Congress bus yatra : ಜನವರಿ 11 ರಿಂದ ಬೆಳಗಾವಿಯಿಂದಲೇ ಕಾಂಗ್ರೆಸ್ ಬಸ್ ಯಾತ್ರೆ ಆರಂಭ: ಡಿ.ಕೆ.ಶಿವಕುಮಾರ್
ಬೆಂಗಳೂರು, ಡಿಸೆಂಬರ್ 20: ಜನವರಿ 11 ರಿಂದ ಕಾಂಗ್ರೆಸ್ ಬಸ್ ಯಾತ್ರೆ ಬೆಳಗಾವಿಯಿಂದಲೇ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಡಿ.ಕೆ.ಶಿವಕುಮಾರ್ ಮಾತನಾಡಿರುವ ವಿಡಿಯೊವನ್ನು ಕಾಂಗ್ರೆಸ್ ಟ್ವೀಟ್ ಮಾಡಿಕೊಂಡಿದೆ.
'ಜನವರಿ 11 ರಿಂದ ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆ ಆರಂಭವಾಗಲಿದೆ. ಮಹಾತ್ಮಾ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾಂಗ್ರೆಸ್ನ ಪ್ರಥಮ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಇಂತಹ ಐತಿಹಾಸಿಕ ಹಿನ್ನೆಲೆಯ ಬೆಳಗಾವಿಯಿಂದಲೇ ಈ ಯಾತ್ರೆ ಆರಂಭವಾಗಲಿದೆ. ಜ.14, 15ರಂದು ಸಂಕ್ರಾಂತಿ ಪ್ರಯುಕ್ತ ಯಾತ್ರೆಗೆ ವಿರಾಮವಿರಲಿದೆ' ಎಂದು ಡಿಕೆಶಿ ಮಾಹಿತಿ ನೀಡಿದರು.
'ಜನೆವರಿ 16 ರಿಂದ 19ರ ವರೆಗೆ ಹೊಸಪೇಟೆ, ಕೊಪ್ಪಳ, ಬಾಗಲಕೋಟೆ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ಮುಂದುವರೆಯಲಿದ್ದು, 20 ರಂದು ಒಂದು ದಿನ ವಿರಾಮ ಇರಲಿದೆ. ಯಾತ್ರೆ ಪುನಃ ಜನೆವರಿ 21 ರಿಂದ 23ರ ವರೆಗೆ ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಡೆಯಲಿದೆ' ಎಂದು ಅವರು ತಿಳಿಸಿದರು.

'ಬಸ್ ಯಾತ್ರೆಯ ಬಳಿಕ 2 ತಂಡಗಳನ್ನಾಗಿ ಮಾಡಿಕೊಂಡು 224 ಕ್ಷೇತ್ರಗಳಿಗೆ ಪ್ರವಾಸ ಮಾಡುತ್ತೇವೆ. ನಾನು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಹಾಗೂ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ಕರಾವಳಿ ಹಾಗೂ ಬೆಂಗಳೂರು ಭಾಗದಲ್ಲಿ ನಾನು ಸಿದ್ದರಾಮಯ್ಯ ಇಬ್ಬರೂ ಒಟ್ಟಿಗೆ ಪ್ರವಾಸ ಮಾಡುತ್ತೇವೆ' ಎಂದೂ ಅವರು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಸ್ ಯಾತ್ರೆ ನಡೆಯಲಿದೆ. ಕರ್ನಾಟಕದ 21 ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯು ಇನ್ನೇನು ನಾಲ್ಕೈದು ತಿಂಗಳು ಬಾಕಿ ಇದೆ. ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.
ಈಗಾಗಲೇ ಪಕ್ಷವು ಆಂತರಿಕ ಸಮೀಕ್ಷೆ ನಡೆಸಿದೆ. ಇದರ ಪ್ರಕಾರ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಅಧಿಕಾರ ಹಿಡಿಯಲಿದೆ. ಸಿದ್ದರಾಮಯ್ಯನವರ ವರ್ಚಸ್ಸೂ ಇದಕ್ಕೆ ಕಾರಣವಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ. ಒಂದು ವೇಳೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ, ಸಿದ್ದರಾಮಯ್ಯ ಹಾಗೂ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯಲಿದೆ ಎಂಬುದು ರಾಜಕೀಯ ವಿಶ್ಲೇಷಕರ ವಾದವಾಗಿದೆ.












Click it and Unblock the Notifications