ಡಿ.27ರಿಂದ ಡಾ.ಜಿ.ಪರಮೇಶ್ವರ ರಾಜ್ಯ ಪ್ರವಾಸ
ಬೆಂಗಳೂರು, ಡಿಸೆಂಬರ್. 13 : ಬಸವ ಕಲ್ಯಾಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರವಾಸಕ್ಕೆ ಇಂದು ಚಾಲನೆ ನೀಡಿದ್ದಾರೆ. ಡಿ.27ರಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ.
ಡಾ.ಜಿ.ಪರಮೇಶ್ವರ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. '2013ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸೋತ ಕ್ಷೇತ್ರಗಳಲ್ಲಿ ಪ್ರಚಾರ ನಡೆಯಲಿದೆ. ಈ ಪ್ರಚಾರ ಕಾರ್ಯಕ್ಕೆ ಡಿ.27ರಂದು ಚಾಲನೆ ನೀಡಲಾಗುತ್ತದೆ' ಎಂದು ಹೇಳಿದರು.
'ನವ ಕರ್ನಾಟಕ ನಿರ್ಮಾಣಕ್ಕಾಗಿ' ಸಿದ್ದರಾಮಯ್ಯ ರಾಜ್ಯ ಪ್ರವಾಸ
ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ಬಳಿಕ ಅವರನ್ನು ಕರ್ನಾಟಕಕ್ಕೆ ಕರೆಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಬೆಂಗಳೂರು ಅಥವ ಚಿಕ್ಕಮಗಳೂರಿಗೆ ರಾಹುಲ್ ಗಾಂಧಿ ಆಗಮಿಸಲಿದ್ದು, ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಅಂದು ಬಳ್ಳಾರಿ ಪಾದಯಾತ್ರೆ, ಇಂದು 'ನವ ಕರ್ನಾಟಕ ನಿರ್ಮಾಣ' ಯಾತ್ರೆ!
'ಡಿಸೆಂಬರ್ 16ರಂದು ರಾಹುಲ್ ಗಾಂಧಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಅಂದು ನಾನು ದೆಹಲಿಗೆ ತೆರಳುತ್ತೇನೆ. ನಂತರ ಕರ್ನಾಟಕಕ್ಕೆ ಆಗಮಿಸುವ ದಿನಾಂಕವನ್ನು ಖಚಿತಪಡಿಸಿಕೊಂಡು ಸಮಾವೇಶ ಆಯೋಜನೆ ಮಾಡಲಾಗುತ್ತದೆ' ಎಂದು ಪರಮೇಶ್ವರ ಹೇಳಿದರು.
ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಕಡೆ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಪ್ರವಾಸ ನಡೆಸಿ 2018ರ ಚುನಾವಣೆಗೆ ಪ್ರಚಾರ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರ ರಾಜ್ಯ ಪ್ರವಾಸಕ್ಕೆ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಇಂದು ಚಾಲನೆ ಸಿಕ್ಕಿದೆ.