ಸರ್ಕಾರದ ವಿರುದ್ಧ ಜನ ಜಾಗೃತಿ; ರಾಜ್ಯ ಪ್ರವಾಸ ಹೊರಟ ಕಾಂಗ್ರೆಸ್!
ಬೆಂಗಳೂರು, ಏಪ್ರಿಲ್ 13; ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಬಲಿ ಪಡೆದ ಭ್ರಷ್ಟ 40 ಪರ್ಸೆಂಟ್ ಕಮಿಷನ್ ಸರ್ಕಾರದ ವಿರುದ್ಧ ಜನ ಜಾಗೃತಿ ಮೂಡಿಸಲು ನಾವು 5 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಹತ್ವದ ಸಭೆ ನಡೆಸಿದರು.
ಈ ಸಭೆಯ ಬಳಿಕ ಸಿದ್ದರಾಮಯ್ಯ ರಾಜ್ಯ ಪ್ರವಾಸದ ಕುರಿತು ಮಾಹಿತಿ ನೀಡಿದರು. "ರಾಜ್ಯದ ಪ್ರತಿ ಜಿಲ್ಲೆಗೂ ನಮ್ಮ ಪಕ್ಷದ ನಾಯಕರ ನೇತೃತ್ವದಲ್ಲಿ ತಂಡಗಳಾಗಿ ತೆರಳಿ, ಜನರ ಜೀವ ಮತ್ತು ರಾಜ್ಯದ ಮಾನ ಕಾಪಾಡಲು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವಂತೆ ಮನವಿ ಮಾಡುತ್ತೇವೆ" ಎಂದರು.
ಗುರುವಾರ ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. "ಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂಬರ್ 2 ಸ್ಥಾನಕ್ಕೇರಿಸಿದ್ದ ಮುಖ್ಯಮಂತ್ರಿಯೂ ಸೇರಿದಂತೆ ಸಾಲು ಸಾಲು ಸಚಿವರು ಜೈಲು ಸೇರಿದ್ದನ್ನು ದೇಶ ಕಂಡಿದೆ. ಈಗ ಈ ಭ್ರಷ್ಟರ ಎರಡನೇ ಅಂಕ ಶುರುವಾಗಿದೆ. ಮತ್ತೆ ದೇಶದ ಮುಂದೆ ಕರ್ನಾಟಕ ತಲೆ ತಗ್ಗಿಸುವಂತಾಗಿದೆ" ಎಂದು ಸಿದ್ದರಾಮಯ್ಯ ದೂರಿದ್ದಾರೆ.

ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇವೆ
"ಜಬಾಬ್ದಾರಿಯುತ ವಿರೋಧ ಪಕ್ಷವಾಗಿ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡುತ್ತೇವೆ. ಇದು ನಮ್ಮ ಕರ್ತವ್ಯ. ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಇನ್ನಷ್ಟು ಜೀವಗಳು ಬಲಿಯಾಗಬಾರದು. ಇದು ಕೇವಲ ಕಾಂಗ್ರೆಸ್ ಪಕ್ಷದ ರಾಜಕೀಯ ಪ್ರತಿಭಟನೆಯಾಗಬಾರದು" ಎಂದು ಸಿದ್ದರಾಮಯ್ಯ ಹೇಳಿದರು.

ಪ್ರತಿ ಕನ್ನಡಿಗನೂ ಬೀದಿಗಿಳಿಯಬೇಕು
"ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಲೂಟಿ ಮಾಡುತ್ತಿರುವ ಮತ್ತು ರಾಷ್ಟಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಬೀದಿಗಿಳಿಯಬೇಕಾಗಿದೆ" ಎಂದು ಸಿದ್ದರಾಮಯ್ಯ ಹೇಳಿದರು.
"ಸಚಿವ ಈಶ್ವರಪ್ಪ ಮೇಲೆ ನಿನ್ನೆಯೇ ಎಫ್ಐಆರ್ ದಾಖಲಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿರುವ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಬರೆದಿದ್ದಾರೆ. ರಾಜೀನಾಮೆ ಕೊಡುವುದಿಲ್ಲ ಎಂದು ಹಟ ಹಿಡಿದಿರುವ ಈಶ್ವರಪ್ಪನವರಿಗೆ ನರೇಂದ್ರ ಮೋದಿಯಾದಿಯಾಗಿ ಎಲ್ಲಾ ನಾಯಕರು ಮತ್ತು ಸರ್ಕಾರ ಹೆದರುತ್ತಿರುವುದು ಯಾಕೆ?" ಎಂದು ಪ್ರಶ್ನಿಸಿದರು.

ಮೋದಿಗೂ ಪಾಲು ಇದೆಯೇ?
"ಶೇ 40ರಷ್ಟು ಕಮಿಷನ್ನಲ್ಲಿ ಪಾಲುಪಡೆದವರೆಲ್ಲರ ಹೆಸರು ಬಯಲು ಮಾಡುತ್ತೇನೆ ಎಂದು ಈಶ್ವರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಯೇ?. ರಾಜ್ಯ ಸರ್ಕಾರದ ಶೇ 40 ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದೆ ಪ್ರಧಾನಿ ನರೇಂದ್ರ ಮೋದಿ ಸುಮ್ಮನಿರುವುದು ಏಕೆ?. ಕಮಿಷನ್ನಲ್ಲಿ ಮೋದಿಯವರಿಗೂ ಪಾಲಿದೆಯಾ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
"ಸಚಿವ ಈಶ್ವರಪ್ಪ ಅವರ ಮೇಲೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದ ಜೊತೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ -13 ರಡಿ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಬೇಕು. ಇದೊಂದು ಗಂಭೀರ ಸ್ವರೂಪದ ಅಪರಾಧ, ಕೂಡಲೇ ಅವರ ಬಂಧನವಾಗಬೇಕು ಎಂದು ಒತ್ತಾಯಿಸುತ್ತೇನೆ" ಎಂದು ಆಗ್ರಹಿಸಿದರು.

ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?
"ಈಶ್ವರಪ್ಪ ಅವರನ್ನು ಅನೇಕ ಬಾರಿ ಭೇಟಿ ಮಾಡಿದರೂ ಪ್ರಯೋಜನವಾಗದ ಕಾರಣಕ್ಕೆ ಸಂತೋಷ್ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಮಾಡಿ ಮನವಿ ಮಾಡಿದ್ದರು. ಇವರ ಪ್ರತಿಕ್ರಿಯೆ ಏನು?. ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಉದ್ದೇಶದಿಂದ ಸಂತೋಷ್ ಪಾಟೀಲ್ ಉಡುಪಿಗೆ ಹೋಗಿದ್ದರು, ತಮ್ಮ ಕೊನೆ ಪ್ರಯತ್ನವೂ ಫಲ ನೀಡದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರಿಂದ
ಕಮಿಷನ್ ಗಾಗಿ ಕಿರುಕುಳ ನೀಡಿದ ಸಚಿವರು ಮಾತ್ರವಲ್ಲ ಮುಖ್ಯಮಂತ್ರಿಗಳೂ ಈ ಸಾವಿಗೆ ಹೊಣೆಗಾರರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಪತ್ರ ಕೊಟ್ಟಿದೆ. ರಾಜ್ಯಪಾಲರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮತ್ತು ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತಾರೆ ಎಂಬ ಭರವಸೆ ನಮಗಿದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications