ಕೋವಿಡ್ನಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿಗಿಲ್ಲ ಪರಿಹಾರ
ಬೆಂಗಳೂರು, ಸೆ.17. ಕೋವಿಡ್-19 ಸೋಂಕಿನಿಂದಾಗಿ ಸಾವನ್ನಪ್ಪಿರುವ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಕುಟುಂಬ ಸದಸ್ಯರಿಗೆ ಸರ್ಕಾರ ತಾನೇ ಮಾಡಿದ್ದ ಆದೇಶದಂತೆ ತಲಾ 30 ಲಕ್ಷ ರು. ಪರಿಹಾರವನ್ನು ಬಿಡುಗಡೆ ಮಾಡಿಲ್ಲ.
ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿ ಪ್ರಕಾರ 2020ರ ಮಾರ್ಚ್ ನಿಂದ 2021ರ ಜೂನ್ವರಗೆ ಕೋವಿಡ್ನಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ 351 ನೌಕರರು ಮೃತಪಟ್ಟಿದ್ದಾರೆ. ಅದರಲ್ಲಿ ಕೇವಲ 11ನೌಕರರ ಕುಟುಂಬಕ್ಕೆ ಮಾತ್ರ ಪರಿಹಾರ ವಿತರಣೆಯಾಗಿದೆ.
ಹಾಗಾಗಿ ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ.
ತಹೇರ್ ಹುಸೈನ್ ಮತ್ತು ಅಜೀಜ್ ಪಾಷಾ ಜಾಗೀರದಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ಬಳಿಕ ಪ್ರತಿವಾದಿಗಳಾದ ರಾಜ್ಯ ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ), ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ನಿಗಮ(ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಕೆಕೆಆರ್ಟಿಸಿ) ಮತ್ತು ವಾಯುವ್ಯ ರಸ್ತೆ ಸಾರಿಗೆ ನಿಗಮಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಪರಿಹಾರಕ್ಕೆ ಮನವಿ: ಅರ್ಜಿದಾರರ ಪರ ವಕೀಲರು, ಕೋವಿಡ್-19 ನಿಂದ ಸಾರಿಗೆ ನೌಕರರು ಸಾವನ್ನಪ್ಪಿದ್ದರೆ, ಅವರ ಕುಟುಂಬಕ್ಕೆ ತಲಾ 30 ಲಕ್ಷ ಪರಿಹಾರ ಕಲ್ಪಿಸುವುದಾಗಿ ತಿಳಿಸಿ ಸಾರಿಗೆ ಇಲಾಖೆ 2021ರ ಫೆ.10ರಂದು ಸುತ್ತೋಲೆ ಹೊರಡಿಸಿತ್ತು. ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿ ಪ್ರಕಾರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ 351 ನೌಕರರು ಮೃತಪಟ್ಟಿದ್ದಾರೆ. ಅದರಲ್ಲಿ ಕೇವಲ 11 ನೌಕರರ ಕುಟುಂಬಗಳಿಗೆ ಪರಿಹಾರ ವಿತರಣೆಯಾಗಿದೆ ಎಂದರು.
ಕೋವಿಡ್-19 ಯಿಂದ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ವಿವಿಧ ವಿಭಾಗಗಳಲ್ಲಿ 2020ರ ಮಾರ್ಚ್ನಿಂದ ಈವರೆಗೆ ಸಾವನ್ನಪ್ಪಿರುವ ನೌಕರರ ಮಾಹಿತಿ ಒದಗಿಸಬೇಕು. 2020ರ ಫೆ.10ರಂದು ರಾಜ್ಯ ಸಾರಿಗೆ ಇಲಾಖೆ ಹೊರಡಿಸಿರುವ ಸುತ್ತೋಲೆ ಜಾರಿಗೊಳಿಸಬೇಕು. ಸಾರಿಗೆ ನಿಗಮಗಳ ನೌಕರರು ಕೋವಿಡ್ನಿಂದ ಮೃತಪಟ್ಟ ಪ್ರಕರಣಗಳ ಸಂಬಂಧ ಮೃತ ನೌಕರರ ಕುಟುಂಬ ಸದಸ್ಯರು ಅಥವಾ ಅವಲಂಬಿತರಿಗೆ ಕೂಡಲೇ 30 ಲಕ್ಷ ರೂ. ಪರಿಹಾರ ಪಾವತಿಸುವುದನ್ನು ಖಾತರಿಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಜತೆಗೆ ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ವಿತರಿಸಲು ಅಗತ್ಯ ಹಣಕಾಸು ಬಿಡುಗಡೆ ಮಾಡಲು ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶಿಸಬೇಕು ಎಂದೂ ಸಹ ಕೋರಲಾಗಿದೆ.
ಅಲ್ಲದೆ, ಮೃತಪಟ್ಟ ನೌಕರರ ಅರ್ಹ ಅಲಂಬಿತರಿಗೆ ತಾತ್ಕಾಲಿಕ ಪರಿಹಾರವಾಗಿ ಕೂಡಲೇ 10 ಲಕ್ಷ ರೂ. ಪರಿಹಾರ ಪಾವತಿಸಲು ಸರ್ಕಾರ ಹಾಗೂ ಸಾರಿಗೆ ನಿಗಮಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.