ಅತಂತ್ರ ಜಿಲ್ಲಾ ಪಂಚಾಯಿತಿಗಳಲ್ಲಿ ಮೈತ್ರಿಗೆ ಕಸರತ್ತು
ಬೆಂಗಳೂರು, ಮಾರ್ಚ್ 16 : ಅತಂತ್ರವಾಗಿರುವ ಜಿಲ್ಲಾ ಪಂಚಾಯಿತಿಗಳಲ್ಲಿ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ನಿರ್ಧರಿಸಿವೆ. ಉಭಯ ಪಕ್ಷಗಳು ಸ್ಥಳೀಯ ನಾಯಕರ ಜೊತೆ ಮೈತ್ರಿ ಬಗ್ಗೆ ಮಾತುಕತೆ ನಡೆಸಲು ಸಭೆ ಕರೆದಿವೆ.
ಫೆಬ್ರವರಿ 23ರಂದು ಜಿಲ್ಲಾ ಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, 11 ಜಿಲ್ಲೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ. ಈ ಜಿಲ್ಲೆಗಳಲ್ಲಿ ಅಧಿಕಾರದ ಗದ್ದುಗೆ ಏರಲು ಮೈತ್ರಿ ಅನಿವಾರ್ಯವಾಗಿದೆ. ಆದರೆ, ಯಾವ-ಯಾವ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. [ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಜಿಲ್ಲಾ ಪಂಚಾಯಿತಿ ಮೈತ್ರಿ ಮಾತುಕತೆ!]

ಕೆಲವು ದಿನಗಳ ಹಿಂದೆ ಕೇಂದ್ರ ಕಾನೂನು ಸಚಿವ ಮತ್ತು ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ.ಸದಾನಂದ ಗೌಡ ಅವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮೈತ್ರಿ ಕುರಿತು ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ. ಆದರೆ, ಎರಡೂ ಪಕ್ಷಗಳು ಅಂತಿಮ ತೀರ್ಮಾನ ಕೈಗೊಂಡಿಲ್ಲ. [30 ಜಿಲ್ಲೆಗಳ ಪಂಚಾಯ್ತಿ ಫಲಿತಾಂಶ ಸಂಪೂರ್ಣ ವಿವರ]
ಜೆಡಿಎಸ್ ಜೊತೆ ಮೈತ್ರಿ? : ಇತ್ತ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಮಾತುಕತೆ ನಡೆಸಲು ಮುಂದಾಗಿದೆ. ಈ ಕುರಿತು ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಲು ಮಾ.18ರಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆದಿದೆ. ಅತ್ತ ಜೆಡಿಎಸ್ ಮಾ.19ರಂದು ಬೆಂಗಳೂರಿನಲ್ಲಿ ಸಮಾವೇಶ ನಡೆಸಲಿದ್ದು, ಅಂದು ಮೈತ್ರಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. [ತಾ.ಪಂ ಫಲಿತಾಂಶ : ಯಾವ ಜಿಲ್ಲೆಯಲ್ಲಿ ಯಾರಿಗೆ ಗೆಲುವು?]
ಸರ್ಕಾರ ಮಾ.18ರಂದು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಕಟಿಸಲಿದ್ದು, ನಂತರ ಮೈತ್ರಿ ಮಾತುಕತೆ ರಂಗೇರುವ ಸಾಧ್ಯತೆ ಇದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಮೈತ್ರಿಗೆ ಒಲವು ಹೊಂದಿದ್ದಾರೆ. ಆದರೆ, ದೇವೇಗೌಡರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಅತಂತ್ರ ಜಿಲ್ಲಾ ಪಂಚಾಯಿತಿಗಳು : ರಾಜ್ಯದ 30 ಜಿಲ್ಲಾ ಪಂಚಾಯಿತಿಗಳ ಪೈಕಿ ಬೆಂಗಳೂರು ನಗರ, ತುಮಕೂರು, ಧಾರವಾಡ, ಮೈಸೂರು, ಬೆಳಗಾವಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೋಲಾರ, ಶಿವಮೊಗ್ಗ ಜಿಲ್ಲಾ ಪಂಚಾಯಿತಿಗಳು ಅತಂತ್ರವಾಗಿವೆ.












Click it and Unblock the Notifications