ದಲಿತರಿಗೆ ಕಾಂಗ್ರೆಸ್ ಸರ್ಕಾರ ಮಾಡಿರುವ ಅನ್ಯಾಯವನ್ನ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು, ನವೆಂಬರ್ 22: ಎಸ್ಸಿಎಸ್ಪಿ-ಟಿಎಸ್ಪಿ ಬಜೆಟ್ನ ಶೇ 24ರಷ್ಟು ಕೊಡುವುದಾಗಿ ಹೇಳಿದ್ದೀರಿ. 3.25 ಲಕ್ಷ ಕೋಟಿಯ ಬಜೆಟ್ನಡಿ ನೀವೇ ಘೋಷಿಸಿದಂತೆ ಕೊಡುವುದಾದರೆ 72 ಸಾವಿರ ಕೋಟಿ ಕೊಡಬೇಕಿತ್ತು. ಬರಿಯ 34 ಸಾವಿರ ಕೋಟಿ ಕೊಟ್ಟಿದ್ದು, ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡಿದೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದಲಿತರ ಹಣ ಬೇರೆ ಕಡೆ ವರ್ಗಾವಣೆ ಮಾಡುವುದಿಲ್ಲ. 7 ಡಿ ರದ್ದು ಮಾಡುವುದಾಗಿ ಮಹದೇವಪ್ಪ ಹೇಳಿದ್ದರು. ಆದರೆ, ಗ್ಯಾರಂಟಿ ಸ್ಕೀಮಿಗೆ 11,700 ಕೋಟಿಯನ್ನು ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದೀರಿ ಎಂದು ವಾಗ್ದಾಳಿ ನಡಸಿದರು.

7 ಡಿ ರದ್ದು ಮಾಡುವ ಮನಸ್ಸಿದ್ದರೆ 11 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಿ ದಲಿತರಿಗೆ ಮೋಸ ಮಾಡಿದ್ದೇಕೆ? ಇದಕ್ಕೆ ಮೊದಲು ಉತ್ತರ ಕೊಡಿ ಎಂದು ಸರಕಾರ ಮತ್ತು ಸಚಿವರನ್ನು ಒತ್ತಾಯಿಸಿದರು. ದಲಿತರಿಗೆ ಮಾಡಿದ ಮೋಸವನ್ನು ಸಹಿಸಲಾಗದು. ನೀವು ಹೇಳಿದಂತೆ ನಡೆಯುವುದಾದರೆ ನಿಗದಿತ ಯೋಜನೆಗೆ 11,700 ಕೋಟಿ ವಾಪಸ್ ಕೊಡಿ ಎಂದು ಆಗ್ರಹಿಸಿದರು. ನಾವು ಜನರನ್ನು ಎಚ್ಚರಿಸುತ್ತೇವೆ. ನಾವು ಹೋರಾಟ ಮುಂದುವರೆಸುತ್ತೇವೆ. ದಲಿತರಿಗೆ ಕಾಂಗ್ರೆಸ್ ಸರಕಾರ ಬಹಳಷ್ಟು ಅನ್ಯಾಯ ಮಾಡಿದೆ ಎಂದು ತಿಳಿಸಿದರು.
ಕಾಂಗ್ರೆಸ್ನವರಂದು ನುಡಿದಂತೆ ನಡೆದ ಸರಕಾರ ಅಲ್ಲ. ಕಾಂಗ್ರೆಸ್ ಸರಕಾರವು 6 ತಿಂಗಳ ಆಡಳಿತ ಸಂಬಂಧ ಕೊಟ್ಟಿರುವ ಅಂಕಿಅಂಶಗಳು ಪ್ರಶ್ನಾರ್ಥಕವಾಗಿವೆ. ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣೆ ಸಂದರ್ಭದಲ್ಲಿ ಜನರಿಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಕೊಟ್ಟ ಮಾತಿನಂತೆ ಅಥವಾ ನುಡಿದಂತೆ ನಡೆದಿದ್ದೇವೆ ಎಂದು ನಿನ್ನೆ ದೊಡ್ಡ ದೊಡ್ಡ ಜಾಹೀರಾತು ನೀಡಿದ್ದಾರೆ.
