ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹದ ಕೇಸ್ ಹಾಕಲು ಕಾಂಗ್ರೆಸ್ ಒತ್ತಾಯ
ಬೆಂಗಳೂರು, ಫೆಬ್ರವರಿ 16; "ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆ" ಎಂಬ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಉಭಯ ಸದನಗಳಲ್ಲಿ ಚರ್ಚೆ ನಡೆಸಲು ಮುಂದಾಗಿದೆ.
ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ನಿಲುವಳಿ ಸೂಚನೆ ಮಂಡನೆ ಮಾಡಲು ಕಾಂಗ್ರೆಸ್ ಸಿದ್ಧವಾಗಿದೆ. ಚರ್ಚೆ ಮಾಡಲು ಅವಕಾಶ ನೀಡದಿದ್ದರೆ ಅಹೋರಾತ್ರಿ ಧರಣಿ ನಡೆಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ.
ಕೆ. ಎಸ್. ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಮತ್ತು ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲು ಮಾಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಈ ಕುರಿತು ಹೋರಾಟ ಮಾಡಲು ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ನಿಲುವಳಿ ಸೂಚನೆ; ರಾಜ್ಯದಲ್ಲಿ ಇತ್ತೀಚೆಗೆ ತಲೆದೋರಿರುವ ಕಾಲೇಜು ವಿದ್ಯಾರ್ಥಿಗಳ ಸಮವಸ್ತ್ರದ ವಿಚಾರವಾಗಿ ವಿದ್ಯಾರ್ಥಿಗಳ ಸಣ್ಣ ಗುಂಪೊಂದು ಯಾರದೊ ಚಿತಾವಣೆಗೆ ಒಳಗಾಗಿ ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಧ್ವಂಜ ಸ್ತಂಭದ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಜಾಗದಲ್ಲಿ ಕೇಸರಿ ಧ್ವಜವನ್ನು ಹಾರಿಸಿದ್ದರು.
ಈ ಘಟನೆಯನ್ನು ಇಡೀ ದೇಶದ ಪ್ರಜ್ಞಾವಂತ ನಾಗರಿಕರು ಖಂಡಿಸಿದ್ದರು ಮತ್ತು ವಿದ್ಯಾರ್ಥಿಗಳ ವರ್ತನೆ ಕುರಿತು ಆಘಾತ ವ್ಯಕ್ತಪಡಿಸಿದ್ದರು. ಆದರೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪನವರು ದೇಶದ ಹೆಮ್ಮೆಯ, ಸಾರ್ವಭೌಮತೆಯ ಸಂಕೇತವಾದ ರಾಷ್ಟ್ರ ಧ್ವಜದ ಬದಲಿಗೆ 'ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜವನ್ನು ಹಾರಿಸುತ್ತೇವೆ' ಎಂದು ಹೇಳಿಕೆ ಕೊಟ್ಟಿದ್ದಾರೆ.
ಇದು ಸ್ಪಷ್ಟವಾಗಿ ರಾಷ್ಟ್ರ ದ್ರೋಹ ಪ್ರಕರಣವಾಗಿದೆ. ರಾಷ್ಟ್ರದ ಐಕ್ಯತೆ ಮತ್ತು ಸಾರ್ವಭೌಮತೆಯ ಮೇಲಿನ ದಾಳಿಯಾಗಿದೆ. ಮತ್ತು ದ ಪ್ರಿವೆಕ್ಷನ್ ಆಫ್ ಇನ್ಸಲ್ಟ್ ಟು ನ್ಯಾಷನಲ್ ಹಾನರ್ ಕಾಯ್ದೆ 1971ರ ಸ್ಪಷ್ಟ ಉಲ್ಲಂಘನೆಯಾಗಿದೆ. ಇಷ್ಟಾದರೂ ಸಹ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಸಚಿವ ಈಶ್ವರಪ್ಪ ವಿರುದ್ಧ ಇದುವರೆಗೂ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ.
ದೇಶದ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಈಶ್ವರಪ್ಪ ನಮ್ಮ ಸಂವಿಧಾನದ ಆಶಯಗಳಿಗೆ ದ್ರೋಹ ಎಸಗಿದ್ದಾರೆ. ಇವರ ಮೇಲೆ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕಾದ ಸರ್ಕಾರ ಮೌನವಾಗಿದೆ.
ಸರ್ಕಾರದ ಮೌನವು ಈಶ್ವರಪ್ಪನವೆ ಹೇಳಿಕೆಯನ್ನು ಸಮರ್ಥಿಸುವಂತೆ ಇದೆ. ಆದ್ದರಿಂದ ಈ ಕುರಿತು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 60ನೇ ನಿಯಮದಡಿ ಸದನದಲ್ಲಿ ವಿಷಯ ಪ್ರಸ್ತಾಪಿಸಲು ನಿಲುವಳಿ ಸೂಚನೆಯನ್ನು ಕೊಡುತ್ತೇನೆ ಎಂದು ಕಾಂಗ್ರೆಸ್ ಹೇಳಿದೆ.
ಸಿದ್ದರಾಮಯ್ಯ ಹೇಳಿಕೆ; "ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳುವ ಮೂಲಕ ಕೆ. ಎಸ್. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
"ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿ ಕಳಿಸಿದವರೇ ಇವರು. ಈಶ್ವರಪ್ಪ ಮೇಲೆ ಕ್ರಮ ತೆಗೆದುಕೊಂಡು ಕೇಸು ಹಾಕಬೇಕು. ಕೇಂಪುಕೋಟೆ ಮೇಲೆ ಕೇಸರಿ ಧ್ವಜ ಹಾಕೋದಾಗಿ ಹೇಳಿದ್ದರು" ಎಂದರು.
ಈಶ್ವರಪ್ಪ ವಿರುದ್ಧ ನಿಲುವಳಿ ಸೂಚನೆ ಮಂಡನೆ ಮಾಡಲು ಸ್ಪೀಕರ್ ಅವಕಾಶ ನೀಡಿಲ್ಲ. ಇದನ್ನು ಕಾಂಗ್ರೆಸ್ ಖಂಡಿಸಿದ್ದು, ಅಹೋರಾತ್ರಿ ಧರಣಿ ಆರಂಭಿಸಲು ತೀರ್ಮಾನ ಮಾಡಿದೆ.












Click it and Unblock the Notifications