Karnataka Bandh: ಮಾರ್ಚ್ 9ರಂದು ರಾಜ್ಯ ಬಂದ್ ಗೆ ಕರೆ ನೀಡಿದ ಕಾಂಗ್ರೆಸ್
ಚುನಾವಣಾ ವರ್ಷದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಿಗುವ ಎಲ್ಲಾ ಅಸ್ತ್ರಗಳನ್ನೂ ಪ್ರಯೋಗಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಘಟಕ,ವಿನೂತನ ಪ್ರತಿಭಟನೆಗೆ ಮುಂದಾಗಿದೆ. ರಾಜ್ಯಾದ್ಯಂತ 02 ಗಂಟೆಗಳ ಬಂದ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
ತುಮಕೂರು, ಮಾರ್ಚ್ 05: ಚುನಾವಣಾ ವರ್ಷದಲ್ಲಿ ಬಿಜೆಪಿ ಸರಕಾರದ ವಿರುದ್ದ ಸಿಗುವ ಎಲ್ಲಾ ಅಸ್ತ್ರಗಳನ್ನೂ ಪ್ರಯೋಗಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಈಗ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ರಾಜ್ಯಾದ್ಯಂತ ಎರಡು ಗಂಟೆಗಳ ಕಾಲ ಬಂದ್ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಡಿಕೆಶಿ, "ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಎರಡು ಗಂಟೆಗಳ ಕಾಲ ಬಂದ್ ನಡೆಸಲು ನಾವು ಈ ಮೂಲಕ ಕರೆ ನೀಡುತ್ತಿದ್ದೇವೆ. ಬೆಳಗ್ಗೆ ಒಂಬತ್ತು ಗಂಟೆಯಿಂದ ಹನ್ನೊಂದು ಗಂಟೆಯವರೆಗೆ ಬಂದ್ ನಡೆಸುವ ಮೂಲಕ ನಾವು ಪ್ರತಿಭಟನೆಯನ್ನು ಮಾಡುತ್ತಿದ್ದೇವೆ"ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಎಲ್ಲಾ ವ್ಯಾಪಾರಿದಾರರು ಈ ಸಮಯದಲ್ಲಿ ಮಾತ್ರ ನಮಗೆ ಸಹಕಾರವನ್ನು ಕೊಡಬೇಕು ಎಂದು ನಾವು ವಿನಂತಿ ಮಾಡಿಕೊಳ್ಳುತ್ತಿದ್ದೇವೆ. ಎಲ್ಲರೂ ಇದಕ್ಕೆ ಸಹಕರಿಸಬೇಕು ಮತ್ತು ಅಹಿತಕರ ಘಟನೆ ನಡೆಯದಂತೆ ಮುತುವರ್ಜಿ ವಹಿಸಬೇಕು ಎಂದು ಡಿ.ಕೆ.ಶಿವಕುಮಾರ್ ಈ ಸಂದರ್ಭದಲ್ಲಿ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
"ಕಾನೂನನ್ನು ಕೈಗೆತ್ತಿಕೊಳ್ಳುವ ಕೆಲಸಗಳನ್ನು ಯಾರೂ ಮಾಡಬಾರದು. ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡಲು ಎಲ್ಲಾ ವರ್ತಕರು, ಸಾರ್ವಜನಿಕರು, ಸಂಘ ಸಂಸ್ಥೆಯವರು ನಮಗೆ ಬೆಂಬಲವನ್ನು ನೀಡಬೇಕು. ಇದಕ್ಕೆ ನಿಮ್ಮ ಸಹಕಾರ ಬೇಕೆಂದು ಕೈಮುಗಿದು ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ"ಎಂದು ಡಿಕೆಶಿ ಹೇಳಿದರು.
ರಾಜ್ಯದ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಮತ್ತು ಇತರ ತುರ್ತು ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ಕೆಪಿಸಿಸಿ ತೀರ್ಮಾನಿಸಿದೆ. ಮಾಡಾಳ್ ವಿರೂಪಾಕ್ಷಪ್ಪ ಕುಟುಂಬದ ಮೇಲೆ ಲೋಕಾಯುಕ್ತ ದಾಳಿಯಿಂದ ವಿಚಲಿತಗೊಂಡಿರುವ ಬಿಜೆಪಿಗೆ, ಕಾಂಗ್ರೆಸ್ಸಿನ ಈ ಹೊಸ ಅಸ್ತ್ರ ಪ್ರಯೋಗದಿಂದ ಮತ್ತಷ್ಟು ತಲೆನೋವಾಗುವ ಸಾಧ್ಯತೆಯಿಲ್ಲದಿಲ್ಲ.

"ಮೊದಲು ಕಾಂಗ್ರೆಸ್ಸಿನವರು ತಮ್ಮ ಪಕ್ಷದ ಕಚೇರಿಗೆ ಬೀಗ ಹಾಕಲಿ, ರಾಹುಲ್ ಗಾಂಧಿ ಯಾವ ವಿಚಾರಕ್ಕಾಗಿ ಜಾಮೀನು ತೆಗೆದುಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಯಾವ ಕಾರಣಕ್ಕಾಗಿ ತಿಹಾರ್ ಜೈಲಿಗೆ ಹೋಗಿ ಬಂದರು ಎನ್ನುವುದು ಜನರಿಗೆ ಗೊತ್ತಿದೆ"ಎಂದು ಕಾಂಗ್ರೆಸ್ ಬಂದ್ ಕರೆಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.












Click it and Unblock the Notifications