130 ಅಭ್ಯರ್ಥಿಗಳ ಪಟ್ಟಿ ಕಳುಹಿಸಲು ರಾಹುಲ್ ಗಾಂಧಿ ಸೂಚನೆ
ಬೆಂಗಳೂರು, ಮಾರ್ಚ್ 25 : 130 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಮಾ.26ರಂದು ಕೆಪಿಸಿಸಿ ಚುನಾವಣಾ ಸಮಿಯ ಮಹತ್ವದ ಸಭೆ ನಡೆಯಲಿದೆ.
ಕರ್ನಾಟಕ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾರ್ಚ್ 30ರೊಳಗೆ 130 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕಳುಹಿಸುವಂತೆ ಸೂಚನೆ ನೀಡಿದ್ದಾರೆ.
ಕೆಪಿಸಿಸಿ ಕಳುಹಿಸಿದ ಪಟ್ಟಿಯನ್ನು ಕೇಂದ್ರ ನಾಯಕರಾದ ಮಧುಸೂದ್ ಮಿಸ್ತ್ರಿ ನೇತೃತ್ವದ ಸಮಿತಿ ಪರಿಶೀಲನೆ ನಡೆಸಲಿದೆ. ಬಳಿಕ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ. ಏಪ್ರಿಲ್ ಮೊದಲ ವಾರದಲ್ಲಿ ಕಾಂಗ್ರೆಸ್ನ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ದೇವನಹಳ್ಳಿ ಬಳಿಯ ಖಾಸಗಿ ರೆಸಾರ್ಟ್ನಲ್ಲಿ ಮಾ.26ರ ಸೋಮವಾರ ಚುನಾವಣಾ ಸಮಿತಿಯ ಸಭೆ ನಡೆಯಲಿದೆ. ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಪಟ್ಟಿ ಹಿಡಿದುಕೊಂಡು ದೆಹಲಿಗೆ ತೆರಳಲಿದ್ದಾರೆ.
ಕಾಂಗ್ರೆಸ್ ಪಕ್ಷ ಸೇರಲಿರುವ ಜೆಡಿಎಸ್ನ 7 ಬಂಡಾಯ ಶಾಸಕರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರಿಗೆ ಟಿಕೆಟ್ ಖಚಿತವಾಗಿದೆ. ಆನಂದ್ ಸಿಂಗ್, ನಾಗೇಂದ್ರ ಅವರಿಗೂ ಟಿಕೆಟ್ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಾಲಿ ಶಾಸಕರು, ಪಕ್ಷ ಸೇರಿದ ಪ್ರಮುಖರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಲಾಗುತ್ತದೆ. ಕಾಂಗ್ರೆಸ್ ರಾಜ್ಯದ 224 ಕ್ಷೇತ್ರಗಳಲ್ಲಿ ಸಮೀಕ್ಷೆಯೊಂದನ್ನು ಮಾಡಿಸಿದೆ. ಈ ಸಮೀಕ್ಚಾ ವರದಿಯ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.











Click it and Unblock the Notifications