ಎಸ್ ಸಿ,ಎಸ್ ಟಿ ಸಮುದಾಯದವರಿಗೆ ಸರ್ಕಾರ ಕಿವಿ ಮೇಲೆ ಹೂವ ಇಡುತ್ತಿದೆ: ಡಿ ಕೆ ಶಿವಕುಮಾರ್ ವಾಗ್ದಾಳಿ
ಬೆಂಗಳೂರು,ಮಾರ್ಚ್23: ಮಿಸಲಾತಿ ಹೆಚ್ಚಳ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ, ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸದೇ ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ಸುಳ್ಳು ಹೇಳುವ ಮೂಲಕ ಬಿಜೆಪಿ ಸರ್ಕಾರ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯದ ಜನರ ಕಿವಿಗೆ ಹೂವ ಇಟ್ಟು, ಮೋಸ ಮಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿರು ಗುರುವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ಪರಿಶಿಷ್ಟರಿಗೆ ಮೀಸಲಾತಿ ವಿಚಾರದಲ್ಲಿ ಮಾಡುತ್ತಿರುವ ಮೋಸವನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ನಾಳೆ (ಶುಕ್ರವಾರ) ಬೆಳಗ್ಗೆ 10 ಗಂಟೆಗೆ ರಾಜಭವನದ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಬಿಜೆಪಿ ಸಚಿವರು ಸಂಸತ್ತಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಈ ಸರ್ಕಾರ ಪ್ರಸ್ತಾವನೆ ಸಲ್ಲಿಸದೇ. ಸಂಸತ್ತಿನಲ್ಲಿ ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸದೆ ಮೀಸಲಾತಿ ಮಾಡಿದ್ದೇವೆ ಎಂದು ಹೇಳಿಕೊಂಡು ದಲಿತರಿಗೆ ಮೋಸ ಮಾಡುತ್ತಿದೆ.

ಈ ದ್ರೋಹವನ್ನು ಖಂಡಿಸಲು ನಮ್ಮ ಪಕ್ಷದ ನಾಯಕರೆಲ್ಲರೂ ರಾಜ್ಯಪಾಲರ ಭೇಟಿಗೆ ತೀರ್ಮಾನಿಸಿದ್ದು, ನಾಳೆ ಬೆಳಗ್ಗೆ ಭೇಟಿಗೆ ರಾಜ್ಯಪಾಲರ ಬಳಿ ಸಮಯಾವಕಾಶ ಕೇಳುತ್ತೇವೆ. ಸಂಸತ್ತಿನಲ್ಲಿ ಅಧಿವೇಶನ ನಡೆಯುತ್ತಿರುವಾಗ ಬಿಜೆಪಿ ಸರ್ಕಾರ ಈ ವಿಚಾರವಾಗಿ ಪ್ರಸ್ತಾವನೆ ಸಲ್ಲಿಸಲಿಲ್ಲ ಯಾಕೆ? ಈ ವಿಚಾರದಲ್ಲಿ ತಮಗೆ ಬೇಕಾದ ರೀತಿಯಲ್ಲಿ ಸುಳ್ಳು ಹೇಳಿದರೆ ಅದನ್ನು ನಂಬಲು ಇಲ್ಲಿ ಯಾರೂ ಸಿದ್ಧರಿಲ್ಲ. ಅವರಿಗೆ ಈ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಈ ಮೀಸಲಾತಿ ಹೆಚ್ಚಳ ವಿಚಾರ ಸೇರಿಸಬೇಕು.
ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಾಯಕರು ಹಾಗೂ ಬೇರೆ ಸಮುದಾಯದ ನಾಯಕರುಗಳು ಭಾಗವಹಿಸಬೇಕು ಎಂದು ಆಹ್ವಾನಿಸುತ್ತಿದ್ದೇನೆ. ಜನರನ್ನು ನಂಬಿಸಿ ಮೋಸ ಮಾಡಿರುವ ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಹೀಗಾಗಿ ರಾಜ್ಯಪಾಲರು ಈ ಸರ್ಕಾರವನ್ನು ವಜಾಗೊಳಿಸಬೇಕು.

