ಡಿಕೆಶಿಗೆ 100 ಜನ ಶಾಸಕರ ಬೆಂಬಲ; 'ಮುಖ್ಯಮಂತ್ರಿ ಪಟ್ಟಕ್ಕಾಗಿ ಕುದುರೆ ವ್ಯಾಪಾರ ಜೋರು'
ಬೆಂಗಳೂರು, ಜುಲೈ 02: ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಕೆಶಿಯವರಿಗೆ 100 ಜನ ಶಾಸಕರ ಬೆಂಬಲ ಇದೆ. ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದರು.
ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ. ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪರಿಸ್ಥಿತಿ ದಿನೇದಿನೇ ಕೈಮೀರಿ ಹೋಗುತ್ತಿದೆ. ಆಡಳಿತ ಯಂತ್ರವು ಸಂಪೂರ್ಣವಾಗಿ ಕುಸಿದುಬಿದ್ದಿದೆ. ಆಡಳಿತ ಪಕ್ಷದಲ್ಲಿ ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ದಿನೇದಿನೇ ಹೆಚ್ಚಾಗಿದೆ ಎಂದು ವಿಶ್ಲೇಷಿಸಿದರು. ಇದರ ಪರಿಣಾಮವಾಗಿ ಅಭಿವೃದ್ಧಿ ಕೆಲಸಕಾರ್ಯಗಳು ಏನೂ ನಡೆಯುತ್ತಿಲ್ಲ. ರಾಜ್ಯ ಸರಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರಕಾರವು ದಿನಬಳಕೆ ವಸ್ತುಗಳ ಮೇಲೆ ಸತತ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದ್ದು, ಅಧಿಕಾರಿಗಳು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆಗಳು, ಅಧಿಕಾರಿಗಳ ಆತ್ಮಹತ್ಯೆಗಳು, ಜೊತೆಗೇ ಗುತ್ತಿಗೆದಾರರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ರಾಜ್ಯದಲ್ಲಿ ನಿರಂತರವಾಗಿ ನಡೆದಿದೆ. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ 35- 40 ಜನರು ಸತ್ತಿದ್ದು, ಕೋವಿಡ್ ಲಸಿಕೆ ಕಾರಣ ಎಂಬ ಮುಖ್ಯಮಂತ್ರಿಗಳ ಆರೋಪಕ್ಕೆ ಉತ್ತರಿಸಿದ ಅವರು, ಹಾಸನ ಜಿಲ್ಲೆಗೆ ಮಾತ್ರ ಕೋವಿಡ್ ಲಸಿಕೆ ಕೊಡಲಾಗಿದೆಯೇ? ದೇಶದ ಕೋಟ್ಯಂತರ ಜನರಿಗೆ, ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಿಗೂ ಕೋವಿಡ್ ಲಸಿಕೆ ರಫ್ತು ಮಾಡಿದ್ದಾರೆ. ಹಾಸನದ ಸಾವುಗಳ ಸಂಬಂಧ ರಾಜ್ಯ ಸರಕಾರ ಎಚ್ಚತ್ತುಕೊಂಡು ಸಮರ್ಪಕ ತನಿಖೆ ನಡೆಸಬೇಕಿದೆ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು. ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದು ಖಂಡಿಸಿದರು. ಮುಖ್ಯಮಂತ್ರಿಗಳು ತುರ್ತಾಗಿ ಸಭೆ ಕರೆದು ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸಮರ್ಪಕ ಔಷಧಿ ಸಿದ್ಧವಾಗಿ ಇಟ್ಟುಕೊಳ್ಳುವ ಕಡೆ ಗಮನಿಸಬೇಕೆಂದು ಒತ್ತಾಯಿಸಿದರು. ಅಪಪ್ರಚಾರ ಸಲ್ಲದು ಎಂದು ತಿಳಿಸಿದರು.
ಆರೆಸ್ಸೆಸ್ ನಿಷೇಧ ಕುರಿತ ಪ್ರಿಯಾಂಕ್ ಖರ್ಗೆಯವರ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಇದು ತಿರುಕನ ಕನಸು ಎಂದು ವ್ಯಂಗ್ಯವಾಡಿದರು. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು ಸ್ವತಃ ನಿಮ್ಮ ತಂದೆ- ಮಲ್ಲಿಕಾರ್ಜುನ ಖರ್ಗೆಯವರೇ ನಂಬಲು ಸಾಧ್ಯವಿಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರೇ ನಂಬಲಸಾಧ್ಯ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಕನಸು ಪ್ರಿಯಾಂಕ್ ಖರ್ಗೆಯವರಿಗೆ ಯಾಕೆ ಬಿತ್ತು ಎಂದು ಪ್ರಶ್ನಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘ ಒಂದು ರಾಷ್ಟ್ರಭಕ್ತ ಸಂಘಟನೆ. ಭಾರತ- ಚೀನಾದ ಜೊತೆ ಯುದ್ಧದ ವೇಳೆ ಆರೆಸ್ಸೆಸ್ ಪಾತ್ರವನ್ನು ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸ್ವಾಗತಿಸಿದ್ದರು. ಅದರ ಬಳಿಕ ರಿಪಬ್ಲಿಕ್ ಪರೇಡ್ನಲ್ಲಿ ಅವಕಾಶ ಕೊಡಲಾಗಿತ್ತು. ನೆಹರೂ, ಇಂದಿರಾ ಗಾಂಧಿಯವರು ಆರೆಸ್ಸೆಸ್ ನಿಷೇಧಿಸಿದ್ದರು. ಕಾಡಿ ಬೇಡಿದ್ದು ನಿಷೇಧ ರದ್ದಾಯಿತೆಂಬ ಅಪ್ರಬುದ್ಧ ಹೇಳಿಕೆ ನೀಡಿದ್ದು, ಮಾಹಿತಿ ಕೊರತೆಯಿಂದ ಕೂಡಿದೆ ಎಂದು ಆಕ್ಷೇಪಿಸಿದರು.












Click it and Unblock the Notifications