ಆರು ತಿಂಗಳಲ್ಲಿ ಎರಡು ರಾಜ್ಯಗಳನ್ನು ವಶಪಡಿಸಿಕೊಂಡ ಕಾಂಗ್ರೆಸ್: ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಸಾಮಾರ್ಥ್ಯಕ್ಕೆ ಹಿಡಿದ ಕನ್ನಡಿ
ಬೆಂಗಳೂರು, ಮೇ 19: ಬಿಜೆಪಿಯನ್ನು ಭಾರಿ ಅಂತರದಿಂದ ಸೋಲಿಸಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ವಶಪಡಿಸಿಕೊಂಡಿದೆ. ಕಳೆದ ಆರು ತಿಂಗಳಿಂದ ಕೇಸರಿ ಪಕ್ಷದೊಂದಿಗೆ ನೇರ ಹಣಾಹಣಿಯಲ್ಲಿ ತೊಡಗಿರುವ ಕಾಂಗ್ರೆಸ್ ಎರಡು ರಾಜ್ಯಗಳನ್ನು ತನ್ನದಾಗಿಸಿಕೊಳ್ಳುವಲ್ಲಿ ಸಫಲವಾಗಿದೆ.
ದೇಶದ ಪ್ರತಿಷ್ಠಿತ ರಾಜ್ಯವಾದ ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ಸಿಗೆ ಈಗ ಹೊಸ ಹುರುಪು ಸಿಕ್ಕಿದೆ. ಇದೆಲ್ಲವೂ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ನಡೆದಿರುವುದು ಇಲ್ಲಿ ಗಮನಿಸಬೇಕಿರುವ ಮಹತ್ವದ ಸಂಗತಿಯಾಗಿದೆ.

ಕಳೆದ ವರ್ಷದ ಡಿಸೆಂಬರ್ನಲ್ಲಿ ಹಿಮಾಚಲ ಪ್ರದೇಶವನ್ನು ಕಾಂಗ್ರೆಸ್ ವಶಪಡಿಸಿಕೊಂಡಿತು. ಅಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಸೋಲಿಸಿತು. ಹಿಮಾಚಲ ಪ್ರದೇಶದ 68 ಕ್ಷೇತ್ರಗಳಲ್ಲಿ 40 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತು. 2017ರಲ್ಲಿ 44 ಸ್ಥಾನಗಳನ್ನು ಪಡೆಯುವಲ್ಲಿ ಸಫಲವಾಗಿದ್ದ ಬಿಜೆಪಿ 44 ಸ್ಥಾನಗಳಿಂದ 25ಕ್ಕೆ ಕುಸಿದಿದೆ.
ಕರ್ನಾಟಕದಲ್ಲಿ ಇತಿಹಾಸದಲ್ಲಿ ಕಾಂಗ್ರೆಸ್ ಎರಡನೇ ಬಾರಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿದೆ. 1989ರಲ್ಲಿ 178 ಸ್ಥಾನಗಳನ್ನು ಗೆದ್ದುಕೊಂಡಿದ್ದು ಪಕ್ಷದ ಅತ್ಯುತ್ತಮ ಸಾಧನೆ. ಹತ್ತು ವರ್ಷಗಳ ನಂತರ 1999 ರಲ್ಲಿ ಪಕ್ಷವು 132 ಸ್ಥಾನಗಳನ್ನು ಗೆದ್ದಿತ್ತು. 2018 ಕ್ಕೆ ಹೋಲಿಸಿದರೆ ಶೇ 5ರಷ್ಟು ಮತಪ್ರಮಾಣವನ್ನು ಹೆಚ್ಚಿಸುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಶೇ 43 ರಷ್ಟು ಮತಗಳನ್ನು ಈ ಬಾರಿ ಕಾಂಗ್ರೆಸ್ ಗಳಿಸಿಕೊಂಡಿದೆ.

ಈ ಗೆಲುವಿನೊಂದಿಗೆ ರಾಜಸ್ಥಾನ, ಛತ್ತೀಸ್ಗಢ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 2024 ರ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ಗೆ ಈ ಗೆಲುವು ಭಾರೀ ಹುರುಪನ್ನು ತುಂಬಿದೆ.
ಕನ್ನಡಿಗ ಖರ್ಗೆ ಪವರ್
ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ವರ್ಷದ ಅಕ್ಟೋಬರ್ನಲ್ಲಿ ಅಧಿಕಾರ ವಹಿಸಿಕೊಂಡರು. ಡಿಸೆಂಬರ್ನಲ್ಲಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಮುನ್ನೆಡೆಸಿದರು. ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಿಗೆ ಚುನಾವಣೆಗಳು ನಡೆದು ಹಿಮಾಚಲ ಪ್ರದೇಶವನ್ನು ಕಾಂಗ್ರೆಸ್ ವಶಪಡಿಸಿಕೊಂಡಿತು. ಅಲ್ಲಿಯೂ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಇತ್ತು. ಅದನ್ನು ಬಗೆಹರಿಸಿದ ಮಲ್ಲಿಕಾರ್ಜುನ ಖರ್ಗೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅನ್ನು ಸಲೀಸಾಗಿ ಅಧಿಕಾರದ ಗದ್ದುಗೆಗೆ ಏರಿಸಿದರು.

ಇನ್ನು ಕರ್ನಾಟಕದಲ್ಲಿ ಅಭೂತಪೂರ್ವ ಯಶಸ್ಸನ್ನು ಕಾಂಗ್ರೆಸ್ ಗಳಿಸಿದೆ. ಕಲ್ಯಾಣ ಕರ್ನಾಟಕದವರಾದ ಖರ್ಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸಿದರು. ನಿರೀಕ್ಷೆಯಂತೆಯೇ ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ ಸಾಧನೆ ಮಾಡಿದೆ.
ಫಲಿತಾಂಶದ ಬಳಿಕ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಇದನ್ನು ಬಗೆಹರಿಸಿರುವ ಖರ್ಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ. ಬಹುದೊಡ್ಡ ಸಮಸ್ಯೆಯೊಂದನ್ನು ಖರ್ಗೆ ಬಗೆ ಹರಿಸಿದ್ದಾರೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಸಾಮರ್ಥ್ಯವನ್ನು ಸಾಭೀತು ಪಡಿಸಿದ್ದಾರೆ.












Click it and Unblock the Notifications