ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಡ್ಯಾನಿಷ್ ಅಲಿ
ಬೆಂಗಳೂರು, ಮೇ 20: ಕಾಂಗ್ರೆಸ್ ಮತ್ತು ಜೆಡಿಎಸ್ ಕರ್ನಾಟಕ ಮಾಡಿಕೊಂಡಿರುವ ಮೈತ್ರಿಯನ್ನು ಇಡೀ ದೇಶವೇ ಕುತೂಹಲದ ಕಣ್ಣುಗಳಿಂದ ನೋಡುತ್ತಿದೆ. ಸಮಾನ ವೈರಿಯನ್ನು ಎದುರಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಹೆಣೆದಿರುವ 'ಮೈತ್ರಿ ಸೂತ್ರ'ವನ್ನು ದೇಶದಾದ್ಯಂತ ವಿಸ್ತರಿಸುವ ಹವಣಿಕೆಯಲ್ಲಿ ಪ್ರಾದೇಶಿಕ ಪಕ್ಷಗಳು ಮತ್ತು ಕಾಂಗ್ರೆಸ್ ಇದೆ.
ಇದರ ಭಾಗವಾಗಿ ಕರ್ನಾಟಕದಲ್ಲಿ ಈ ಮೈತ್ರಿಯನ್ನು ಲೋಕಸಭೆ ಚುನಾವಣೆವರೆಗೆ ವಿಸ್ತರಿಸಿ ಕರ್ನಾಟಕದಲ್ಲಿ ಬಿಜೆಪಿಗೆ ಡಿಚ್ಚಿ ನೀಡಲು ದೇವೇಗೌಡರು ಮತ್ತು ಕಾಂಗ್ರೆಸ್ ನಾಯಕರು ಆಲೋಚಿಸುತ್ತಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಲೋಕಸಭೆ ಮಹಾಒಕ್ಕೂಟಕ್ಕೆ ಮುನ್ನಡಿಯೇ?
ಇದಕ್ಕೆ ಪೂರಕವಾಗಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯೂ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ, "ಕಾಂಗ್ರೆಸ್ ಮತ್ತು ಜೆಡಿಸ್ ಮೈತ್ರಿ ದೀರ್ಘ ಕಾಲ ಮುಂದುವರಿಯಲಿದೆ. ಲೋಕಸಭೆ ಚುನಾವಣೆಯಲ್ಲಿ ಈ ಮೈತ್ರಿ ಮತ್ತಷ್ಟು ಗಟ್ಟಿಯಾಗಲಿದೆ," ಎಂದಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾದರೆ ಹಳೆ ಮೈಸೂರಿನ ಎಲ್ಲಾ ಅಥವಾ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳೂ ಇವೆ. ಉಳಿದ ಭಾಗದಲ್ಲಿಯೂ ಈ ಮೈತ್ರಿಯ ಲಾಭ ಉಭಯ ಪಕ್ಷಗಳಿಗೆ ಸಿಗುವ ಸಾಧ್ಯತೆ ಇದೆ.