ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧವೇ ರಾಜ್ಯಪಾಲರಿಗೆ ದೂರು
ಬೆಂಗಳೂರು ಆಗಸ್ಟ್ 16: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಹೇಳಿಕೆಯಿಂದ ಸಾಂವಿಧಾನಿಕ ಹುದ್ದೆಗೆ ಅಪಮಾನವಾಗಿ ಎಂದು ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ದೂರು ನೀಡಿದ ಘಟನೆ ಮಂಗಳವಾರ ನಡೆದಿದೆ.
'ಆರ್ಎಸ್ಎಸ್ಗೆ ತಲೆ ಬಾಗುವೆ' ಎಂದು ಸೋಮವಾರ ಬೆಂಗಳೂರಲ್ಲಿ ನಡೆದ ಅಮೃತ ಭಾರತಿಗೆ ಕರುನಾಡ ಜಾತ್ರೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ರೀತಿ ಹೇಳಿಕೆ ನೀಡಿದ್ದರು. ಈ ಮೂಲಕ ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಹುದ್ದೆಗೆ ಅಪಮಾನ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ರಾಜ್ಯಪಾಲ ಥಾವರ್ ಚೆಂದ್ ಗೆಹಲೋತ್ ಅವರಿಗೆ ಸಲ್ಲಿಸಲಾದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ಎಂಬುವವರು ಈ ದೂರನ್ನು ಸಲ್ಲಿಸಿದ್ದಾರೆ. ಅಸಂವಿಧಾನಿಕ ಸಂಘಟನೆ ಆಗಿರುವ ಆರ್ಎಸ್ಎಸ್ಗೆ ಬದ್ಧರಾಗಿರುವ ಮುಖ್ಯಮಂತ್ರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುಂತೆ ಮನವಿ ಅವರು ಮಾಡಿದ್ದಾರೆ.
ಕಾನೂನಿನಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೋಂದಣಿ ಆಗಿಲ್ಲ. ಕೋಟಿಗಟ್ಟಲೇ ಇರುವ ವ್ಯವಹಾರ, ಲೆಕ್ಕಪತ್ರ ನಿರ್ವಹಿಸಿಲ್ಲ ಸೇರಿದಂತೆ ಇನ್ನಿತರ ಆರೋಪ ಕುರಿತು ಆರ್ಎಸ್ಎಸ್ ವಿರುದ್ಧ ಖುದ್ದು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದರೂ ಅವರು ಆ ಬಗ್ಗೆ ಕ್ರಮ ವಹಿಸಲಿಲ್ಲ. ಇದು ಸೇರಿದಂತೆ ಮುಖ್ಯಮಂತ್ರಿಗಳ ತಲೆಬಾಗುವ ಹೇಳಿಕೆ ವಿರುದ್ಧ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರ್ಎಸ್ಎಸ್ ಬಗ್ಗೆ ಸಿಎಂ ಹೇಳಿಕೆಗೆ ಕಾಂಗ್ರೆಸ್ ಕಿಡಿ
ಮುಖ್ಯಮಂತ್ರಿ ಹೇಳಿಕೆಗೆ ಕರ್ನಾಟಕ ಕಾಂಗ್ರೆಸ್ ಸಹ ಟ್ವೀಟ್ ಮೂಲಕ ಕಿಡಿ ಕಾರಿದೆ. ದೇಶದ್ರೋಹಿ 'ಆರ್ಎಸ್ಎಸ್ ತತ್ವ ಸಿದ್ಧಾಂತದಂತೆ ಕೆಲಸ ಮಾಡುತ್ತೇನೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವ ವಿರೋಧಿಗಳು ಸಾಂವಿಧಾನಿಕ ಹುದ್ದೆಯಲ್ಲಿರುವವರಿಗೆ ಆದರ್ಶವಾಗಿರುವುದು ನಾಡಿನ ದೌರ್ಭಾಗ್ಯ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಮುಖ್ಯಮಂತ್ರಿ ಸ್ಥಾನದಲ್ಲಿರುವವು ಸಂವಿಧಾನದ ಆಶಯಗಳಡಿ ಉತ್ತಮ ಆಡಳಿತ ನೀಡಬೇಕು. ಪ್ರಜಾಪ್ರಭುತ್ವದ ನೆಲೆಗಟ್ಟಿನ ಮೇಲೆ ಮುಖ್ಯಮಂತ್ರಿಗಳು ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಆರ್ಎಸ್ಎಸ್ ಸಿದ್ಧಾಂತದಂತೆ ಕೆಲಸ ಮಾಡುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದರು.
Recommended Video