ಐಟಿಗೆ ಕಾಂಗ್ರೆಸ್ ದೂರು, ಯಾವ ಬಿಜೆಪಿ ನಾಯಕರ ಹೆಸರುಗಳಿವೆ?
ಬೆಂಗಳೂರು, ಸೆಪ್ಟೆಂಬರ್ 14 : ಆಪರೇಷನ್ ಕಮಲದ ಹೆಸರಿನಲ್ಲಿ ಬಿಜೆಪಿ ಕಾಂಗ್ರೆಸ್ ಶಾಸಕರಿಗೆ ಕೋಟಿ-ಕೋಟಿ ಹಣದ ಆಮಿಷವೊಡ್ಡುತ್ತಿದೆ. ಈ ಕುರಿತು ಕಾಂಗ್ರೆಸ್ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದು, ಕ್ರಮ ಕೈಗೊಳ್ಳಲು ಮನವಿ ಮಾಡಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಶುಕ್ರವಾರ ಮಧ್ಯಾಹ್ನ ಆದಾಯ ತೆರಿಗೆ ಇಲಾಖೆಗೆ ಬಿಜೆಪಿ ನಾಯಕರ ವಿರುದ್ಧ ದೂರು ನೀಡಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರ ಹೆಸರುಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ಕಾನೂನು ಬಾಹಿರವಾಗಿ ಪ್ರಯತ್ನ ನಡೆಸಿದೆ. ಕಾಂಗ್ರೆಸ್ ಶಾಸಕರಿಗೆ ಹಣ ಮತ್ತು ಇತರ ಸ್ಥಾನಗಳ ಆಮಿಷವೊಡ್ಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಕಾಂಗ್ರೆಸ್ ಶಾಸಕರಾದ ಎಂ.ಶಿವಣ್ಣ, ಎಂ.ಟಿ.ಬಿ.ನಾಗರಾಜ್, ಸಿ.ಎಸ್.ಶಿವಳ್ಳಿ, ಬಿ.ಎಸ್.ಪಾಟೀಲ್, ಬಸವನಗೌಡ ಅವರಿಗೆ ಬಿಜೆಪಿ ಆಮಿಷವೊಡ್ಡಿದೆ ಎಂದು ಕಾಂಗ್ರೆಸ್ ದೂರಿನಲ್ಲಿ ಹೇಳಿದೆ... ದೂರಿನಲ್ಲೇನಿದೆ? ಚಿತ್ರಗಳಲ್ಲಿ ವಿವರ...

ಬಿ.ಎಸ್.ಯಡಿಯೂರಪ್ಪ ಮತ್ತಿತರರು
ಕಾಂಗ್ರೆಸ್ ತನ್ನ ದೂರಿನಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಮಲ್ಲೇಶ್ವರ ಕ್ಷೇತ್ರದ ಶಾಸಕ ಡಾ.ಅಶ್ವಥ ನಾರಾಯಣ, ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ ಅವರ ಹೆಸರನ್ನು ಉಲ್ಲೇಖಿಸಿದೆ.

ಬಿಜೆಪಿ ಸರ್ಕಾರಕ್ಕೆ ಬಹುಮತ ಬರಲಿಲ್ಲ
2018ರ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಮೇ 12ರಂದು ಫಲಿತಾಂಶ ಪ್ರಕಟವಾಯಿತು. 222 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 37 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. 2 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.
ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರ ರಚನೆ ಮಾಡಿದರು. ಆದರೆ, ಬಹುಮತ ಸಾಬೀತು ಮಾಡಲು ಸಾಧ್ಯವಾಗದ ಕಾರಣ ಸರ್ಕಾರ ಪತನವಾಯಿತು.

ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು
ಮೇ 23ರಂದು ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಎಚ್.ಡಿಕುಮಾರಸ್ವಾಮಿ ಆದರು. ಜಿ.ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾದರು. ಸದನದಲ್ಲಿ ಸಮ್ಮಿಶ್ರ ಸರ್ಕಾರ ಬಹುಮತ ಸಾಬೀತು ಮಾಡಿತು. ಸರ್ಕಾರ ಸೂಸೂತ್ರವಾಗಿ ನಡೆಯುತ್ತಿದೆ.
ಐಟಿಗೆ ದೂರು ನೀಡಿದ ಚಿತ್ರ

ಅಸ್ಥಿರಗೊಳಿಸುವ ಪ್ರಯತ್ನ
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಇತರ ನಾಯಕರು ಸೇರಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಹಲವು ಶಾಸಕರಿಗೆ ಆಮಿಷಗಳನ್ನು ವೊಡ್ಡುತ್ತಿದ್ದಾರೆ.
ಈ ಬಗ್ಗೆ ಪತ್ರಿಕೆಗಳಲ್ಲಿ, ಟಿವಿ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗಿವೆ. ಆಮಿಷವೊಡ್ಡಲು ಹಣ ಎಲ್ಲಿಂದ ಬಂತು ಎಂದು ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ದೂರಿನಲ್ಲಿ ಮನವಿ ಮಾಡಿದೆ.












Click it and Unblock the Notifications