ್ಸ್ಗಳಲ್ಲಿ ಬಾಲಕಿಯರಿಗಿಂತ ಬಾಲಕರೇ ಮೇಲಗೈ ಸಾಧಿಸಿರುವುದು ವಿಶೇಷವಾಗಿದೆ.
ಈ ಬಗ್ಗೆ ಸಂತಸ ಹಂಚಿಕೊಂಡ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು, ಎಂಜಿನಿಯರಿಂಗ್, ಕೃಷಿ, ನ್ಯಾಚುರೋಪಥಿ ಮತ್ತು ಯೋಗ, ಪಶುಸಂಗೋಪನೆ, ಫಾರ್ಮಸಿ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ನಡೆಸಲಾಗಿತ್ತು. ಅಚ್ಚರಿ ಎಂದರೆ ಈ ಬಾರಿ ನ್ಯಾಚುರೋಪತಿ ವಿಭಾಗ ಹೊರತುಪಡಿಸಿ ಉಳಿದ ಎಲ್ಲ ವಿಭಾಗಗಳಲ್ಲೂ ಬಾಲಕರೇ ಅಗ್ರ 9 ರಾಂಕ್ ಗಳನ್ನೂ ತಮ್ಮದಾಗಿಸಿಕೊಂಡು ಪಾರಮ್ಯ ಮೆರೆದಿದ್ದಾರೆ.
ಎಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ಒಂಬತ್ತು ರಾಂಕ್ ಪಡೆದಿರುವುದು ಬಾಲಕರೇ. ಎಲ್ಲರೂ ಬೆಂಗಳೂರಿನ ವಿದ್ಯಾರ್ಥಿಗಳೇ ಎಂಬುದು ಮತ್ತೊಂದು ವಿಶೇಷವಾಗಿದೆ. ಈ ಪೈಕಿ ಸಿಬಿಎಸ್ಸಿಯಲ್ಲಿ ಹೆಚ್ಚು ಅಂಕ ಪಡೆದವರ ಸಂಖ್ಯೆ ಅಧಿಕವಾಗಿದೆ.
ಈ ಬಾರಿಯ ಸಿಇಟಿ ಯಲ್ಲಿ ವಿದ್ಯಾರ್ಥಿಗಳಿಗೆ 7 ಕೃಪಾಂಕಗಳನ್ನು ಅಂದರೆ ಗಣಿತ ವಿಷಯಕ್ಕೆ ಐದು, ರಸಾಯನ ವಿಜ್ಞಾನ ಮತ್ತು ಭೌತವಿಜ್ಞಾನ ವಿಷಯಕ್ಕೆ ತಲಾ ಒಂದು ಅಂಕ ಕೃಪಾಂಗಳನ್ನು ನೀಡಲಾಗಿದೆ. ಒಟ್ಟು 2,16,559 ಮಂದಿ ಸಿಇಟಿಗೆ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 2,10,829 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯದ ಒಟ್ಡು 486 ಕೇಂದ್ರಗಳಲ್ಲಿ ಸಿಇಟಿ ನಡೆಸಲಾಗಿತ್ತು. ವಿದ್ಯಾರ್ಥಿಗಳು ಕೆಸಿಇಟಿ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://karresults.nic.in ನೋಡಿ ತಿಳಿದುಕೊಳ್ಳಬಹುದು ಎಂದು ಅವರು ತಿಳಿಸಿದರು.

ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್
ಆಗಸ್ಟ್ 5ರಿಂದ ದಾಖಲೆಗಳ ಪರಿಶೀಲನೆ ಆನ್ ಲೈನ್ ನಲ್ಲಿ ನಡೆಯಲಿದೆ. ರಕ್ಷಣೆ, ಎನ್ಸಿಸಿ, ಕ್ರೀಡೆ, ವಿಕಲಚೇತನ ಇತ್ಯಾದಿ ಕೋಟಾಗಳ ಅಡಿಯಲ್ಲಿ ಬರುವ ಶೇ.10ರಷ್ಟು ವಿದ್ಯಾರ್ಥಿಗಳ ದಾಖಲೆಗಳನ್ನು ಮಾತ್ರ ಭೌತಿಕವಾಗಿ ಪರಿಶೀಲಿಸಲಾಗುತ್ತದೆ. ನೀಟ್ ಪರೀಕ್ಷೆಯ ಫಲಿತಾಂಶ ಬಂದ ಬಳಿಕ, ಅಲ್ಲಿಯ ಅಂಕಗಳನ್ನು ಪರಿಗಣಿಸಿ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.

