ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ, ಶಾಸಕರು ರೆಸಾರ್ಟ್ಗೆ
ಬೆಂಗಳೂರು, ಜನವರಿ 18 : ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ನಾಲ್ವರು ಶಾಸಕರು ಸಭೆಗೆ ಗೈರಾಗಿದ್ದು, 76 ಶಾಸಕರು ಹಾಜರಾಗಿದ್ದರು.
ಶುಕ್ರವಾರ ಸಂಜೆ 4.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಯಿತು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಧ್ಯಾಹ್ನ 3.30ಕ್ಕೆ ಶಾಸಕಾಂಗ ಪಕ್ಷದ ಸಭೆಯನ್ನು ನಿಗದಿ ಮಾಡಲಾಗಿತ್ತು. ಆದರೆ, ಬಿ.ಸಿ.ಪಾಟೀಲ್ ಪುತ್ರಿಯ ವಿವಾಹ ಸಮಾರಂಭ, ಎಚ್.ಕೆ.ಪಾಟೀಲ ಪದಗ್ರಹಣ ಸಮಾರಂಭದ ಕಾರಣದಿಂದಾಗಿ ಒಂದುಗಂಟೆ ತಡವಾಗಿ ಸಭೆ ಆರಂಭವಾಯಿತು.
ಇಬ್ಬರು ಶಾಸಕರು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿ ಗೈರಾಗಿದ್ದರು. ಆದರೆ, ರಮೇಶ್ ಜಾರಕಿಹೊಳಿ ಮತ್ತು ಅಥಣಿ ಶಾಸಕ ಮಹೇಶ್ ಕಮಟಳ್ಳಿ ಅವರು ಯಾವುದೇ ಮಾಹಿತಿ ನೀಡದೆ ಸಭೆಗೆ ಗೈರು ಹಾಜರಾಗಿದ್ದರು.
















Click it and Unblock the Notifications