ಬೆಂಕಿ ಹಚ್ಚಲು ಕಾರ್ಯಕರ್ತರಿಗೆ ಕರೆ ಕೊಡಬೇಕಾದೀತು: ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದು ಯಾರಿಗೆ?
ಬೆಂಗಳೂರು, ಮಾರ್ಚ್ 19: ಚುನಾವಣಾ ಆಯೋಗಕ್ಕೆ ನನ್ನ ನೇರ ಆಗ್ರಹ ಇಷ್ಟೇ. ಕೂಡಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ತಪ್ಪಿದರೆ ನಾನೇ ಕಾರ್ಯಕರ್ತರರಿಗೆ ಕರೆ ಕೊಡಬೇಕಾಗುತ್ತದೆ. ಕುಕ್ಕರ್ ಎಲ್ಲೆಲ್ಲಿ ಅಡಗಿಸಿಟ್ಟಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅಲ್ಲಿಗೆ ಹೋಗಿ ಬೆಂಕಿ ಹಚ್ಚಿ ಅಂತ ನಮ್ಮ ಕಾರ್ಯಕರ್ತರಿಗೆ ಕರೆ ಕೋಡಬೇಕಾಗುತ್ತದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಆಮೇಲೆ ಕಾರ್ಯಕರ್ತರ ಮೇಲೆ ಈ ಅಧಿಕಾರಿಗಳು ಕೇಸ್ ದಾಖಲಿಸಲಿ ನೋಡೋಣ ಎಂದು ಎಚ್ಚರಿಕೆ ನೀಡಿದರು.

ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೂ ಗೊತ್ತಿದೆ ಮಿಸ್ಟರ್ ಡಿ.ಕೆ.ಶಿವಕುಮಾರ್. 2002ರ ಚುನಾವಣೆಯನ್ನು ನಿಮಗೆ ನೆನಪು ಮಾಡಿಕೊಡುತ್ತೇನೆ. ಮೈಸೂರು, ಶಿಡ್ಲಘಟ್ಟ, ದೇವನಹಳ್ಳಿ ಕಡೆಯಿಂದ ನೀವು ಜನರನ್ನು ಕರೆದುಕೊಂಡು ಬಂದು ಕಳ್ಳ ವೋಟು ಹಾಕಿಸಿದ್ದು ಮರೆತಿದ್ದೀರಾ? ಕಳ್ಳ ಮತ ಹಾಕಿಸಲು ಕರೆದುಕೊಂಡು ಬಂದಾಗ ರಾಜರಾಜೇಶ್ವರಿ ನಗರದ ಹೆಬ್ಬಾಗಿಲಲ್ಲಿ ನಾನು ನಿಮ್ಮವರನ್ನು ಚಡ್ಡಿಯಲ್ಲಿ ಕೂರಿಸಿದ್ದನ್ನು ಮರೆಯಬೇಡಿ. ನನಗೆ ಚುನಾವಣೆ ಮಾಡುವುದು ಬರುವುದಿಲ್ಲ ಎಂದುಕೊಳ್ಳಬೇಡಿ. ಫೀಲ್ಡಿಗೆ ಇಳಿದರೆ ನಿಮಗಿಂತ ಚೆನ್ನಾಗಿ ಚುನಾವಣೆ ಮಾಡಬಲ್ಲೆ. ಆಗ ನೀವು ಅಧಿಕಾರದಲ್ಲಿ ಇದ್ದಿರಿ. ದೇವೇಗೌಡರನ್ನು ಸೋಲಿಸಲು ಪ್ತಯತ್ನ ಮಾಡಿದಿರಿ. ಆಸ್ಪತ್ರೆಯಿಂದ ನಾನು ವಾಪಸ್ ಬರ್ತಿನಿ, ಅದುವರೆಗೂ ನಿಮ್ಮ ಆಟ ನಡೆಯಲಿ ನೋಡೋಣ ಎಂದ ಕುಮಾರಸ್ವಾಮಿ ಟಾಂಗ್ ಕೊಟ್ಟರು.
ನಿಮಗೆ ನಾಚಿಕೆ ಆಗಬೇಕು. ಐದು ಗ್ಯಾರಂಟಿ ಕೊಟ್ಟಿದ್ದೇವೆ ಎಂದು ದಿನವೂ ಹೇಳಿದ್ದೇ ಹೇಳಿದ್ದು. ಮಿಸ್ಟರ್ ಸಿದ್ದರಾಮಯ್ಯ.. ನಿಮ್ಮ ಎರಡು ಸಾವಿರ ರೂಪಾಯಿ ಸಾಮಾನ್ಯ ಜನರ ಜೀವ ಉಳಿಸುತ್ತಿದೆ ಎಂದಾದರೆ ಈಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಕ್ಕರ್ʼಗಳನ್ನು ಯಾಕೆ ಹಂಚಿಕೆ ಮಾಡುತ್ತಿದ್ದೀರಿ? ನಿಮ್ಮ ಪಕ್ಷಕ್ಕೆ, ನಿಮಗೆ ನಾಚಿಕೆ ಎನ್ನುವುದು ಏನಾದರೂ ಇದೆಯಾ? ಎಂದು ಕಿಡಿಕಾರಿದರು.
ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ಸೋಮವಾರ ನಮ್ಮ ಪಕ್ಷದ ಕೋರ್ ಕಮಿಟಿ ಸದಸ್ಯರು ವ್ಯಕ್ತಪಡಿಸಿದ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ. ನಮ್ಮ ಪಕ್ಷದಿಂದ 28 ಲೋಕಸಭೆ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಹೋಗಬೇಕು ಎಂದು ಹೇಳಿದ್ದೆವು. ಆ ಸಭೆಯಲ್ಲಿ ಪ್ರಮುಖವಾಗಿ ಏನೇನು ಚರ್ಚೆ ಆಗಿತ್ತು ಎಂಬುದನ್ನು ಮಾಧ್ಯಮಗಳ ಮೂಲಕ ಹೇಳಿದ್ದೇನೆ. ಅಂದ ಮಾತ್ರಕ್ಕೆ ನಮಗೆ ಬಿಜೆಪಿ ಮೇಲೆ ವಿಶ್ವಾಸ ಹೋಗಿದೆ ಅಂತ ಅಲ್ಲ.
ಆರಂಭದಿಂದಲೂ ನಾವು 3 ಕ್ಷೇತ್ರಗಳನ್ನು ಕೇಳಿದ್ದೇವೆ. ಅದನ್ನು ಹೊರತುಪಡಿಸಿದರೆ ಬಿಜೆಪಿಯವರು ನಮ್ಮನ್ನು ಗೌರವಯುತವಾಗಿ ಕಂಡಿದ್ದಾರೆ. ಇದನ್ನೇ ಕಾಂಗ್ರೆಸ್ಪಕ್ಷದ ಸೋಕಾಲ್ಡ್ ಟ್ರಬಲ್ ಶೂಟರ್, ಹಿಂದೆ ನಮ್ಮ ಮೈತ್ರಿ ಸರಕಾರವನ್ನು ತೆಗೆದಿದ್ದವರು ನಮ್ಮ ಕಾರ್ಯಕರ್ತರ ಬಗ್ಗೆ ಅನುಕಂಪದ ಮಾತನ್ನಾಡಿದ್ದಾರೆ. ಯಾವನಿಗೆ ಬೇಕು ಇವರ ಅನುಕಂಪ? ನಮ್ಮ ಕಾರ್ಯಕರ್ತರಿಗೆ ಎಲ್ಲವನ್ನೂ ಎದುರಿಸುವ ಶಕ್ತಿ ಇದೆ ಎಂದು ಡಿ.ಕೆ.ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಬಿಜೆಪಿಯಲ್ಲಿ ನನಗೆ ಗೌರವ ಕೊಟ್ಟಿದ್ದಾರೆ. ಅವರು ನಿಮ್ಮ ಹಾಗೆ ನನ್ನ ಕುತ್ತಿಗೆ ಕೋಯ್ದಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ತೋಳ್ಬಲ, ಧನಬಲ, ಅಧಿಕಾರ ಬಲದಿಂದ ಮೆರೆಯಿತ್ತಿದ್ದೀರಿ. ನನ್ನ ಪಕ್ಷದ ಶಾಸಕರನ್ನು ಸೆಳೆಯೋದಕ್ಕೆ ನೀವು ಏನೆಲ್ಲ ಮಾಡಿದ್ದಿರಿ ಎನ್ನುವುದು ಗೊತ್ತಿದೆ ನನಗೆ. ಇವತ್ತಿಗೂ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಲೇ ಇದ್ದೀರಿ. ನೀವು ನಮ್ಮನ್ನು ಮುಗಿಸಲು ಹಂತ ಹಂತವಾಗಿ ಏನೆಲ್ಲಾ ಮಾಡುತ್ತಿದ್ದೀರಾ ಎನ್ನುವ ಮಾಹಿತಿ ನನಗೆ ಇದೆ. ಜನರೇ ನಿಮಗೆ ತಕ್ಕ ಶಾಸ್ತಿ ಮಾಡುವ ದಿನಗಳು ಹತ್ತಿರಕ್ಕೆ ಬಂದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ ಕ್ಷೇತ್ರದಲ್ಲಿ ಕೂಡ ಒಂದು ಕೋಟಿ ರೂಪಾಯಿ ಸೀಜ್ ಆಗಿದೆ. ಈ ಹಣ ಅಡಿಕೆ ವ್ಯಾಪಾರದ್ದು ಎಂದು ಹೇಳಿಕೊಂಡಿದ್ದಾರೆ. ನಮ್ಮ ಮಂಡ್ಯ ಜಿಲ್ಲೆಯಲ್ಲಿ ಅಷ್ಟು ಹಣ ದುಡಿಯುವ ಅಡಿಕೆ ವ್ಯಾಪಾರಿಗಳಿದ್ದಾರಾ? ಎಂದು ನನಗೆ ಅಚ್ಚರಿ ಉಂಟಾಯಿತು. ಇದು ಕೂಡ ಕಾಂಗ್ರೆಸ್ಅಭ್ಯರ್ಥಿ ಹಣವೇ ಆಗಿದೆ. ಅಲ್ಲಿಯೂ ಕಾಂಗ್ರೆಸ್ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.












Click it and Unblock the Notifications