ಪಂಚ ರಾಜ್ಯಗಳ ಚುನಾವಣೆ, ರಾಜ್ಯಾಧ್ಯಕ್ಷರ ಆಯ್ಕೆ ಸದ್ಯಕ್ಕಿಲ್ಲ!
ಬೆಂಗಳೂರು, ಮಾರ್ಚ್ 14 : ಕರ್ನಾಟಕ ಕಾಂಗ್ರೆಸ್ ಮತ್ತು ಬಿಜೆಪಿಗೆ ನೂತನ ಅಧ್ಯಕ್ಷರ ಆಯ್ಕೆ ವಿಳಂಬವಾಗುವ ಸಾಧ್ಯತೆ ಇದೆ. ಎರಡೂ ಪಕ್ಷಗಳಲ್ಲಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ವರಿಷ್ಠರ ಗಮನ ವಿಧಾನಸಭೆ ಚುನಾವಣೆ ಮೇಲಿದೆ.
ಕೇಂದ್ರ ಚುನಾವಣಾ ಆಯೋಗ ಐದು ರಾಜ್ಯಗಳ ಚುನಾವಣೆ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ಏಪ್ರಿಲ್ 4ರಿಂದ ಚುನಾವಣೆಗಳು ಆರಂಭವಾಗಲಿದ್ದು, ಮೇ 16ರ ತನಕ ಚುನಾವಣೆ ನಡೆಯಲಿದೆ. ಮೇ 19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. [5 ರಾಜ್ಯಗಳ ಚುನಾವಣೆ ವೇಳಾಪಟ್ಟಿ]

ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ, ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗಳು ಎದುರಾಗಿರುವುದರಿಂದ ವರಿಷ್ಠರ ಗಮನ ಅತ್ತ ಸಾಗಿದೆ. ಆದ್ದರಿಂದ, ಕಾಂಗ್ರೆಸ್ ಮತ್ತು ಬಿಜೆಪಿಗೆ ನೂತನ ಅಧ್ಯಕ್ಷರ ಆಯ್ಕೆ ವಿಳಂಬವಾಗಲಿದೆ. [ಕೆಪಿಸಿಸಿಗೆ ನೂತನ ಸಾರಥಿ ಯಾರು?]
ಪರಮೇಶ್ವರ ಮುಂದುವರಿಕೆ : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ 5 ವರ್ಷದ ಅವಧಿ ಪೂರ್ಣಗೊಂಡಿದ್ದರೂ ಅವರು ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರಿದರೂ ಅವರ ಅಧ್ಯಕ್ಷರಾಗಿಯೇ ಮುಂದುವರೆದಿದ್ದಾರೆ. ಚುನಾವಣೆಗಳು ಎದುರಾಗಿರುವುದರಿಂದ ಸದ್ಯಕ್ಕೆ ಪಕ್ಷ ಅಧ್ಯಕ್ಷರ ಆಯ್ಕೆ ಬಗ್ಗೆ ಗಮನ ಹರಿಸುವುದಿಲ್ಲ. [ಕರ್ನಾಟಕ ಬಿಜೆಪಿಗೆ ನೂತನ ಸಾರಥಿ ಯಾರು?]
ಅತ್ತ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಅಧಿಕಾರವೂ ಮುಗಿಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಎದುರಾದ ಕಾರಣ ಅಧ್ಯಕ್ಷರ ಬದಲಾವಣೆಯಾಗಿಲ್ಲ. ಅಧ್ಯಕ್ಷ ಹುದ್ದೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.
ಎರಡೂ ಪಕ್ಷಗಳು ಕರ್ನಾಟಕದ ಅಕ್ಕ-ಪಕ್ಕದ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯ ಹೊಣೆಯನ್ನು ರಾಜ್ಯದ ನಾಯಕರಿಗೂ ವಹಿಸಲಿವೆ. ಆದ್ದರಿಂದ, ಚುನಾವಣೆ ಮುಗಿಯುವ ತನಕ ಎರಡೂ ಪಕ್ಷಗಳಲ್ಲಿ ಅಧ್ಯಕ್ಷರ ಬದಲಾವಣೆ ನಡೆಯುವ ಸಾಧ್ಯತೆ ಕಡಿಮೆ ಇದೆ.












Click it and Unblock the Notifications