ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಿ: ಬಿಬಿಎಂಪಿ ಆಯುಕ್ತರಿಂದ ಖಡಕ್ ಸೂಚನೆ
ಬೆಂಗಳೂರು, ನವೆಂಬರ್ 20: ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಎಂಟೂ ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಮಲ್ಲೇಶ್ವರಂನ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಾದ್ಯಂತ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಎಂಟೂ ವಲಯಗಳಲ್ಲಿ ಇದುವರೆಗೆ 17,423 ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಗೆ ವೇಗ ನೀಡಿ ತ್ವರಿತವಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ನಗರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯಾಪಾರ ವಲಯ(Vending Zones)ಗಳನ್ನು ಗುರುತಿಸುವ ಕೆಲಸ ಆಯಾ ವಲಯ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿದ್ದು, ಶೀಘ್ರವಾಗಿ ವ್ಯಾಪರ ವಲಯಗಳ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಪಾದಚಾರಿ ಮಾರ್ಗಗಳಲ್ಲಿ ಶಾಶ್ವತ ಪೆಟ್ಟಿಗೆಗಳನ್ನು ಅಳವಡಿಸಿಕೊಂಡು ಮಾರಾಟ ಮಾಡುವುಂತಿಲ್ಲ. ಈ ನಿಟ್ಟಿನಲ್ಲಿ ಎಲ್ಲೆಲ್ಲಿ ಶಾಶ್ವತ ಪೆಟ್ಟಿಗೆಗಳನ್ನಿಟ್ಟುಕೊಂಡು ಮಾರಾಟ ಮಾಡುತ್ತಿದ್ದಾರೆ ಅಲ್ಲಿ ಕೂಡಲೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು. ಪಾದಚಾರಿಗಳ ಓಡಾಟಕ್ಕೆ ಯಾವುದೇ ಸಮಸ್ಯೆಯಾಗಂತೆ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಲುವಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಂದ ಕೂಡಲೇ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಚನೆ ನೀಡಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ಸ್ನೇಹಲ್, ಗಿರೀಶ್, ರಮೇಶ್, ಕರೀಗೌಡ, ಪ್ರಧಾನ ಅಭಿಯಂತರರು, ಎಲ್ಲಾ ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಮತದಾರರ ಪಟ್ಟಿ ವೀಕ್ಷಕರಿಂದ ಸಭೆ
ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ 18ವರ್ಷ ಮೇಲ್ಪಟ್ಟವರನ್ನು ಹೊಸ ಮತದಾರರ ಮಾಹಿತಿ ಪಡೆದು ಅವರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರಿವು ಮೂಡಿಸುವ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಬೇಕೆಂದು ಬಿಬಿಎಂಪಿ(ಕೇಂದ್ರ) ಮತದಾರರ ಪಟ್ಟಿ ವೀಕ್ಷಕರಾದ ಶ್ರೀ ವಿಪುಲ್ ಬನ್ಸಾಲ್ ರವರು ತಿಳಿಸಿದರು.
ಬಿಬಿಎಂಪಿ(ಕೇಂದ್ರ) ವಿಭಾಗದ 7-ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2025ರ ಸಂಬಂಧ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮಾನ್ಯ ಸರ್ಕಾರದ ಕಾರ್ಯದರ್ಶಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಮತ್ತು ಬಿಬಿಎಂಪಿ(ಕೇಂದ್ರ) ಮತದಾರರ ಪಟ್ಟಿ ವೀಕ್ಷಕರಾದ ಶ್ರೀ ವಿಪುಲ್ ಬನ್ಸಾಲ್ ರವರು ಎಲ್ಲಾ ರಾಜಕೀಯ ಪಕ್ಷದ ಪ್ರತಿನಿಧಿಗಳ ಜೊತೆ ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-1ರಲ್ಲಿ ಸಭೆ ನಡೆಸಿದರು.ಪಾಲಿಕೆಯ ಘನತ್ಯಾಜ್ಯ ಸಂಗ್ರಹಿಸುವ ಆಟೋಗಳಲ್ಲಿ ಪ್ರಚಾರ ಮಾಡುವುದರ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಅರಿವು ಮೂಡಿಸುವುದು ಅವಶ್ಯಕತೆ ಇರುತ್ತದೆ ಎಂದು ರಾಜಕೀಯ ಪಕ್ಷದ ಪ್ರತಿನಿಧಿಗಳು ಅಭಿಪ್ರಾಯಪಟ್ಟರು.












Click it and Unblock the Notifications