ಕರ್ನಾಟಕ ಚುನಾವಣೆ : ರಾಹುಲ್ ಗಾಂಧಿ ಸಪ್ತ ಸೂತ್ರಗಳು!
ಬೆಂಗಳೂರು, ಜನವರಿ 14 : ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದ ನಾಯಕರ ಜೊತೆ ಮೊದಲ ಬಾರಿಗೆ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ ಎಂದು ರಾಜ್ಯನಾಯಕರು ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಉಸ್ತುವಾರಿ ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂತಾದವರು ಪಾಲ್ಗೊಂಡಿದ್ದರು.
ಕಾಂಗ್ರೆಸ್ ಅಧಿಕಾರದಲ್ಲಿರುವ ದೇಶದ ಅತಿ ದೊಡ್ಡ ರಾಜ್ಯ ಕರ್ನಾಟಕ. ಆದ್ದರಿಂದ, ಹೈಕಮಾಂಡ್ ರಾಜ್ಯದ ಮೇಲೆ ವಿಶೇಷ ಗಮನವಿಟ್ಟಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕದ ಚುನಾವಣೆ ಗೆಲ್ಲಲು ರೂಪಿಸಿರುವ ತಂತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
2018ರ ಚುನಾವಣೆಯಲ್ಲಿ ಪುನಃ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ರಾಜ್ಯ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಈ ಕುರಿತು ಮನವರಿಕೆ ಮಾಡಿಕೊಟ್ಟಿದ್ದಾರೆ. ರಾಹುಲ್ ಗಾಂಧಿ ಫೆಬ್ರವರಿಯಲ್ಲಿ ರಾಜ್ಯಕ್ಕೆ ಬರಲಿದ್ದು, ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಕೇಂದ್ರ ಸರ್ಕಾರದ ವೈಫಲ್ಯದ ಪ್ರಚಾರ
ಕರ್ನಾಟಕದ ಚುನಾವಣಾ ಪ್ರಚಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ. ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಸರ್ಕಾರವನ್ನು ನಾಯಕರು ಟಾರ್ಗೆಟ್ ಮಾಡಲಿದ್ದಾರೆ.

ಕೋಮುವಾದ ಬೇಡ
ಜಾತಿ, ಮತ, ಪಂಥದ ವಿಚಾರಗಳ ಬಗ್ಗೆ ನಾಯಕರು ಪ್ರಚಾರ ಸಭೆಗಳಲ್ಲಿ ಹೇಳಿಕೆ ಕೊಡುವುದಿಲ್ಲ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ತೋರಿರುವ ಮಲತಾಯಿ ಧೋರಣೆಯನ್ನು ಪ್ರಚಾರ ಸಭೆಯಲ್ಲಿ ಜನರಿಗೆ ತಿಳಿಸಲಾಗುತ್ತದೆ.

ಸಾಮಾಜಿಕ ಜಾಲತಾಣಗಳ ಬಳಕೆ
ಚುನಾವಣೆಯಲ್ಲಿ ಸಾಮಾಜಿಕ ಜಾಲತಾಣಗಳನ್ನು ಸಕ್ರಿಯವಾಗಿ ಬಳಸಬೇಕು. ಆದರೆ, ಸಾಮಾಜಿಕ ತಾಣಗಳು ದೆಹಲಿಯಿಂದಲೇ ಕಾರ್ಯ ನಿರ್ವಹಣೆ ಮಾಡುತ್ತವೆ. ಅಂದಹಾಗೆ ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ಕರ್ನಾಟಕದವರೇ ಆದ ಮಾಜಿ ಸಂಸದೆ ರಮ್ಯಾ.

ರಾಹುಲ್ ಗಾಂಧಿ ರಾಜ್ಯ ಪ್ರವಾಸ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆ. 10,11 ಮತ್ತು 12ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಚ್ 1ರಿಂದ ಎಲ್ಲಾ ಕಾಂಗ್ರೆಸ್ ನಾಯಕರು ಬಸ್ ಮೂಲಕ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ. ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಭೇಟಿ ನೀಡಿ ಪ್ರಚಾರ ನಡೆಸಿ, ಪಕ್ಷಕ್ಕೆ ಮತ ಕೇಳಲಿದ್ದಾರೆ.

ಪಕ್ಷವನ್ನು ಸಂಘಟನೆ ಮಾಡಿ
ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಿ ಎಂದು ರಾಹುಲ್ ಗಾಂಧಿ ರಾಜ್ಯದ ನಾಯಕರಿಗೆ ಸೂಚನೆ ನೀಡಿದ್ದಾರೆ. ಪ್ರತಿ ಬೂತ್ನಲ್ಲಿ ಜಾಗೃತಿ ಅಭಿಯಾನ ನಡೆಸಿ ಮತ ಹಂಚಿಕೆ ಪ್ರಮಾಣವನ್ನು ಹೆಚ್ಚಿಸಬೇಕು. ಬೂತ್ ಮಟ್ಟದಲ್ಲಿ ಪಕ್ಷ ಬಲಗೊಳ್ಳಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಆಟಾಟೋಪಕ್ಕೆ ಕಡಿವಾಣ
ಕರಾವಳಿ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಗಲಭೆಗಳನ್ನು ಎಬ್ಬಿಸಿ ಅದರಿಂದ ಬಿಜೆಪಿ ಮತಗಳನ್ನು ಪಡೆಯಬಹುದು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಸಮೀಕ್ಷೆ ವರದಿ ಬಗ್ಗೆ ಚರ್ಚೆ
ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರು ಪ್ರತ್ಯೇಕವಾಗಿ ರಾಜ್ಯದಲ್ಲಿ ಸಮೀಕ್ಷೆಗಳನ್ನು ನಡೆಸಿದ್ದು, ಆ ಸಮೀಕ್ಷೆಗಳ ಬಗ್ಗೆಯೂ ಚರ್ಚೆ ನಡೆಯಿತು.












Click it and Unblock the Notifications