ವಿಧಾನಸಭಾ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
ಬೆಂಗಳೂರು, ಅ.5, ರಾಜ್ಯದ ಎರಡು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ ವಿ. ಮಾನೆ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ಉಪಚುನಾವಣಾ ಕ್ಷೇತ್ರಕ್ಕೆ ಅಶೋಕ ಮನಗೂಳಿ ಅವರ ಹೆಸರನ್ನು ಅಂತಿಮ ಗೊಳಿಸಿ ಎಐಸಿಸಿ ಚುನಾವಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಮಂಗಳವಾರ ಸಂಜೆ ಆದೇಶ ಹೊರಡಿಸಿದ್ದಾರೆ.
ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಟಿಕೆಟ್ ಗೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ಟಿಕೆಟ್ಗಾಗಿ ಭಾರಿ ಲಾಭಿ ನಡೆಸಿದ್ದರು. ಬೆಂಗಳೂರಿನಲ್ಲಿ ವಿವಿಧ ಮುಖಂಡರನ್ನು ಭೇಟಿಯಾಗಿದ್ದಲ್ಲದೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದರು. ಹಾವೇರಿ ಜಿಲ್ಲೆಯ ಹೊರಗಿನವರಾದ ಶ್ರೀನಿವಾಸ ಮಾನೆಗೆ ಟಿಕೆಟ್ ನೀಡಬಾರದು. ಜಿಲ್ಲೆಯವರಾದ ತಮಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ, ಅಂತಿಮವಾಗಿ ಟಿಕೆಟ್ ಗಿಟ್ಟಿಸುವಲ್ಲಿ ಶ್ರೀನಿವಾಸ ಮಾನೆ ಯಶಸ್ವಿಯಾಗಿದ್ದಾರೆ. ಈಗ ಮನೋಹರ್ ತಹಶೀಲ್ದಾರ್ ಸಹಕಾರ ನೀಡುತ್ತಾರಾ ಅಥವಾ ತಿರುಗಿ ಬೀಳುತ್ತಾರಾ ಎಂಬುದನ್ನು ಕಾದು ನೋಡಬೇಕು.
ಇನ್ನು ಜೆಡಿಎಸ್ನಲ್ಲಿ ಶಾಸಕರಾಗಿದ್ದ ಎಂ.ಸಿ. ಮನಗೂಳಿ ಅವರ ನಿಧನದಿಂದ ತೆರವಾಗಿದ್ದ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿಗೆ ಟಿಕೆಟ್ ಘೋಷಣೆ ಮಾಡಿದೆ. ಜೆಡಿಎಸ್ನಲ್ಲಿದ್ದ ಅಶೋಕ್ ಮನಗೂಳಿ ಕಳೆದ ಮಾರ್ಚ್ನಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.
ಎರಡು ಕ್ಷೇತ್ರಗಳ ಉಪಚುನಾವಣೆಗೆ ಅ.8 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ.11ರಂದು ನಾಮಪತ್ರ ಪರಿಶೀಲನೆ ನಡೆಯುತ್ತದೆ. ಅ.13. ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಅ.30ರಂದು ಚುನಾವಣೆ ನಡೆಯಲಿದ್ದು, ನ.2ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
Recommended Video