ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆ : ಯಾರು, ಏನು ಹೇಳಿದರು?
ಬೆಂಗಳೂರು, ಜುಲೈ 07 : ಕಾಂಗ್ರೆಸ್ನ 9, ಜೆಡಿಎಸ್ನ 3 ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರು ಮುಂಬೈನ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು, ಮುಂದಿನ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.
ಮುಂಬೈನಲ್ಲಿ ಕುಳಿತ ಶಾಸಕರು ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗಾಗಲೇ 13 ಶಾಸಕರು ರಾಜೀನಾಮೆ ನೀಡಿದ್ದು, ಮಂಗಳವಾರ ಈ ಕುರಿತು ತೀರ್ಮಾನ ಕೈಗೊಳ್ಳಲಿದ್ದೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಸಂಜೆ ಬೆಂಗಳೂರಿಗೆ ಬರಲಿದ್ದು ಬಳಿಕ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಚುರುಕುಗೊಳ್ಳುವ ಸಾಧ್ಯತೆ ಇದೆ. ಪದ್ಮನಾಭನಗರದ ನಿವಾಸದಲ್ಲಿ ಎಚ್.ಡಿ.ದೇವೇಗೌಡರನ್ನು ಸಚಿವ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು.
ಕರ್ನಾಟಕದ ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯ, ಪರಮೇಶ್ವರ ಅವರ ಜೊತೆ ಸಭೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ವಿದೇಶ ಪ್ರವಾಸ ಮೊಟಕುಗೊಳಿಸಿದ್ದು, ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ....

ಎಚ್.ವಿಶ್ವನಾಥ್ ಹೇಳಿಕೆ
'ಎಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಮಾತಿಗೆ ಮನ್ನಣೆ ಕೊಡುವ ಕೆಲಸ ಮಾಡಲಿಲ್ಲ. ಹೆಸರಿಗೆ ಮಾತ್ರ ಜೆಡಿಎಸ್ ಅಧ್ಯಕ್ಷನಾಗಿದ್ದೆ. ಜೆಡಿಎಸ್ ನಾಯಕರ ನಡವಳಿಕೆಗೆ ಬಹುತೇಕ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಜಿ.ಟಿ.ದೇವೇಗೌಡ ಅವರು ರಾಜೀನಾಮೆ ಕೊಡುತ್ತಾರೆ ಕಾದು ನೋಡಿ' ಎಂದು ಹುಣಸೂರು ಶಾಸಕ ಎಚ್.ವಿಶ್ವನಾಥ್ ಹೇಳಿದರು.

ಸಚಿವ ಸ್ಥಾನ ನನಗೆ ಬೇಡ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅವರು, '10 ಶಾಸಕರು ರಾಜೀನಾಮೆ ಕೊಡುತ್ತಾರೆ. ಸಚಿವ ಸ್ಥಾನ ನನಗೆ ಬೇಡ. ಸರ್ಕಾರ ಪತನ ಆಗೋದು ಖಚಿತ' ಎಂದು ಹೇಳಿದ್ದಾರೆ. ಬಿ.ಸಿ.ಪಾಟೀಲ್ ಅವರು ಮುಂಬೈನಲ್ಲಿದ್ದಾರೆ.

ಶಾಸಕ ಮುನಿರತ್ನ ಹೇಳಿಕೆ
ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಮುನಿರತ್ನ ಅವರು ಹೇಳಿಕೆ ನೀಡಿದ್ದು, 'ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ಕೊಡುವ ಪಕ್ಷಕ್ಕೆ ನಮ್ಮ ಬೆಂಬಲ. ಬಿಜೆಪಿ ಜತೆ ಕೈಜೋಡಿಸಲು ಸಿದ್ದ. ನಮಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ' ಎಂದು ಹೇಳಿದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮುನಿರತ್ನ ಅವರು ಬೆಂಗಳೂರಿನಲ್ಲಿದ್ದಾರೆ.

ನಮ್ಮನ್ನು ಕಡೆಗಣಿಸಲಾಗಿದೆ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿರುವ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು, 'ನಾವು ಬಿಜೆಪಿ ಸೇರಲು ನಿರ್ಧರಿಸಿದ್ದೇವೆ. ಮೈತ್ರಿ ಸರ್ಕಾರದಲ್ಲಿ ನಮ್ಮನ್ನು ಕಡೆಗಣಿಸಲಾಗಿದೆ' ಎಂದು ಆರೋಪಿಸಿದ್ದಾರೆ.












Click it and Unblock the Notifications