ಅಂಕಿಅಂಶಗಳನ್ನೂ ಕೊಟ್ಟಿದ್ದಾರೆ. ಆದರೆ, ಎಷ್ಟೋ ಜನರಿಗೆ ಅಕ್ಕಿಗೆ ಕೊಡುವ ಹಣ ಸಿಕ್ಕಿಲ್ಲ. ಮಹಿಳೆಯರಿಗೆ 2 ಸಾವಿರ ರೂಪಾಯಿ ಒಂದು ಕಂತು ಮಾತ್ರ ಸಿಕ್ಕಿದೆ. ಇನ್ನೂ 3 ತಿಂಗಳು ಬಂದಿಲ್ಲ. ವಿದ್ಯುತ್ 200 ಯೂನಿಟ್ ಎಂದಿದ್ದರು. 200 ಯೂನಿಟ್ ಬದಲು ವರ್ಷದ ಸರಾಸರಿ ಯೂನಿಟ್ ಕೊಡುತ್ತಿದ್ದಾರೆ ಎಂದು ಟೀಕಿಸಿದರು. ಯುವನೀತಿ ಇನ್ನೂ ಪ್ರಾರಂಭಿಸಿಲ್ಲ. ಎಂದು ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಜನರಿಗೆ ತಲುಪುತ್ತಿಲ್ಲ. ಕಾಂಗ್ರೆಸ್ ವೈಫಲ್ಯಗಳನ್ನು ನಾವು ತಿಳಿಸುತ್ತಿದ್ದೇವೆ ಎಂದ ಅವರು, ಬಿಜೆಪಿಯವರು ಕಾಂಗ್ರೆಸ್ ಯೋಜನೆಗಳನ್ನು ನಕಲು ಮಾಡಿಲ್ಲ. ಬದಲಾಗಿ ಕಾಂಗ್ರೆಸ್ಸೇ ನಮ್ಮ ಯೋಜನೆಗಳ ನಕಲು ಮಾಡಿದೆ. ನಾವು 12 ಕೋಟಿ ಶೌಚಾಲಯಗಳನ್ನು ಕಟ್ಟಿಸಿಕೊಟ್ಟಿದ್ದೇವೆ. ಇದು ಸಾಂದರ್ಭಿಕವಾಗಿ ಮಾಡಬೇಕಾದ ಕೆಲಸ. 1.25 ಲಕ್ಷ ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿದ್ದೇವೆ. ಅನೇಕ ಟನೆಲ್ ಮಾಡಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ 6 ಸಾವಿರವನ್ನು ಪ್ರಧಾನಿಯವರು ವರ್ಗಾಯಿಸುತ್ತಿದ್ದಾರೆ. ರಾಜ್ಯದಲ್ಲೂ 4 ಸಾವಿರವನ್ನು ಹಾಕುತ್ತಿದ್ದು, ಅದನ್ನು ನೀವು ಬಂದ್ ಮಾಡಿದ್ದೀರಿ. ಅದು ಗ್ಯಾರಂಟಿ ಎಂದಿಲ್ಲ ಎಂದರು.
ಗರೀಬ್ ಅನ್ನ ಯೋಜನೆಯಡಿ 80 ಕೋಟಿ ಜನರಿಗೆ ಪಡಿತರ ಕೊಡಲಾಗಿದೆ. ಅದೇನೂ ಗ್ಯಾರಂಟಿ ಅಲ್ಲ; ಪ್ರಣಾಳಿಕೆಯಲ್ಲೂ ಇರಲಿಲ್ಲ. 220 ಕೋಟಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ಕೊಡಲಾಯಿತು. ಅದೇನೂ ಗ್ಯಾರಂಟಿ ಯೋಜನೆ ಅಲ್ಲ. ಉಜ್ವಲ ಯೋಜನೆಯಡಿ 9.6 ಕೋಟಿ ಸಿಲಿಂಡರ್ಗಳನ್ನು ಉಚಿತವಾಗಿ ಬಡವರಿಗೆ ನೀಡಿದ್ದೇವೆ. ಅದನ್ನು ಗ್ಯಾರಂಟಿ ಎನ್ನಲಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಗಳು ದೇಶದ ಪ್ರಧಾನಿಯವರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕು. ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದು ಆಗ್ರಹಿಸಿದರು. ಪ್ರಧಾನಿ ಮೋದಿಯವರ ಆಡಳಿತದಡಿ ದೇಶ ಸುಭದ್ರವಾಗಿದೆ. ಅವರ ಕಾರ್ಯಕ್ಕೆ ದೇಶ, ವಿಶ್ವದಲ್ಲೇ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.












Click it and Unblock the Notifications