ಕೆಇಎ: ಬಹುತೇಕ ಎಲ್ಲವೂ ಆನ್ಲೈನ್
ಕೌನ್ಸೆಲಿಂಗ್ ಮತ್ತು ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಎದುರಾಗುತ್ತಿದ್ದ ಅನೇಕ ಸಮಸ್ಯೆಗಳನ್ನು ಮನಗಂಡು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಲ್ಲ ಹಂತದ ಪ್ರಕ್ರಿಯೆಗಳು ಆನ್ಲೈನ್ನಲ್ಲಿ ನಡೆಯಲಿವೆ. ಆದಾಯ, ಜಾತಿ, ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರ, ಭಾಷಾ ಅಲ್ಪಸಂಖ್ಯಾತರ ಪ್ರಮಾಣ ಪತ್ರ, ಇತ್ಯಾದಿ ಪ್ರಮಾಣ ಪತ್ರಗಳನ್ನು ಆನ್ ಲೈನ್ ನಲ್ಲೇ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳಿಂದ ಆನ್ಲೈನ್ನಲ್ಲಿ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಸಿಬಿಎಸ್ಸಿ, ಐಸಿಎಸ್ಇ ಹೊರತುಪಡಿಸಿ ರಾಜ್ಯ ಪಠ್ಯಕ್ರಮದಲ್ಲಿ ಪಿಯುಸಿ ಮಾಡಿದವರ ಅಂಕ ಪಟ್ಟಿಗಳನ್ನು ಕೂಡ ಕೆಇಎ ಆನ್ಲೈನ್ನಲ್ಲಿ ಪಡೆದ ಸೀಟು ಹಂಚಿಕೆ ಮಾಡಲಿದೆ.
ತಂತ್ರಜ್ಞಾನ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಮನೆಗಳಿಂದಲೇ ಸುಲಭ-ಸರಳವಾಗಿ ಅರ್ಜಿಗಳನ್ನು ಸಲ್ಲಿಸುವ ಹಾಗೆ ಮಾಡುವುದು ನಮ್ಮ ಉದ್ದೇಶ. ಈ ಸಲುವಾಗಿ ಸಾಫ್ವೇರ್ ಉನ್ನತೀಕರಣ ಕೂಡ ಮಾಡಲಾಗುತ್ತಿದೆ. ಕೊನೆ ಹಂತದ ಪರೀಕ್ಷೆಗಳು ನಡೆಯುತ್ತಿದ್ದು, ವಿದ್ಯಾರ್ಥಿಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.
ಪ್ರಾಧಿಕಾರದ ಸಹಾಯವಾಣಿಯ ಸಾಫ್ಟ್ ವೇರ್ ಕೂಡ ಉನ್ನತೀಕರಿಸುತ್ತಿದ್ದು, ಒಮ್ಮೆಗೇ ಸಾವಿರ ಜನರು ಕರೆ ಮಾಡಿದರೂ ಅದನ್ನು ನಿರ್ವಹಿಸುವ ಸಾಮರ್ಥ್ಯವೃದ್ಧಿಸಲಾಗಿದೆ. ಇದರಿಂದ ಅನುಮಾನಗಳಿಗೆ ಬೇಗ ಪರಿಹಾರ ಸಿಗಲಿದೆ ಎಂದು ಅಶ್ವತ್ಥ ನಾರಾಯಣ್ ವಿವರಿಸಿದರು.

ಕೋವಿಡ್ ಪಾಸ್: ಸಿಇಟಿ ಅಂಕ ಮಾತ್ರ ಗಣನೆಗೆ
ಕಳೆದ ವರ್ಷ ದ್ವಿತೀಯ ಪಿಯುಸಿ ಉತ್ತೀರ್ಣರಾದ ಕೆಲವು ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಅಂತವರ ರಾಂಕಿಂಗ್ ಅನ್ನು ಸಿಇಟಿ ಅಂಕಗಳ ಆಧಾರಿಸಿಯೇ ನಿರ್ಧರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದರು.
ಸಾಮಾನ್ಯವಾಗಿ ಕೆಇಎನಲ್ಲಿ ಸಿಇಟಿ ಮತ್ತು ದ್ವಿತೀಯ ಪಿಯುಸಿ- ಎರಡೂ ಪರೀಕ್ಷೆಗಳ ಅಂಕಗಳನ್ನು ಆಧಾರವಾಗಿ ಇಟ್ಟುಕೊಂಡೇ ರಾಂಕಿಂಗ್ ನಿರ್ಧರಿಸಲಾಗುತ್ತದೆ. ಈ ಬಾರಿಯೂ ಅದೇ ರೀತಿ ಮಾಡಲಾಗಿದೆ. ಆದರೆ, ಕಳೆದ ಬಾರಿ ಕೋವಿಡ್ ಕಾರಣ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಿರಲಿಲ್ಲ. ಹೀಗಾಗಿ ಆ ಸಂದರ್ಭದಲ್ಲಿ ಕೇವಲ ಸಿಇಟಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧಾರಿಸಿಯೇ ರಾಂಕಿಂಗ್ ನೀಡಲಾಗಿತ್ತು. ಆ ವರ್ಷದ ವಿದ್ಯಾರ್ಥಿಗಳಿಗೆ ಅದೇ ನಿಯಮ ಈಗಲೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದರು.

ಎಂಜಿನಿಯರಿಂಗ್ ರಾಂಕ್ ವಿಜೇತರು ವಿವರ
ಕೆಸಿಇಟಿ ಪರೀಕ್ಷೆ ಫಲಿತಾಂಶದಲ್ಲಿ ಎಂಜಿನಿಯರಿಂಗ್ ವಿಭಾಗದಲ್ಲಿ ಬಾಲಕರೇ ಮೇಲುಗೈಸಾಧಿಸಿದ್ದಾರೆ. ಈ ಪೈಕಿ ಬೆಂಗಳೂರು ವಿಜೇತರ ಪಟ್ಟಿ ಹೀಗಿದೆ. ಅಫೂರ್ವ ಟಂಡನ್, ಸಿದ್ಧಾರ್ಥ್ ಸಿಂಗ್, ಆತ್ಮಕೂರಿ ವೆಂಕಟ ಮಾಧವ ಶ್ರೀರಾಮ್, ಆರ್ ಕೆ ಶ್ರೀಧರ್, ವಿಶಾಲ್ ಬೈಸಾನಿ, ಕೆ ವಿ ಸಾಗರ್, ವಿ.ಮಹೇಶಕುಮಾರ್, ಜಿ ವಿ ಸಿದ್ಧಾರ್ಥ್, ವಿ. ಸಾತ್ತ್ವಿಕ್.












Click it and Unblock the Notifications