Cauvery: ತಮಿಳುನಾಡಿಗೆ ಕಾವೇರಿ ನೀರು, ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
ಬೆಂಗಳೂರು, ಆಗಸ್ಟ್ 16: ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು CWMA ಸಭೆಯಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಇತ್ತೀಚೆಗೆ ಕಾವೇರಿ ನೀರು ಹಂಚಿಕೆ ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ತಮಿಳುನಾಡು ಹೆಚ್ಚು ನೀರು ಬಳಸಿಕೊಂಡ ಬೆನ್ನಲ್ಲೆ ಡಿಸಿಎಂ ಡಿಕೆ ಶಿವಕುಮಾರ್ ಅವರು ನಾವು ನೀರು ಬಿಡುತ್ತೇವೆ. ಆದರೆ ಮೇಕೆದಾಟು ಯೋಜನೆಗೆ ಅಡ್ಡಿಪಡಿಸದೇ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಬಸವರಾಜ ಬೊಮ್ಮಾಯಿ ಅವರು ಬುಧವಾರ ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಲಾಯಿತು. ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದುಕೊಂಡಿದ್ದೀರಿ ಎಂದು ಹರಿಹಾಯ್ದರು.
ಸಿಎಂ @siddaramaiah ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ @DKShivakumar ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿರುವುದು, ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ.
— Basavaraj S Bommai (@BSBommai) August 16, 2023
3/4
ಕಾವೇರಿ ನೀರಿನ ಪಾಲಿನ ರಕ್ಷಣೆ ಆಗುತ್ತಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಡಲಾಗಿದೆ. ಇದನ್ನು ನೋಡಿದಂತೆ ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ ಎಂಬುದು ಗೊತ್ತಾಗುತ್ತದೆ.
ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಅವರು ಆಗ್ರಹಿಸಿದರು.
ಇದೇ ವಿಚಾರವಾಗಿ ಈ ಹಿಂದೆ ಪ್ರತಿಕ್ರಿಯಿಸಿದ್ದ ಬೊಮ್ಮಾಯಿ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿಯಮ ಉಲ್ಲಂಘಿಸಿ ತಮಿಳುನಾಡಿನ ಕುರುವೈನಲ್ಲಿ ನಿಯಮ ಮೀರಿ ನಾಲ್ಕು ಪಟ್ಟು ಹೆಚ್ಚು ಬೆಳೆ ಬೆಳೆಯಲಾಗಿದೆ. ಇದರಿಂದ ನಿಗದಿತಕ್ಕಿಂತಲೂ ಹೆಚ್ಚು ಕಾವೇರಿ ನೀರು ಬಳಕೆಯಾಗಿದೆ. ಈ ಸಂಬಂಧ ನಡೆದ CWMA ಸಭೆಯಲ್ಲಿ ಕರ್ನಾಟಕದ ಅಧೀಕಾರಿಗಳು ಮಾತನಾಡಿಲ್ಲ ಎಂದು ಅವರು ತಿಳಿಸಿದ್ದರು.
ಮೇಕದಾಟು ಯೋಜನೆಗೆ ಸಹಕರಿಸಲು ಡಿಕೆಶಿ ಷರತ್ತು
ಸದ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಸಲು ಒಪ್ಪುವ ಜೊತೆಗೆ ಒಂದು ಷರತ್ತನ್ನು ವಿಧಿಸಿದ್ದಾರೆ. ನಿಮಗೆ ನಾವು 10 ಟಿಎಂಸಿ ನೀರು ಹರಿಸುತ್ತೇವೆ. ಆದರೆ ನೀವು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಬೆಳೆಗಳು ಬೆಳೆದು ನಿಂತಿದ್ದು, ನಿತ್ಯ 24000 ಕ್ಯೂಸೆಕ್ ನೀರು ಅಗತ್ಯವಾಗಿದ್ದು, ಆ ನೀರನ್ನು ಕರ್ನಾಟಕ ಬಿಡಲು ಸೂಚನೆ ನೀಡಬೇಕು ಎಂದು ನೆರೆ ರಾಜ್ಯ ಸುಪ್ರೀಂ ಕೋಟ್ ಮೊರೆ ಹೋಗಿದೆ. ಸದ್ಯ ನೀರು ಹಂಚಿಕೆಯಲ್ಲಿ ಸಂಘರ್ಷ ಬೇಡ ಎಂದು ತಿಳಿಸಿರುವ ಡಿಕೆ ಶಿವಕುಮಾರ್ ಷರತ್ತಿಗೆ ತಮಿಳುನಾಡಿನ ಪ್ರತಿಕ್ರಿಯೆ ಏನು ಬರಲಿದೆ ಎಂದು ಕಾದು ನೋಡಬೇಕಿದೆ.












Click it and Unblock the Notifications