ಚಿಕ್ಕಬಳ್ಳಾಪುರ ಸೇರಿ 3 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: 'ಕೈ' ಹುರಿಯಾಳು ಇವರೇ ನೋಡಿ!
ಬೆಂಗಳೂರು, ಮಾರ್ಚ್ 31: 2024ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ 9ನೇ ಪಟ್ಟಿ ಪ್ರಕಟ ಮಾಡಲಾಗಿದ್ದು, ಕರ್ನಾಟಕದಲ್ಲಿ ಒಂದು ಕ್ಷೇತ್ರ ಹೊರತು ಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಿಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. 9ನೇ ಪಟ್ಟಿಯಲ್ಲಿ ಕರ್ನಾಟಕದ ಮೂರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಈ ಹಿಂದಿನ ಪಟ್ಟಿ ಬಿಡುಗಡೆ ಬಳಿಕ ಬಾಕಿ ಉಳಿದಿದ್ದ ಕೋಲಾರ, ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಪೈಕಿ ಮೂಲರು ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮವಾಗಿದ್ದು, ಕಗ್ಗಂಟಾಗಿರುವ ಕೋಲಾರ ಕ್ಷೇತ್ರದ ಟಿಕೆಟ್ ಅನ್ನು ಇನ್ನೂ ಕಾಯ್ದಿರಿಸಲಾಗಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಇ ತುಕರಾಂ, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಚಿವ ಎಚ್.ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂ.ಎಸ್.ರಾಮಯ್ಯನವರ ಮೊಮ್ಮಗ ರಕ್ಷಾ ರಾಮಯ್ಯಗೆ ಕಾಂಗ್ರೆಸ್ನಿಂದ ಟಿಕೆಟ್ ನೀಡಲಾಗಿದೆ.
ಅಭ್ಯರ್ಥಿಗಳ ಕ್ಷೇತ್ರವಾರು ವಿವರ
ಸದ್ಯ ಕಾಂಗ್ರೆಸ್ ಹಿಡಿತದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಎಂ.ಎಸ್.ರಾಮಯ್ಯನವರ ಮೊಮ್ಮಗ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಡಾ.ಕೆ ಸುಧಾಕರ್ ಎದುರಾಳಿಯಾಗಿ ಯುವ ನಾಯಕನನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಎನ್. ಹೆಚ್ ಶಿವಶಂಕರ ರೆಡ್ಡಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಸಮುದಾಯದ ಮತಗಳ ಲೆಕ್ಕಚಾರ ಹಾಗೂ ಪಕ್ಷದ ಯುವ ಮುಖಂಡರಿಗೆ ಅವಕಾಶ ನೀಡುವ ದೃಷ್ಟಿಯಿಂದ ಕಾಂಗ್ರೆಸ್ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿದೆ. ರಕ್ಷಾ ರಾಮಯ್ಯ ಬಲಜಿಗ ಸಮುದಾಯದವರಾಗಿದ್ದು, ಈ ಸಮುದಾಯ ಕ್ಷೇತ್ರದಲ್ಲಿ ಅತಿ ಹೆಚ್ಚು ಪ್ರಾಬಲ್ಯ ಹೊಂದಿದೆ.
ಚಾಮರಾಜನಗರ ಲೋಕಸಭಾ ಕ್ಷೇತರದಿಂದ ಸಚಿವ ಹೆಚ್. ಸಿ ಮಹದೇವಪ್ಪ ಪುತ್ರ ಸುನಿಲ್ ಬೋಸ್ಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ಸುನಿಲ್ ಬೋಸ್ ಬಿಜೆಪಿ ಅಭ್ಯರ್ಥಿ ಎಸ್.ಬಾಲಾಜಿಗೆ ಎದುರಾಳಿಯಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಅನೇಕ ಹಾಲಿ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಹೆಚ್.ಸಿ ಮಹದೇವಪ್ಪ ಕೂಡ ಪುತ್ರನಿಗೆ ಲೋಕಸಭಾ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ನಿರೀಕ್ಷಿಸಿದಂತೆ ಹಾಲಿ ಶಾಸಕ ಇ.ತುಕರಾಂಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಳ್ಳಾರಿಯಿಂದ ಬಿಜೆಪಿ ಪ್ರಬಲ ಅಭ್ಯರ್ಥಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಕಣಕ್ಕಿಳಿಸಿದ್ದು, ಕ್ಷೇತ್ರದಲ್ಲಿ ಗೆಲ್ಲಲೇಬೇಕು ಎನ್ನುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹಾಲಿ ಶಾಸಕರನ್ನೇ ಸ್ಪರ್ಧೆಗಳಿಸಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ಮಾಜಿ ಸಂಸದ ವಿ. ಎಸ್. ಉಗ್ರಪ್ಪ, ಸಚಿವ ಬಿ.ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್, ಅಳಿಯ ಮುರಳಿ ಕೃಷ್ಣ ಸೇರಿದಂತೆ ಅನೇಕರು ಲಾಬಿ ನಡೆಸಿದ್ದರು.












Click it and Unblock the Notifications