ಬಿಜೆಪಿ ನಾಯಕರು ಮಾತೆತ್ತಿದರೆ ಡಬಲ್ ಇಂಜಿನ್ ಸರ್ಕಾರ ಎನ್ನುತ್ತಾರೆ, 26 ಸಂಸದರಿದ್ದಾರೆ ಎಂದು ಹೇಳುತ್ತಾರೆ. ಇವರು ಈ ಮೀಸಲಾತಿ ಹೆಚ್ಚಳದ ಬಗ್ಗೆ ಮಾಡಿರುವ ಪ್ರಯತ್ನವಾದರೂ ಏನು? ಸಂಸತ್ತಿನಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದಾರಾ? ಕೇಂದ್ರಕ್ಕೆ ಒತ್ತಾಯ ಮಾಡಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರಾ? ಈ ಕಾನೂನು ಸಂವಿಧಾನಿಕ ಮಾನ್ಯತೆ ಪಡೆದು ಅದು ಜನರಿಗೆ ತಲುಪಬೇಕಾದರೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗಳ ಅಂಕಿತ ಬೇಕು. ರಾಜ್ಯ ಮಟ್ಟದ ತೀರ್ಮಾನಗಳನ್ನು ರಾಜ್ಯಪಾಲರಿಗೆ ನೀಡಲಾಗುತ್ತದೆಯೇ ಹೊರತು, ಈ ವಿಚಾರವನ್ನು ರಾಜ್ಯಪಾಲರಿಗೆ ನೀಡಿದರೆ ಪ್ರಯೋಜನವಿಲ್ಲ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯಗಳ ಜನರ ಕಿವಿ ಮೇಲೆ ಹೂವ ಇಡುವ ಪ್ರಯತ್ನ ಮಾಡುತ್ತಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷ ತೊರೆದಿದ್ದವರು ಮತ್ತೆ ಬರುತ್ತಿರುವ ಬಗ್ಗೆ ಕೇಳಿದಾಗ, 'ಇನ್ನು ಕೆಲವು ಮಂದಿ ಪಕ್ಷಕ್ಕೆ ಆಗಮಿಸುತ್ತಿದ್ದಾರೆ. ಈಗ ಅವರ ಹೆಸರು ಪ್ರಸ್ತಾಪ ಮಾಡುವುದಿಲ್ಲ. ಅವರು ಕೆಲವರ ಮೇಲೆ ಅನುಮಾನ ಪಡುತ್ತಾ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ನಾವು ಯಾರನ್ನು ಆಹ್ವಾನಿಸುತ್ತಿಲ್ಲ. ಸ್ವಇಚ್ಛೆಯಿಂದ ಯಾರು ಪಕ್ಷ ಸೇರಲು ಬಯಸುತ್ತಾರೋ ಅವರನ್ನು ನಾವು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ' ಎಂದರು.

ಅವರು ಏನೇ ಸುಳ್ಳು ಭರವಸೆ ನೀಡಿದರೂ, ಅಥವಾ ಟೆಂಡರ್ ಗಳ ಅಂದಾಜು ಮೊತ್ತವನ್ನು ಹೆಚ್ಚಿಸಿ ಟೆಂಡರ್ ಜಾರಿ ಮಾಡಿದರೂ ಅದಕ್ಕೆ ಸರ್ಕಾರಿ ಅಧಿಕಾರಿಗಳು ಹೊಣೆಗಾರರಾಗುತ್ತಾರೆ. ಮುಂದಿನ ದಿನಗಳಲ್ಲಿ ಅವರೇ ಉತ್ತರ ನೀಡಬೇಕಾಗುತ್ತದೆ. ರಾಜ್ಯದಲ್ಲಿ ಈವೇಳೆಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಬೇಕಿತ್ತು. ಆದರೆ ಸರ್ಕಾರಿ ಹಣದಲ್ಲಿ ಮೋದಿ ಅವರ ಪ್ರಚಾರ ಮಾಡಲು, ಜಾಹೀರಾತು ನೀಡಲು ಚುನಾವಣಾ ದಿನಾಂಕ ಮುಂದಕ್ಕೆ ಹಾಕುತ್ತಿದ್ದಾರೆ.
ಕಳೆದ ಚುನಾವಣೆ ಸಮಯದಲ್ಲಿ ಇಷ್ಟು ಹೊತ್ತಿಗಾಗಲೇ ನೀತಿ ಸಂಹಿತೆ ಜಾರಿಯಾಗಿತ್ತು. ಬಿಜೆಪಿ ಕಾರ್ಯಕ್ರಮಗಳಿಗೆ ಜನ ಹೋಗುತ್ತಿಲ್ಲ. ಹೀಗಾಗಿ ಸರ್ಕಾರದ ದುಡ್ಡಲ್ಲಿ ಪ್ರಚಾರ ಮಾಡಡಿ, ಪಿಡಿಓ, ಸರ್ಕಾರಿ ಶಿಕ್ಷಕರು, ಹಾಲು ಒಕ್ಕೂಟಗಳ ಮೂಲಕ ಜನರನ್ನು ಕರೆಸಲು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿ ಕೆ ಶಿವಕುಮಾರ್ ಆರೋಪಿಸಿದರು.












Click it and Unblock the Notifications