CM Siddaramaiah: ಬಿಜೆಪಿ ಸರ್ಕಾರದ ಕಮಿಷನ್ ಹಾವಳಿ; ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಬ್ರೇಕ್ : ಸಿದ್ದರಾಮಯ್ಯ
ಬೆಂಗಳೂರು, ಜೂನ್ 23 : ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು. ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈ ಕುರಿತು ಗೃಹ ಕಚೇರಿ ಕೃಷ್ಣದಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಶುಕ್ರವಾರ ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ರಾಜ್ಯಾದ್ಯಂತ ಕೈಗೊಂಡಿದ್ದ ಕಾಮಗಾರಿಗಳಿಗೆ ಗುತ್ತಿಗೆದಾರರ ಬಾಕಿ ಹಣ 20 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿಗಳ ನ್ನು ಒತ್ತಾಯಿಸಿದೆ.
ಇನ್ನೂ ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅಲ್ಲದೇ ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಕೆಂಪಣ್ಣ ಮನವಿ ಮಾಡಿದರು.
ಪದಾಧಿಕಾರಿಗಳಾದ ಆರ್.ಅಂಬಿಕಾಪತಿ, ಜಿ.ಎಂ ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್.ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.












Click it and Unblock the Notifications