ಅಕ್ಕಿ ವಿತರಣೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದ ಕಾಂಗ್ರೆಸ್ ಕುಂಟು ನೆಪ: ಬೊಮ್ಮಾಯಿ
ಹುಬ್ಬಳ್ಳಿ, ಜೂನ್ 18: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ನಾಯಕರು ಪರ್ಯಾಯ ವ್ಯವಸ್ಥೆ ಮಾಡುವ ಬದಲಿಗೆ ಕುಂಟು ನೆಪ ಹೇಳುತ್ತಿದ್ದಾರೆ. ಕೇಂದ್ರದ ವಿರುದ್ಧ ಬೆಟ್ಟು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಢ ಶಾಲೆ ಕಟ್ಟಡ ನಿರ್ಮಾಣದ ಭೂಮಿ ಪೂಜೆ ನೇರವೇರಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ರಾಜ್ಯ ಕಾಂಗ್ರೆಸ್ ನವರು ಅಕ್ಕಿ ವಿಷಯವಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಕೇಂದ್ರ ದಿಂದ ಅಕ್ಕಿ ಬರಲ್ಲ ಎಂದು ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಎಂದು ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದಾದರೆ ಸಾಕು ಎಂದು ಅವರು ಟಾಂಗ್ ನೀಡಿದರು.
ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಪ್ರತಿ ತಿಂಗಳೂ ಒಂದನೇ ತಾರೀಕಿಗೆ ರಾಜ್ಯದ ಜನರಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಬರಗಾಲ?: 500 ಹಳ್ಳಿಗೆ ನೀರಿನ ಸಮಸ್ಯೆ
ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಕೆಲವು ವಿಚಾರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಕೆಲವು ತಂದಿದ್ದೇನೆ. ರಾಜ್ಯದಲ್ಲಿ ಮಳೆ ಬಾರದ ಬರಗಾಲ ಸ್ಥಿತಿ ಉಂಟಾಗಿದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದ್ದೆ. ಬರಗಾಲ ಇದ್ದ ಕಡೆ ಟಾಸ್ಕ್ಪೋರ್ಸ್ ರಚನೆ ಮಾಡಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು.

ಚುನಾವಣೆ ಮೊದಲು ಕಾಂಗ್ರೆಸ್ ಗ್ಯಾರಂಟಿ ಯೋಜನಜೆಗಳ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರ್ಕಾರದ ಜನಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರ್ಕಾರ ತಗೆದುಕೊಂಡು ಏನು ಮಾಡಬೇಕು. ಇನ್ನು ಇದೇ ವೇಳೆ ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಳೆದ ಒಂದು ವಾರದ ಹಿಂದೆ ಬೊಮ್ಮಾಯಿ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬರಗಾಲ ಸಂಬಂಧಮೋಡ ಬಿತ್ತನೆಗೆ ಕ್ರಮ ಕೈಗೊಳ್ಳಬೇಕು. ಗ್ಯಾರಂಟಿ ಯೋಜನೆಗಳ ಸಂಬಂಧ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ ಅನುದಾನ ನಿಲ್ಲಿಸಬಾರದು ಎಂದು ಕೆಲವು ವಿಷಯಗಳನ್ನು ಪ್ರಸ್ತಾಪಿಸಿ ಮನವಿ ಮಾಡಿದ್ದಾರೆ.












Click it and Unblock the Notifications